ಶ್ರೀರಂಗ ಏತ ನೀರಾವರಿ ಯೋಜನೆಗೆ ಸಚಿವ ಸಂಪುಟ ಒಪ್ಪಿಗೆ
ಬೆಂಗಳೂರು, ಸೆ. 03: ರಾಮನಗರ ಜಿಲ್ಲೆಯ ಮಾಗಡಿ ಮತ್ತು ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕುಗಳ 83 ಕೆರೆಗಳಿಗೆ ಹೇಮಾವತಿ ನದಿಯಿಂದ ಕುಡಿಯುವ ನೀರನ್ನು ಹರಿಸುವ 450 ಕೋಟಿ ರೂ. ವೆಚ್ಚದ ಪರಿಷ್ಕೃತ ಶ್ರೀರಂಗ ಏತ ನೀರಾವರಿ ಯೋಜನೆಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಡಿಸಿಎಂ ಡಾ. ಸಿ.ಎನ್. ಅಶ್ವಥ್ ನಾರಾಯಣ ತಿಳಿಸಿದರು.
Recommended Video
ಈಗಾಗಲೇ ಯೋಜನೆಗೆ 277 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ. ಯೋಜನೆಗೆ ಮತ್ತಷ್ಟು ಸಂಪನ್ಮೂಲದ ಅಗತ್ಯವಿತ್ತು. ಹೀಗಾಗಿ ಅಗತ್ಯವಿದ್ದ 173 ಕೋಟಿ ರೂ. ಹೆಚ್ಚುವರಿ ಅನುದಾನವನ್ನು ಬಿಡುಗಡೆ ಮಾಡಲು ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು. ಈ ಬಗ್ಗೆ ಮಾಡಲಾಗಿದ್ದ ಮನವಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದರು.
ಬಿಬಿಎಂಪಿ ಕುರಿತು ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ
ಮೊದಲೇ ಆರಂಭವಾಗಿದ್ದ ಯೋಜನೆಯ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಲು ಹಾಗೂ ಮತ್ತಿತರ ಪೂರಕ ವ್ಯವಸ್ಥೆಗಳನ್ನು ಮಾಡುವ ಉದ್ದೇಶದಿಂದ ಪರಿಷ್ಕೃತ ಯೋಜನೆಗೆ ಸಂಪುಟ ಒಪ್ಪಿಗೆ ನೀಡಿದೆ.
ವಿದ್ಯುತ್ ಸಬ್ಸ್ಟೇಷನ್
195 ಕಿ.ಮೀ ದೂರದಿಂದ ನೀರು ಪೂರೈಕೆಯಾಗಬೇಕಿದ್ದು, ಅದಕ್ಕಾಗಿ ಪ್ರತ್ಯೇಕ ಪಂಪ್ ಹೌಸ್ ಮತ್ತು ವಿದ್ಯುತ್ ಸಬ್ಸ್ಟೇಷನ್ ನಿರ್ಮಿಸಲು ಉದ್ದೇಶಿಸಲಾಗಿದೆ. ಜತೆಗೆ, ನೀರನ್ನು ಸರಬರಾಜು ಮಾಡುವ ಪಿಎಸ್ಸಿ ಪೈಪುಗಳು ವಿರಳವಾಗಿದ್ದು, ಅವುಗಳನ್ನು ಕಾಲಮಿತಿಯೊಳಗೆ ಖರೀದಿಸಿ ಯೋಜನೆಯನ್ನು ಕಾರ್ಯಗತ ಮಾಡಬೇಕಾಗಿದೆ. ವಿವಿಧೆಡೆ ಭೂಸ್ವಾಧೀನ ಕಷ್ಟವಾಗಿರುವ ಕಾರಣ ಯೋಜನೆಯ ವೆಚ್ಚ ಹೆಚ್ಚಳವಾಗಿದೆ. ಒಟ್ಟಾರೆಯಾಗಿ ಕಾವೇರಿ ನೀರಾವರಿ ನಿಗಮ ಸಲ್ಲಿಸಿರುವ ಪರಿಷ್ಕೃತ ಪ್ರಸ್ತಾವನೆಗೆ ಸಂಪುಟ ಅನುಮೋದನೆ ನೀಡಿದೆ ಎಂದು ಡಿಸಿಎಂ ಡಾ. ಅಶ್ವಥ್ ನಾರಾಯಣ್ ಮಾಹಿತಿ ನೀಡಿದರು.
