ಉಮೇಶ್ ಜಾಧವ್ಗೆ ನೊಟೀಸ್ ನೀಡಿದ ಸ್ಪೀಕರ್, 25ಕ್ಕೆ ವಿಚಾರಣೆ
ಬೆಂಗಳೂರು, ಮಾರ್ಚ್ 22: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಉಮೇಶ್ ಜಾಧವ್ ಅವರಿಗೆ ನೊಟೀಸ್ ನೀಡಿರುವ ಸ್ಪೀಕರ್ ಅವರು ಮಾರ್ಚ್ 25 ಕ್ಕೆ ವಿಚಾರಣೆಗೆ ಹಾಜರಾಗಲು ಹೇಳಿದ್ದಾರೆ.
ಉಮೇಶ್ ಜಾಧವ್ ಅವರು ಸ್ಪೀಕರ್ ಅವರಿಗೆ ರಾಜೀನಾಮೆ ಸಲ್ಲಿಸುವ ಮೊದಲು, ಕಾಂಗ್ರೆಸ್ ಶಾಸಕಾಂಗ ಪಕ್ಷದ ಅಧ್ಯಕ್ಷ ಸಿದ್ದರಾಮಯ್ಯ ಅವರು ಉಮೇಶ್ ಜಾಧವ್ ಅವರ ಮೇಲೆ ಸ್ಪೀಕರ್ ಅವರಿಗೆ ದೂರು ನೀಡಿದ್ದರು, ಹಾಗಾಗಿ ಸ್ಪೀಕರ್ ರಮೇಶ್ ಕುಮಾರ್ ಅವರು ನೊಟೀಸ್ ನೀಡಿದ್ದಾರೆ.
ಉಮೇಶ್ ಜಾಧವ್ ಅವರು ಪಕ್ಷಾಂತರ ನಿಷೇಧ ಕಾಯ್ದೆಯನ್ನು ಉಲ್ಲಂಘಿಸಿದ್ದಾರೆ ಎಂದು ಸಿದ್ದರಾಮಯ್ಯ ಅವರು ದೂರು ನೀಡಿದ್ದರು. ಹಾಗಾಗಿ ಅದರ ವಿಚಾರಣೆಯನ್ನು ಸ್ಪೀಕರ್ ರಮೇಶ್ ಕುಮಾರ್ ನಡೆಸುತ್ತಿದ್ದಾರೆ. ಉಮೇಶ್ ಜಾಧವ್ ಅವರು ಸಲ್ಲಿಸಿರುವ ರಾಜೀನಾಮೆಯನ್ನು ಅವರಿನ್ನೂ ಅಂಗೀಕರಿಸಿಲ್ಲ.
ಕಾಂಗ್ರೆಸ್ ನಿಂದ ಗೆದ್ದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಉಮೇಶ್ ಜಾಧವ್ ಅವರು ಬಿಜೆಪಿ ಸೇರಿದ್ದು, ಕಲಬುರ್ಗಿ ಕ್ಷೇತ್ರದಿಂದ ಮಲ್ಲಿಕಾರ್ಜುನ ಖರ್ಗೆ ಅವರ ವಿರುದ್ಧ ಸ್ಪರ್ಧಿಸಲಿದ್ದಾರೆ. ಅವರ ಹೆಸರು ಈಗಾಗಲೇ ಅಧಿಕೃತವಾಗಿ ಘೋಷಣೆ ಆಗಿದೆ.