ಸಮಾಜವಾದಿ ಸಿದ್ದರಾಮಯ್ಯ ಜನರ ಕಷ್ಟ ಮರೆತು ಮಜಾವಾದದಲ್ಲಿ ತೊಡಗಿದ್ದಾರೆ: ಕಟೀಲ್ ಟೀಕೆ
ಬೆಂಗಳೂರು, ಆಗಸ್ಟ್ 3: ಕಾಂಗ್ರೆಸ್ ಮುಖಂಡ, ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಅತಿವೃಷ್ಟಿಯಿಂದ ಸಂಕಷ್ಟದಲ್ಲಿರುವ ಜನರನ್ನು ಮರೆತು ಅದ್ದೂರಿಯಾಗಿ ಜನ್ಮದಿನ ಆಚರಣೆ ಮಾಡಿಕೊಳ್ಳುವ ಮೂಲಕ ಮಜಾವಾದದಲ್ಲಿ ತೊಡಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ಕುಮಾರ್ ಕಟೀಲ್ ಟೀಕಿಸಿದ್ದಾರೆ.
ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಅತಿವೃಷ್ಠಿಯಿಂದ ಜನರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಕಾನೂನು ಸುವ್ಯವಸ್ಥೆಯನ್ನು ಹಾಳು ಮಾಡುವುದರಲ್ಲಿ ಕಾಂಗ್ರೆಸ್ ಪಕ್ಷದ್ದು ಎತ್ತಿದ ಕೈ. ಇದೆಲ್ಲವನ್ನೂ ಮರೆತ ಸಮಾಜವಾದಿ ಹಣೆಪಟ್ಟಿ ಕಟ್ಟಿಕೊಂಡ ಮಜಾವಾದಿ ಸಿದ್ದರಾಮಯ್ಯ 75 ಕೋಟಿ ರುಪಾಯಿಗಳಿಗಿಂದ ಅಧಿಕ ಹಣ ಖರ್ಚು ಮಾಡಿ ತಮ್ಮ ಬೆಂಬಲಿಗರಿಂದ ಜನ್ಮದಿನೋತ್ಸವ ಆಚರಿಸಿಕೊಳ್ಳುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನೆ ಮಾಡಿದ್ದಾರೆ.
ಬಿಜೆಪಿ ಸರ್ಕಾರವು ಕರ್ನಾಟಕದ ಜನರ ಸಂಕಷ್ಟ ಮತ್ತು ಕಾನೂನು- ಸುವ್ಯವಸ್ಥೆ ದೃಷ್ಟಿಯಿಂದ 'ಜನೋತ್ಸವ' ಆಚರಣೆಯನ್ನೇ ರದ್ದು ಮಾಡಿತ್ತು. ಆದರೆ, ಕಾಂಗ್ರೆಸ್ಸಿಗರ ಒಂದು ಬಣವು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಎಂದು ಬಿಂಬಿಸಲು ಈ ಅದ್ಧೂರಿ ಹಾಗೂ ಸಂಭ್ರಮದ ಕಾರ್ಯಕ್ರಮಕ್ಕೆ ದುಂದುವೆಚ್ಚ ಮಾಡಿದೆ. ಕಾಂಗ್ರೆಸ್ ಪಕ್ಷಕ್ಕೆ ಜನಪರ ಕಾಳಜಿ ಇಲ್ಲ ಎನ್ನುವುದು ಇದರಿಂದ ಸ್ಪಷ್ಟವಾಗಿದೆ ಎಂದರು.

ಕಾಂಗ್ರೆಸ್ ವಿರುದ್ಧ ನಳಿನ್ಕುಮಾರ್ ಕಟೀಲ್ ಆರೋಪ
ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜನರ ಸಂಕಷ್ಟಕ್ಕೆ ಸ್ಪಂದಿಸಬೇಕಿತ್ತು. ಅದರ ಬದಲಾಗಿ ಅವರು ತಮ್ಮದೇ ಜನ್ಮದಿನವನ್ನು ಆಚರಿಸಿಕೊಂಡು ವಿಜೃಂಭಿಸುವ ಅವಶ್ಯಕತೆ ಇತ್ತೇ ಎಂದೂ ನಳಿನ್ಕುಮಾರ್ ಕಟೀಲ್ ಪ್ರಶ್ನಿಸಿದ್ದಾರೆ.
ತಾವು ಆಡಳಿತ ಮಾಡುವಾಗ ಹಿಂದೂ ವಿರೋಧಿ ಧೋರಣೆಯನ್ನೇ ಅನುಸರಿಸುತ್ತಿದ್ದ ಸಿದ್ದರಾಮಯ್ಯ ಪಿಎಫ್ಐ ಮತ್ತು ಎಸ್ಡಿಪಿಐ ಪಕ್ಷಗಳ ನೂರಾರು ಮುಖಂಡರ ಕೇಸುಗಳನ್ನು ರದ್ದು ಮಾಡಿ ಆ ಸಂಘಟನೆಗಳ ಮೂಲಕ ಕೋಮುವಾದಕ್ಕೆ ಪುಷ್ಟಿ ನೀಡಿದ್ದರು ಎಂದು ಆರೋಪಿಸಿದ್ದಾರೆ.
ಅಲ್ಪಸಂಖ್ಯಾತರನ್ನು ಓಲೈಕೆ ಮಾಡಿ, ಹಿಂದೂಗಳ ಹತ್ಯಾಕಾಂಡಕ್ಕೆ ಹೆಚ್ಚು ಪ್ರೋತ್ಸಾಹ ನೀಡಿದ್ದರು. ಕಾಂಗ್ರೆಸ್ ಈಗ ಅಧಿಕಾರ ಕಳೆದುಕೊಂಡಿದ್ದು, ಅಲ್ಲಲ್ಲಿ ಗಲಭೆ ಹಾಗೂ ಮತೀಯ ಭಾವನೆಗಳನ್ನು ಹುಟ್ಟು ಹಾಕುವ ಕಾರ್ಯಕ್ಕೆ ಪ್ರೋತ್ಸಾಹ ಕೊಡುವ ಕೆಲಸ ಮುಂದುವರಿಸಿದ್ದಾರೆ ಎಂದು ತಿಳಿಸಿದ್ದಾರೆ.

