ಕಾಶ್ಮೀರ ಪ್ರವಾಹದಲ್ಲಿ ಸಿಲುಕಿರುವ ಕನ್ನಡಿಗರ ಮಾಹಿತಿ ಕೊಡಿ
ಬೆಂಗಳೂರು, ಸೆ.8 : ಜಮ್ಮು ಮತ್ತು ಕಾಶ್ಮೀರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಉಂಟಾಗಿರುವ ಪ್ರವಾಹದಲ್ಲಿ ಸಿಲುಕಿರುವ ಕನ್ನಡಿಗರ ವಿವರಗಳನ್ನು ನೀಡುವಂತೆ ಸರ್ಕಾರ ಜನರಿಗೆ ಮನವಿ ಮಾಡಿದೆ. ಪ್ರವಾಹದಲ್ಲಿ ಸಿಲುಕಿರುವ ಪ್ರವಾಸಿಗರ ರಕ್ಷಣೆಗಾಗಿ ಸಹಾಯವಾಣಿಯನ್ನು ಆರಂಭಿಸಿದೆ.
ಬೆಂಗಳೂರಿನ ಚಿಕ್ಕಲಸಂದ್ರದ 11 ಮಂದಿ ಪ್ರವಾಹದಲ್ಲಿ ಸಿಲುಕಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಉಳಿದಂತೆ ರಾಜ್ಯದ ಪ್ರವಾಸಿಗರು ಜಮ್ಮು ಮತ್ತು ಕಾಶ್ಮೀರದಲ್ಲಿ ಸಿಲುಕಿದ್ದರೆ, ಅವರ ವಿವರಗಳನ್ನು ನೀಡುವಂತೆ ಸರ್ಕಾರ ಜನರಿಗೆ ಮನವಿ ಮಾಡಿದೆ. ರಾಜ್ಯ ಪ್ರಕೃತಿ ವಿಕೋಪ ಪರಿಹಾರ ಕೇಂದ್ರ, ಎಂ.ಎಸ್.ಬಿಲ್ಡಿಂಗ್, 5 ನೇ ಮಹಡಿ, ಅಂಬೇಡ್ಕರ್ ವೀದಿ, ಬೆಂಗಳೂರು 560001 ವಿಳಾಸಕ್ಕೆ ವಿವರಗಳನ್ನು ಕಳುಹಿಸಬೇಕು ಎಂದು ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದೆ.

ಪ್ರವಾಹದಲ್ಲಿ ಸಿಲುಕಿರುವ ಕನ್ನಡಿಗರ ಬಗ್ಗೆ ಮಾಹಿತಿ ಬೇಕಾದರೆ 1070/22340676 ಸಂಖ್ಯೆ ಕರೆ ಮಾಡುವಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೋರಲಾಗಿದೆ. ತುರ್ತು ಸಂದರ್ಭದಲ್ಲಿ ಕರೆ ಮಾಡ ಬೇಕಾದ ಅಧಿಕಾರಿಗಳ ವಿವರ ಗೌರವ್ ಗುಪ್ತ 22032582, 22353980, ಸರೋಜಮ್ಮ 22032426, ಸೋಮಶೇಖರ್ 22340676. ಜಮ್ಮು ಮತ್ತು ಕಾಶ್ಮೀರದಲ್ಲಿನ ಸಹಾಯವಾಣಿ ಸಂಖ್ಯೆ 0194 2452138. [ಕಾಶ್ಮೀರ ಪ್ರವಾಹದಲ್ಲಿ ಸಿಲುಕಿದ್ದಾರೆ 11 ಕನ್ನಡಿಗರು]
ಭಾರೀ ಮಳೆಯಿಂದಾಗಿ ಪ್ರವಾಹಕ್ಕೆ ತುತ್ತಾಗಿರುವ ಜಮ್ಮು ಮತ್ತು ಕಾಶ್ಮೀರದಲ್ಲಿ ಭಾನುವಾರ ಪ್ರಧಾನಮಂತ್ರಿ ನರೇಂದ್ರ ಮೋದಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಇದು ಪ್ರವಾಹವಲ್ಲ ರಾಷ್ಟ್ರೀಯ ವಿಪತ್ತು. ಕಣಿವೆ ರಾಜ್ಯದ ಜನತೆ ಆತಂಕ ಪಡುವ ಅಗತ್ಯವಿಲ್ಲ. ಕೇಂದ್ರ ಸರ್ಕಾರ ನಿಮ್ಮ ನೆರವಿಗಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಮೋದಿ ಜನರಿಗೆ ಭರವಸೆ ನೀಡಿದ್ದಾರೆ. [ಕಾಶ್ಮೀರಕ್ಕೆ ನರೇಂದ್ರ ಮೋದಿ ಭೇಟಿ]
ಐಎಎಸ್ ಅಧಿಕಾರಿ ಕಳುಹಿಸಿಕೊಡಲಾಗಿದೆ : ಜಮ್ಮು ಮತ್ತು ಕಾಶ್ಮೀರದ ಪ್ರವಾಹದಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆಗೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದ್ದು , ಒಬ್ಬ ಐಎಎಸ್ ಅಧಿಕಾರಿಯನ್ನು ಶ್ರೀನಗರಕ್ಕೆ ಕಳುಹಿಸಿಕೊಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಸರ್ಕಾರದ ಮುಖ್ಯ ಕಾರ್ಯದರ್ಶಿ ಜತೆ ಮಾತುಕತೆ ನಡೆಸಿ ನೆರೆ ಹಾವಳಿಯಲ್ಲಿ ಸಿಲುಕಿರುವ ಕನ್ನಡಿಗರ ರಕ್ಷಣೆ ಮಾಡುವಂತೆ ತಿಳಿಸಲಾಗಿದೆ. ದೆಹಲಿಯಲ್ಲಿರುವ ಸ್ಥಾನಿಕ ಆಯುಕ್ತರಿಗೂ ಈ ಕುರಿತು ಸೂಚನೆ ನೀಡಲಾಗಿದೆ ಎಂದು ಸಿಎಂ ಹೇಳಿದ್ದಾರೆ.












Click it and Unblock the Notifications