Transfer:ಪ್ರತಿಯೊಬ್ಬರ ವರ್ಗಾವಣೆಗೂ ಸರ್ಕಾರ ಕಾರಣ ನೀಡಬೇಕಾಗಿಲ್ಲ-ಹೈಕೋರ್ಟ್

ಬೆಂಗಳೂರು, ಫೆಬ್ರವರಿ 03: ದೊಡ್ಡ ಪ್ರಮಾಣದಲ್ಲಿ ಅಧಿಕಾರಿಗಳ ವರ್ಗಾವಣೆ ಮಾಡಿದ ಸಂದರ್ಭದಲ್ಲಿ ಪ್ರತಿಯೊಬ್ಬರ ವರ್ಗಾವಣೆಗೂ ಪ್ರತ್ಯೇಕ ಕಾರಣ ನೀಡುವುದು ಕಡ್ಡಾಯವಲ್ಲ ಎಂದು ಹೈಕೋರ್ಟ್ ತಿಳಿಸಿದೆ.

ತಮ್ಮನ್ನು ವರ್ಗಾವಣೆ ಮಾಡಿದ್ದ ಸರ್ಕಾರದ ಕ್ರಮ ಎತ್ತಿ ಹಿಡಿದಿದ್ದ ಕರ್ನಾಟಕ ಆಡಳಿತಾತ್ಮ ನ್ಯಾಯಾಧಿಕರಣ (ಕೆಎಟಿ) ಕ್ರಮ ಪ್ರಶ್ನಿಸಿ ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತರಾಗಿದ್ದ ಎಚ್.ಎಸ್.ವೀಣಾ ಮತ್ತಿತರರು ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ.ಸೋಮಶೇಖರ್ ಮತ್ತು ನ್ಯಾಯಮೂರ್ತಿ ಕೆ. ರಾಜೇಶ್ ರೈ ಅವರಿದ್ದ ಪೀಠ ಈ ಆದೇಶ ನೀಡಿ ಅರ್ಜಿಗಳನ್ನು ವಜಾಗೊಳಿಸಿದೆ.

State Government Can Not Give Reasons For Every Transfer Says High Court

ಹೈಕೋರ್ಟ್ ಆದೇಶವೇನು?

ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್‌ಗೆ ತೀರ್ಪುಗಳನ್ನು ಉಲ್ಲೇಖಿಸಿರುವ ನ್ಯಾಯಪೀಠ, ಸರ್ಕಾರದಲ್ಲಿ ವರ್ಗಾವಣೆ ಮಾಡಬಹುದಾದ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿರುವ ನೌಕರ ತಾನು ಬಯಸಿದ ಹುದ್ದೆಯಲ್ಲಿ ದೀರ್ಘಕಾಲ ಉಳಿದುಕೊಳ್ಳುವ ಹಕ್ಕು ಹೊಂದಿರುವುದರಿಲ್ಲ ಎಂದು ತಿಳಿಸಿದೆ. ಜೊತೆಗೆ ಸರ್ಕಾರದ ನೌಕರರನ್ನು ನಿಗದಿತ ಅವಧಿಗಿಂತಲು ಹೆಚ್ಚು ಕಾಲ ಒಂದೇ ಸ್ಥಳದಲ್ಲಿ ಮುಂದುವರೆಸಲು ಅವಕಾಶ ನೀಡಿದಲ್ಲಿ ಅವರು ಸ್ಥಳೀಯವಾಗಿ ಸಂಬಂಧಗಳನ್ನು ಬೆಳೆಸಿಕೊಳ್ಳುವುದಕ್ಕೆ ಕಾರಣವಾಗಲಿದೆ. ಪಟ್ಟಭದ್ರ ಹಿತಾಸಕ್ತಿಯತ್ತ ಒತ್ತುನೀಡುವ ಸಾಧ್ಯತೆಯಿದೆಲಿದೆ ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಕೆಎಟಿಯು ಎಲ್ಲ ದಾಖಲೆಗಳನ್ನು ಪರಿಶೀಲನೆ ಮಾಡಿದ ಬಳಿಕವೇ ಸರ್ಕಾರದ ಆದೇಶವನ್ನು ಎತ್ತಿಹಿಡಿದಿದ್ದು, ಆಡಳಿತಾತ್ಮ ಹಿತದೃಷ್ಠಿಯಿಂದ ವರ್ಗಾವಣೆ ಮಾಡಿದೆ ಎಂದು ತಿಳಿಸಿ ಅರ್ಜಿಯನ್ನು ವಜಾಗೊಳಿಸಿದೆ. ಹೀಗಿರುವಾಗ ಕೆಎಟಿ ಆದೇಶದಲ್ಲಿ ಯಾವುದೇ ದೋಷ ಕಂಡು ಬರುತ್ತಿಲ್ಲ. ಹೀಗಾಗಿ ಆ ಆದೇಶದಲ್ಲಿ ಮಧ್ಯಪ್ರವೇಶ ಮಾಡುವ ಅಗತ್ಯವಿಲ್ಲ ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿ ಅರ್ಜಿಗಳನ್ನು ವಜಾಗೊಳಿಸಿದೆ.

