ಕೆಂಪೇಗೌಡ ಜಯಂತಿಗೆ ಸರಕಾರ 65 ಲಕ್ಷ, ಒಕ್ಕಲಿಗರ ಸಂಘ 50 ಲಕ್ಷ
ಬೆಂಗಳೂರು, ಜೂನ್ 20: ಬೆಂಗಳೂರು ನಿರ್ಮಾತೃ ನಾಡಪ್ರಭು ಕೆಂಪೇಗೌಡರ ಜಯಂತಿಯನ್ನು ಜೂನ್ 27 ರಂದು ನಗರದ ಅರಮನೆ ಮೈದಾನದಲ್ಲಿ ವಿಜೃಂಭಣೆಯಿಂದ ಆಚರಿಸಲಾಗುವುದು ಎಂದು ಜಲಸಂಪನ್ಮೂಲ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಮತ್ತು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ.
ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಬುಧವಾರ ಕೆಂಪೇಗೌಡರ ಜಯಂತಿಯ ಪೂರ್ವಭಾವಿ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಬೆಂಗಳೂರಿನ 5 ಕಡೆ ಇರುವ ಗೋಪುರದಿಂದ ನಗರದ ಸ್ವತಂತ್ರ್ಯ ಉದ್ಯಾನವನಕ್ಕೆ ಸಾರ್ವಜನಿಕರು, ಸಂಘ- ಸಂಸ್ಥೆಗಳ ಪದಾಧಿಕಾರಿಗಳು ಬಂದು, ಅಲ್ಲಿಂದ ಮೆರವಣಿಗೆ ಮೂಲಕ ಸಮಾರಂಭ ನಡೆಯುವ ಸ್ಥಳಕ್ಕೆ ಬರಲು ತೀರ್ಮಾನಿಸಲಾಯಿತು.
ಐಟಿ ತಲೆನೋವಿನ ನಡುವೆಯೂ ಅಧಿಕಾರಿಗಳ ಸಭೆ ನಡೆಸಿದ ಡಿಕೆಶಿ
ಕನ್ನಡ ಪರ ಹೋರಾಟಗಾರರು, ಸಂಘಟನೆಗಳ ಮುಖ್ಯಸ್ಥರು, ಕಲಾವಿದರು ಹಾಗೂ ಸಾರ್ವಜನಿಕರು ಸಮಾರಂಭಕ್ಕೆ ಆಗಮಿಸುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಮನವಿ ಮಾಡಿದ ಸಚಿವರು ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿಗಳು ಎಲ್ಲರನ್ನೂ ಆಹ್ವಾನಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಂದು ಮಧ್ಯಾಹ್ನ 12ಕ್ಕೆ ಅರಮನೆ ಮೈದಾನದಲ್ಲಿ ಮುಖ್ಯ ಕಾರ್ಯಕ್ರಮ ಆರಂಭವಾಗಲಿದೆ. ಮುಖ್ಯಮಂತ್ರಿಗಳ ಆದೇಶದನ್ವಯ ಈ ಪೂರ್ವಭಾವಿ ಸಭೆ ನಡೆಯುತ್ತಿದ್ದು, ಈ ಕಾರ್ಯಕ್ರಮಕ್ಕೆ ಸರಕಾರ 65 ಲಕ್ಷ ಹಣ ನೀಡುತ್ತಿದೆ. ಹೆಚ್ಚಿನ ಅನುದಾನ ನೀಡುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಲಾಗುವುದು ಎಂದರು.
ಒಕ್ಕಲಿಗರ ಸಂಘವು ಈ ಕಾರ್ಯಕ್ರಮದ ಯಶಸ್ವಿಗಾಗಿ 50 ಲಕ್ಷ ಹಣ ವಿನಿಯೋಗಿಸುತ್ತಿದೆ. ಪೂರ್ವಭಾವಿ ಸಭೆಗೆ ಬಂದ ಸಾಹಿತಿಗಳು, ಮುಖಂಡರು ಕೆಂಪೇಗೌಡ ಅವರ ಹೆಸರಿನಲ್ಲಿ ವಿವಿಧ ಕಡೆ ಪ್ರತಿಮೆ ಸ್ಥಾಪನೆ ಮಾಡುವಂತೆ ಹಾಗೂ ನಗರದ ವಿಶ್ವವಿದ್ಯಾಲಯಕ್ಕೆ ಕೆಂಪೇಗೌಡರ ಹೆಸರಿಡುವಂತೆ ಬೇಡಿಕೆ ಇಟ್ಟಿದ್ದಾರೆ. ತಮ್ಮೆಲ್ಲರ ಬೇಡಿಕೆಗಳನ್ನು ಕಾನೂನಿನ ಚೌಕಟ್ಟಿನಲ್ಲಿ ಚರ್ಚಿಸಿ, ಕ್ರಮ ಕೈಗೊಳ್ಳುವುದಾಗಿ ಸಚಿವರು ತಿಳಿಸಿದರು.
ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಕಚೇರಿ ಹಾಗೂ ಸಂಶೋಧನಾ ಕೇಂದ್ರಕ್ಕೆ ನಗರದಲ್ಲಿ 5 ಎಕರೆ ಜಮೀನನ್ನು ಕಾಯ್ದಿರಿಸಲಾಗಿದೆ ಹಾಗೂ ತಾತ್ಕಾಲಿಕವಾಗಿ ನಗರದ ಮೇಯೋಹಾಲ್ ನಲ್ಲಿ ಕಚೇರಿಯನ್ನು ಪ್ರಾರಂಭಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಕೆಂಪೇಗೌಡರ ಜಯಂತಿ ಆಚರಣೆ ಮಾಡಲು ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದರು.
ಬೆಂಗಳೂರು ವಿಶ್ವವಿದ್ಯಾಲಯದಲ್ಲೂ ಕೆಂಪೇಗೌಡರ ಬಗ್ಗೆ ಸಂಶೋಧನೆ ಕೈಗೊಳ್ಳಲು ಹಣವನ್ನು ಕಾಯ್ದಿರಿಸಲಾಗಿದೆ. ಪ್ರತಿ ವರ್ಷ ಕೆಂಪೇಗೌಡ ಜಯಂತಿ ದಿನದಂದು ಆಯಾ ಕ್ಷೇತ್ರದಲ್ಲಿ ಕೆಲಸ ಮಾಡಿದ ಅರ್ಹರಿಗೆ ಪ್ರಶಸ್ತಿ ನೀಡುವ ಕಾರ್ಯಕ್ರಮವನ್ನು ಮುಂದುವರಿಸಲಾಗುವುದು ಎಂದರು.
ಕೆಂಪೇಗೌಡರ ಜಯಂತಿ ನಾಡಿನ ಜನತೆಯ ಕಾರ್ಯಕ್ರಮವಾಗಬೇಕು. ನಗರದ ವಾರ್ಡ್ ಮಟ್ಟದಲ್ಲಿ 1.5 ಲಕ್ಷ ಹಣವನ್ನು ಜಯಂತಿ ಆಚರಣೆಗಾಗಿ ನೀಡಲಾಗುತ್ತಿದ್ದು, ಈ ಹಣ ಸದ್ಬಳಕೆಯಾಗಬೇಕು ಎಂದು ತಿಳಿಸಿದರು.
ಕೆಂಪೇಗೌಡರ ಜಯಂತಿ ಆಚರಣೆ ಸಂದರ್ಭದಲ್ಲಿ ಅವರ ಬಗ್ಗೆ ಸಾಕ್ಷ್ಯಚಿತ್ರವನ್ನು ನಿರ್ಮಿಸಿ, ಹೆಚ್ಚು ಪ್ರಚಾರ ನೀಡಬೇಕೆಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಡಾ.ಜಯಮಾಲಾ ಹೇಳಿದರು.
ಬಿಬಿಎಂಪಿ ಮೇಯರ್ ಸಂಪತ್ ರಾಜ್ ಸೇರಿದಂತೆ ವಿಧಾನ ಪರಿಷತ್ ಸದಸ್ಯರು, ಸಾಹಿತಿಗಳು, ವಿವಿಧ ಸಂಘಟನೆಗಳ ಮುಖಂಡರು, ಸಂಶೋಧಕರು ಈ ಪೂರ್ವಭಾವಿ ಸಭೆಯಲ್ಲಿ ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್.ಆರ್. ವಿಶುಕುಮಾರ್ ಹಾಗೂ ಉನ್ನತ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.