ಬಿಜೆಪಿಗೆ ಮರಳಲು ಸಜ್ಜಾದ ಶ್ರೀರಾಮುಲು!
ಬೆಂಗಳೂರು, ಅ.17 : ಬಿಎಸ್ಆರ್ ಕಾಂಗ್ರೆಸ್ ಅಧ್ಯಕ್ಷ ಬಿ.ಶ್ರೀರಾಮುಲು ಬಿಜೆಪಿ ಸೇರಲು ತುದಿಗಾಲಿನಲ್ಲಿ ನಿಂತಿದ್ದಾರೆ. ಬುಧವಾರ ರಾತ್ರಿ ಬಿಜೆಪಿ ನಾಯಕರ ಜೊತೆ ಈ ಕುರಿತು ಮಹತ್ವದ ಮಾತುಕತೆ ನಡೆಸಿ, ಕೆಲವೊಂದು ಷರತ್ತುಗಳನ್ನು ಮುಂದಿಟ್ಟಿದ್ದಾರೆ.
ಲೋಕಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಪಕ್ಷ ಬಿಟ್ಟು ಹೋದವರನ್ನು ಪಕ್ಷಕ್ಕೆ ಮರಳಿ ಕರೆತಂದು ಪಕ್ಷದ ಶಕ್ತಿಯನ್ನು ಹೆಚ್ಚಿಸಲು ಬಿಜೆಪಿ ನಿರ್ಧರಿಸಿದೆ. ಆದ್ದರಿಂದ ಶ್ರೀರಾಮುಲು ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದೆ.

ಬೆಂಗಳೂರಿನಲ್ಲಿರುವ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಂತ್ ಕುಮಾರ್ ಅವರ ಕಚೇರಿಯಲ್ಲಿ ಶ್ರೀರಾಮುಲು, ಅನಂತ್ ಕುಮಾರ್, ಮಾಜಿ ಸಿಎಂ ಜಗದೀಶ್ ಶೆಟ್ಟರ್, ಡಿ.ವಿ.ಸದಾನಂದ ಗೌಡ ಅವರ ಜೊತೆ ಬಿಜೆಪಿ ಸೇರುವ ಕುರಿತು ಮಾತುಕತೆ ನಡೆಸಿದ್ದಾರೆ.
ಬಿಎಸ್ಆರ್ ಕಾಂಗ್ರೆಸ್ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನ ಮಾಡಲು ಶ್ರೀರಾಮುಲು ಕೆಲವು ಷರತ್ತುಗಳನ್ನು ವಿಧಿಸಿದ್ದಾರೆ. ಷರತ್ತುಗಳಿಗೆ ರಾಷ್ಟ್ರೀಯ ನಾಯಕರಿಂದ ಒಪ್ಪಿಗೆ ದೊರೆತರೆ, ಬಿಎಸ್ಆರ್ ಕಾಂಗ್ರೆಸ್ ಬಿಜೆಪಿಯೊಂದಿಗೆ ವಿಲೀನವಾಗಲಿದೆ.
ಷರತ್ತುಗಳು : ಬಿ.ಶ್ರೀರಾಮುಲು ಬಳ್ಳಾರಿ, ರಾಯಚೂರು, ಚಿತ್ರದುರ್ಗ ಸೇರಿದಂತೆ ಕೆಲವು ಲೋಕಸಭಾ ಕ್ಷೇತ್ರಗಳ ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದಾರೆ. ಅಲ್ಲದೆ ಪಕ್ಷಕ್ಕೆ ಮರಳಿಗೆ ಮೇಲೆ ಸೂಕ್ತ ಸ್ಥಾನಮಾನ ನೀಡುವ ಕುರಿತು ಚರ್ಚೆ ನಡೆಸಿದ್ದಾರೆ. ಶ್ರೀರಾಮುಲು ಅವರ ಷರತ್ತುಗಳ ಬಗ್ಗೆ ಚರ್ಚೆ ನಡೆಸಿ, ತೀರ್ಮಾನ ಕೈಗೊಳ್ಳುವುದಾಗಿ ಬಿಜೆಪಿ ನಾಯಕರು ಭರವಸೆ ನೀಡಿದ್ದಾರೆ.
ಕೇಂದ್ರ ಬಿಜೆಪಿ ನಾಯಕರು ಶ್ರೀರಾಮುಲು ಅವರ ಬೇಡಿಕೆಗಳಿಗೆ ಒಪ್ಪಿಗೆ ಸೂಚಿಸಿದರೆ. ಬಿಎಸ್ಆರ್ ಕಾಂಗ್ರೆಸ್ ಕೆಲವೇ ದಿನಗಳಲ್ಲಿ ಬಿಜೆಪಿಯೊಂದಿಗೆ ವಿಲೀನವಾಗಲಿದೆ. ಕೆಲವು ದಿನಗಳ ಹಿಂದೆ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್, ಶ್ರೀ ರಾಮುಲು ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ಅನುಮತಿ ನೀಡಿದ್ದರು.
ವರಿಷ್ಠ ನಾಯಕರ ಒಪ್ಪಿಗೆಯ ಬಳಿಕವೇ ಬಿಜೆಪಿ ನಾಯಕರು ಶ್ರೀರಾಮುಲು ಅವರ ಜೊತೆ ಮಾತುಕತೆ ನಡೆಸಿದ್ದಾರೆ. ಕೇಂದ್ರಿಯ ನಾಯಕರು ಶ್ರೀರಾಮುಲು ಅವರ ಷರತ್ತುಗಳಿಗೆ ಒಪ್ಪಿಗೆ ನೀಡಿದರೆ, ಅವರು ಪಕ್ಷಕ್ಕೆ ಮರಳಲಿದ್ದಾರೆ. (ಬಿಎಸ್ಆರ್, ಬಿಜೆಪಿ ವಿಲೀನಕ್ಕೆ ವೇದಿಕೆ ಸಜ್ಜು)












Click it and Unblock the Notifications