ಮುಖ್ಯಮಂತ್ರಿಗಳ ಪೂರ್ವಾನುಮತಿ ಪಡೆಯದೇ ಅರ್ಜಿದಾರರನ್ನು ವರ್ಗಾವಣೆ ಮಾಡಲಾಗಿದೆ ಎಂಬ ಅರ್ಜಿದಾರರ ವಾದವನ್ನು ತಳ್ಳಿಹಾಕಿದ ನ್ಯಾಯಪೀಠ, ಪ್ರಕರಣ ಸಂಬಂಧದ ದಾಖಲೆಗಳನ್ನು ಪರಿಶೀಲಿಸಿದಲ್ಲಿ ಅರ್ಜಿದಾರರನ್ನು ಮುಖ್ಯಮಂತ್ರಿಗಳ ಪೂರ್ವಾನುಮತಿ ಪಡೆದೆ ವರ್ಗಾವಣೆ ಮಾಡಲಾಗಿದೆ ಎಂಬ ಅಂಶ ಗೊತ್ತಾಗಲಿದೆ ಎಂದು ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಅರ್ಜಿದಾರರೆಲ್ಲರ ದಾಖಲೆಗಳನ್ನು ಪರಿಶೀಲಿಸಿದಾದ ಒಂದೇ ಸ್ಥಳದಲ್ಲಿ ಒಂದಲ್ಲಾ ಒಂದು ಹುದ್ದೆಯಲ್ಲಿ ಗಣನೀಯವಾಗಿ ಕಾರ್ಯನಿರ್ವಹಿಸಿದ್ದಾರೆ ಎಂಬ ಅಂಶ ಗೊತ್ತಾಗಲಿದೆ. ಅಲ್ಲದೇ, ರಾಜ್ಯ ಸರ್ಕಾರ ಪ್ರತಿಯೊಬ್ಬ ಅಧಿಕಾರಿಯನ್ನು ವರ್ಗಾವಣೆ ಮಾಡುವುದಕ್ಕೆ ಕಾರಣಗಳನ್ನು ನಿಗದಿಪಡಿಸುವುದು ಕಷ್ಟವಾಗಿರಲಿದೆ. ಅರ್ಜಿದಾರರನ್ನು ವರ್ಗಾವಣೆ ಮಾಡುವುದಕ್ಕೆ ಕಾರಣ ನೀಡಲೇಬೇಕು ಎಂಬುದು ಅನಿವಾರ್ಯವಲ್ಲ ಎಂದು ಪೀಠ ತಿಳಿಸಿದೆ.

ಪ್ರಕರಣದ ಹಿನ್ನೆಲೆ ಏನು..?

ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ನಿರ್ದೇಶನ ವಿಭಾಗದದಲ್ಲಿ ಉಪ ಆಯುಕ್ತರಾಗಿದ್ದ ಎಚ್.ಎಸ್.ವೀಣಾ, ಸಿ.ಪುಷ್ಪಾ, ಜಿಎಸ್‌ಟಿ ವಿಭಾಗದ ಉಪ ಆಯುಕ್ತ ವಿ.ಆರ್.ಮಂಜುಳಾ, ಸಹಾಯಕ ಆಯುಕ್ತರಾದ ಎನ್.ಸಿ ಶೈಲಾ, ಇ-ಗೌರ‍್ನೆನ್ಸ್‌ನ ವಿಭಾಗದ ಹೆಚ್ಚುವರಿ ಆಯುಕ್ತ ಕೆ.ಎಸ್.ಬಸವರಾಜು ಎಂಬುವರನ್ನು 2022ರ ಜೂನ್ 22ರಂದು ವಿವಿಧ ಸ್ಥಳಗಳಿಗೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಇದಾದ ಬಳಿಕ ಒಂದು ವರ್ಷ ಎರಡು ತಿಂಗಳು ಮುಗಿಯುವುದಕ್ಕೂ ಮುನ್ನ ಮತ್ತೆ ವರ್ಗವಣೆ ಮಾಡಲಾಗಿತ್ತು.

ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ಅರ್ಜಿದಾರರು ಕೆಎಟಿಗೆ ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದರು. ಅರ್ಜಿಗಳನ್ನು ಕೆಎಟಿ ವಜಾಗೊಳಿಸಿ ಆದೇಶಿಸಿತ್ತು. ಇದನ್ನು ಪ್ರಶ್ನಿಸಿ ಎಲ್ಲ ಅರ್ಜಿದಾರರು ಪ್ರತ್ಯೇಜವಾಗಿ ಹೈಕೋರ್ಟ್ ಮೊರೆ ಹೋಗಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+