ಎರಡು ತಾಲೂಕುಗಳಿಗೆ
ಹೇಮಾವತಿ ಯೋಜನೆಯ ತುಮಕೂರು ಶಾಖಾ ನಾಲೆಯಿಂದ ಎರಡೂ ತಾಲ್ಲೂಕುಗಳ ಕೆರೆಗಳಿಗೆ ನೀರು ಹರಿಯಲಿದೆ. ಈ ಯೋಜನೆಯಿಂದ ಎರಡೂ ತಾಲ್ಲೂಕುಗಳ ಜಲಕ್ಷಾಮ ಶಾಶ್ವತವಾಗಿ ನಿವಾರಣೆಯಾಗಲಿದೆ. ಇದರಿಂದ ಆ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಲಿದೆ ಹಾಗೂ ಕೃಷಿ ಚಟುವಟಿಕೆ ಸಹಾಯವಾಗಲಿದೆ. ಜೊತೆಗೆ ಎರಡೂ ತಾಲ್ಲೂಕುಗಳ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಕೂಡ ಸಹಾಯವಾಗಲಿದೆ.
172.19 ಕ್ಯೂಸೆಕ್ ನೀರು
ಒಟ್ಟು ಉದ್ದೇಶಿತ ಪ್ರದೇಶಗಳಿಗೆ ಒಟ್ಟು 172.19 ಕ್ಯೂಸೆಕ್ ನೀರನ್ನು ಹರಿಸಲಾಗುವುದು. ಮಾಗಡಿ ತಾಲ್ಲೂಕಿನ 68 ಕೆರೆಗಳು ಹಾಗೂ ಕುಣಿಗಲ್ ತಾಲ್ಲೂಕಿನ ಹುತ್ತರಿದುರ್ಗ ಹೋಬಳಿಯ 15 ಕೆರೆಗಳಿಗೆ ನೀರು ಹರಿಯಲಿದೆ. ಇದರಿಂದ ಸುಮಾರು 289 ಗ್ರಾಮಗಳಲ್ಲಿ ಶಾಶ್ವತವಾಗಿ ಕುಡಿಯುವ ನೀರಿನ ಅಭಾವ ನೀಗಲಿದೆ ಎಂದು ಡಾ. ಅಶ್ವಥ್ ನಾರಾಯಣ ಮಾಹಿತಿ ನೀಡಿದರು.
ನೀರಿನ ಸಮಸ್ಯೆ ಪರಿಹಾರ
ರಾಜ್ಯದ ಯಾವುದೇ ಭಾಗದಲ್ಲೂ ಕುಡಿಯುವ ನೀರಿನ ಬಿಕ್ಕಟ್ಟು ಇರಬಾರದು ಎಂಬುದೇ ಸರಕಾರದ ಉದ್ದೇಶವಾಗಿದೆ. ಹೀಗಾಗಿ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳುವುದರ ಜತೆಗೆ, ಈಗಾಗಲೇ ಕಾರ್ಯಗತವಾಗುತ್ತಿರುವ ಯೋಜನೆಗಳನ್ನು ವೇಗವಾಗಿ ಮುಗಿಸಲು ನಿರ್ಧರಿಸಲಾಗಿದೆ ಎಂದು ಡಾ. ಅಶ್ವಥ್ ನಾರಾಯಣ ತಿಳಿಸಿದರು.