ಖಾಲಿ ಹುದ್ದೆಗಳ ಭರ್ತಿಗೆ ಆಗ್ರಹ: ಬೆಂಗಳೂರಿನಲ್ಲಿ ಸೆ.22ಕ್ಕೆ ನಿರುದ್ಯೋಗಿ ಯುವಜನರ ಸಮಾವೇಶ
ಬೆಂಗಳೂರು, ಸೆ.21: ರಾಜ್ಯದಲ್ಲಿರುವ ಖಾಲಿ ಹುದ್ದೆಗಳನ್ನು ಭರ್ತಿ ಮಾಡಲು ಹಾಗೂ ನೇಮಕಾತಿ ಅಕ್ರಮಗಳನ್ನು ತಡೆಗಟ್ಟಲು ಆಗ್ರಹಿಸಿ ನಿರುದ್ಯೋಗಿ ಯುವಜನರ ರಾಜ್ಯಮಟ್ಟದ ಸಮಾವೇಶ ಗುರುವಾರ (ಸೆ.22) ರಂದು ಬೆಂಗಳೂರಿನಲ್ಲಿ ನಡೆಯಲಿದೆ.
ಬೆಂಗಳೂರಿನ ಸ್ಕೌಟ್ಸ್ ಅಂಡ್ ಗೈಡ್ಸ್ ಕಚೇರಿಯ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ನಿರುದ್ಯೋಗಿ ಯುವಜನರ ರಾಜ್ಯಮಟ್ಟದ ಸಮಾವೇಶ ಆಯೋಜಿಸಲಾಗಿದೆ. ಈ ಕುರಿತು ಪ್ರಕಟಣಾ ಪತ್ರವನ್ನು ಅಖಿಲ ಭಾರತ ನಿರುದ್ಯೋಗಿ ಯುವಜನರ ಹೋರಾಟ ಸಮಿತಿ ಬಿಡುಗಡೆ ಮಾಡಿದೆ.
ಯಾದಗಿರಿಯಲ್ಲಿ ಉದ್ಯೋಗಾಕಾಂಕ್ಷಿಗಳ ಜಿಲ್ಲಾ ಸಮಾವೇಶ
ರಾಜ್ಯ ಹಾಗೂ ಕೇಂದ್ರ ಸರ್ಕಾರದಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಖಾಯಂ ಆಧಾರದಲ್ಲಿ ಭರ್ತಿ ಮಾಡಬೇಕು, ನೇಮಕಾತಿಯಲ್ಲಿ ನಡೆಯುವ ಭ್ರಷ್ಟಾಚಾರ, ಅಕ್ರಮವನ್ನು ತಡೆಗಟ್ಟಬೇಕು ಎಂಬುದು ಪ್ರಮುಖ ಬೇಡಿಕೆಯಾಗಿದೆ. ಇವುಗಳ ಜೊತೆಗೆ ಮತ್ತಷ್ಟು ಬೇಡಿಕೆಗಳನ್ನು ಇಟ್ಟುಕೊಂಡು ರಾಜ್ಯಮಟ್ಟದ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ.
ಲಕ್ಷಾಂತರ ಹುದ್ದೆಗಳು ಖಾಲಿ ಇವೆ. ಆದರೆ ಸರ್ಕಾರಗಳು ಅವುಗಳ ಭರ್ತಿಗೆ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ. ಬದಲಿಗೆ ಯುವಕರನ್ನು ತಪ್ಪು ದಾರಿಗೆ ತೆಗೆದುಕೊಂಡು ಹೋಗುವುದು, ಯಾಮಾರಿಸುವುದು ನಡೆಯುತ್ತಿದೆ. ಅಧಿಕಾರಕ್ಕೆ ಬಂದ ಎಲ್ಲಾ ಪಕ್ಷಗಳು ಯುವಜನರನ್ನು ಕಡೆಗಣಿಸಿವೆ ಜಾಗತೀಕರಣ, ಉದಾರೀಕರಣ, ಖಾಸಗೀಕರಣ ನೀತಿಗಳು ಜಾರಿಗೆ ತಂದ ಮೇಲೆ ಗುತ್ತಿಗೆ, ಹೊರ ಗುತ್ತಿಗೆ, ಅತಿಥಿ ಹೆಸರಿನಲ್ಲಿ ಪುಡಿಗಾಸಿಗೆ ದುಡಿಸಿಕೊಳ್ಳಲಾಗುತ್ತಿದೆ ಎಂದು ಸಮಿತಿ ಆಕ್ರೋಶ ವ್ಯಕ್ತಪಡಿಸಿದೆ.
ಸಮಾವೇಶವನ್ನು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕದ ನಿವೃತ್ತ ಲೋಕಾಯುಕ್ತರಾದ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಉದ್ಘಾಟಿಸಲಿದ್ದಾರೆ. ಅತಿಥಿಗಳಾಗಿ ಲೇಖಕರಾದ ಮಂಗ್ಳೂರು ವಿಜಯ ಹಾಜರಿರಲಿದ್ದಾರೆ. ಹೋರಾಟ ಸಮಿತಿ ಅಖಿಲ ಭಾರತ ಅಧ್ಯಕ್ಷರಾದ ಇ.ವಿ.ಪ್ರಕಾಶ್, ಎ.ಐ.ಡಿ.ವೈ.ಓ ಅಖಿಲ ಭಾರತ ಉಪಾಧ್ಯಕ್ಷರಾದ ಡಾ. ಜಿ.ಎಸ್.ಕುಮಾರ್, ಎಐಡಿವೈಒ ರಾಜ್ಯ ಕಾರ್ಯದರ್ಶಿ ಸಿದ್ಧಲಿಂಗ ಬಾಗೇವಾಡಿ ಅವರು ಭಾಷಣಕಾರರಾಗಿ ಭಾಗವಹಿಸಲಿದ್ದಾರೆ.
ಈ ಸಮಾವೇಶದಲ್ಲಿ ಇಪತ್ತು ಜಿಲ್ಲೆಗಳ ಉದ್ಯೋಗಾಕಾಂಕ್ಷಿ ಯುವಜನರು ಭಾಗವಹಿಸಲಿದ್ದಾರೆ ಎಂದು ಸಮಿತಿಯ ರಾಜ್ಯ ಕಾರ್ಯದರ್ಶಿ ಚನ್ನಬಸವ ಜಾನೇಕಲ್ ತಿಳಿಸಿದರು.