ಬರೀ ಟೀಕೆ ಮಾಡುವುದೇ ಸಿದ್ದರಾಮಯ್ಯ ಕೆಲಸವಾಗಿದೆ
ಸಿದ್ದರಾಮಯ್ಯ ಹತಾಶರಾಗಿರುವ ಕಾರಣ ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರ್ಕಾರಗಳ ಉತ್ತಮ ಕಾರ್ಯಗಳನ್ನು ಒಪ್ಪಿಕೊಳ್ಳದೆ ವೃಥಾ ಟೀಕೆ ಮಾಡುವ ಕೆಲಸದಲ್ಲಿ ನಿರತರಾಗಿದ್ದಾರೆ. ಕರ್ನಾಟಕದಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಹದಗೆಡಿಸುವ ಕಾರ್ಯವನ್ನು ಕಾಂಗ್ರೆಸ್ಸಿಗರು ಮಾಡುತ್ತಿದ್ದಾರೆ ಎಂದು ಆರೋಪಿಸಿದರು.
ಮುಖ್ಯಮಂತ್ರಿಯಾಗುವ ಏಕೈಕ ಉದ್ದೇಶದಿಂದ ಸಿದ್ದರಾಮಯ್ಯ ಕೆಲಸ ಮಾಡುತ್ತಿದ್ದಾರೆ. ಅವರಿಗೆ ರಾಜ್ಯದ ಜನರ ಬಗ್ಗೆ ಪ್ರೀತಿ ಅಥವಾ ಅವರ ಸಂಕಷ್ಟಕ್ಕೆ ಸ್ಪಂದಿಸುವ ಆಸಕ್ತಿ ಇಲ್ಲ ಎಂದು ಟೀಕಿಸಿದ್ದಾರೆ.

ಕಾಂಗ್ರೆಸ್ನಲ್ಲಿ ಸಿಎಂ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗಿದೆ
ರಾಜ್ಯದ ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಎಸ್.ಆರ್.ಪಾಟೀಲ್, ಎಂ.ಬಿ.ಪಾಟೀಲ್, ಕೆ.ಎಚ್.ಮುನಿಯಪ್ಪ, ಜಮೀರ್ ಅಹ್ಮದ್, ಮಲ್ಲಿಕಾರ್ಜುನ ಖರ್ಗೆ ಹೀಗೆ ಅನೇಕರು ಸಿಎಂ ಪದವಿ ರೇಸ್ನಲ್ಲಿದ್ದಾರೆ. ಚುನಾವಣೆ ಸಮೀಪವಾದಂತೆ ಈ ಸಂಖ್ಯೆ ಇನ್ನಷ್ಟು ಹೆಚ್ಚಾಗಲಿದೆ ಎಂದರು.
ಕಾಂಗ್ರೆಸ್ಸಿಗರು ಲೋಕಸಭೆಯ ಮಾದರಿಯಲ್ಲೇ ರಾಜ್ಯದಲ್ಲೂ ವಿರೋಧ ಪಕ್ಷವಾಗಲು ಅಗತ್ಯವಿರುವ ಸ್ಥಾನಗಳನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಈ ಮೂಲಕ ಕಾಂಗ್ರೆಸ್ ಪಕ್ಷವು ಅವನತಿಯ ಹಾದಿ ಹಿಡಿಯಲಿದೆ ಎಂದು ತಿಳಿಸಿದ್ದಾರೆ.

ಬಿಜೆಪಿ ಮತ್ತೆ ಅಧಿಕಾರಕ್ಕೆ ಬರುತ್ತದೆ!
ಇದೇ ವೇಳೆ 2023ರ ರಾಜ್ಯ ವಿಧಾನಸಭೆ ಚುನಾವನೆಯಲ್ಲಿ ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಡಬಲ್ ಇಂಜಿನ್ ಸರ್ಕಾರದ ಮೂಲಕ ರಾಜ್ಯದಲ್ಲಿ ಅಭಿವೃದ್ಧಿ ಮಾಡಿದ್ದೇವೆ ಎಂದು ಅವರು ಹೇಳಿದ್ದಾರೆ.
ಅಭಿವೃದ್ಧಿ ಕೆಲಸಗಳನ್ನೇ ಇಟ್ಟುಕೊಂಡು ಮುಂದಿನ ಚುನಾವಣೆಯಲ್ಲಿ ಜಯಗಳಿಸುವ ಮೂಲಕ ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ನಳಿನ್ ಕುಮಾರ್ ಕಟೀಲ್ ಭವಿಷ್ಯ ನುಡಿದಿದ್ದಾರೆ.












Click it and Unblock the Notifications