ಸರ್ಕಾರ ಯೋಜನೆಗಳು ಜನರಿಗೆ ತಲುಪಿಸಲು ರಾಜ್ಯಾದ್ಯಂತ ಅಭಿಯಾನ:ಸಿಎಂ
ರಾಜ್ಯ ಸರ್ಕಾರ ಯೋಜನೆಗಳು ಸಂಪೂರ್ಣವಾಗಿ ಎಲ್ಲಾ ಫಲಾನುಭವಿಗಳಿಗೆ ತಲುಪಬೇಕು. ಈ ಸಂಬಂಧ ಬಿಜೆಪಿಯಿಂದ ರಾಜ್ಯಾದ್ಯಂತ ಅಭಿಯಾನ ನಡೆಯಲಿದೆ. ಈ ಸಂಬಂಧ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿವರಿಸಿದರು.
ಬೆಂಗಳೂರು, ಫೆಬ್ರವರಿ 10: ಬಿಜೆಪಿ ಸರ್ಕಾರ ಫಲಾನುಭವಿಗಳಿಗೆ ಹಣ ತಲುಪಿಸಲು ವಿಶೇಷ ಡಿಬಿಟಿ ವ್ಯವಸ್ಥೆ ಅಳವಡಿಸಿಕೊಂಡಿದೆ. ಇದೇ ಅನೇಕ ಯೋಜನೆಗಳು ಇದ್ದು, ಅವುಗಳನ್ನು ಜನರಿಗೆ ಸಂಪೂರ್ಣವಾಗಿ ತಲುಪಿಸಲು ರಾಜ್ಯಾದ್ಯಂತ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಶುಕ್ರವಾರ ವಿಧಾನಸೌಧದಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಮ್ಮ ಸರ್ಕಾರ ಯೋಜನೆಗಳನ್ನು ಸಂಪೂರ್ಣವಾಗಿ ಎಲ್ಲಾ ಫಲಾನುಭವಿಗಳಿಗೆ ಮುಟ್ಟಬೇಕೆಂಬ ಉದ್ದೇಶದಿಂದ ರಾಜ್ಯ ಪ್ರತಿ ಜಿಲ್ಲೆಗಳಲ್ಲಿ ಅಭಿಯಾನ ಕೈಗೊಳ್ಳಲು ನಿರ್ಧರಿಸಿದ್ದೇವೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರು ನೇತೃತ್ವದ ಸರ್ಕಾರ ಬಂದ ಮೇಲೆ ಸಾಕಷ್ಟು ಅಭಿವೃದ್ಧಿಯಾಗಿದೆ. ಅನೇಕ ಯೋಜನೆ ಜಾರಿಯಾಗಿದ್ದು, ಬಹಳಷ್ಟು ಪಾರದರ್ಶಕತೆ ಸಾಧ್ಯವಾಗಿದೆ. ಸರ್ಕಾರದ ಕಾರ್ಯಕ್ರಮಗಳು ನೇರವಾಗಿ ಫಲಾನುಭವಿಗಳಿಗೆ ಮುಟ್ಟಿಸಲು ಡಿಬಿಟಿ ವ್ಯವಸ್ಥೆ ಅಳವಡಿಸಿದ್ದೇವೆ. ಇದರಿಂದ ಮಧ್ಯವರ್ತಿಗಳ ಹಾವಳಿ ತಪ್ಪಿದೆ. ಜೊತೆಗೆ ಜನರು ಕಚೇರಿಗಳಿಗೆ ಅಲೆದಾಡುವುದು ತಪ್ಪಿದೆ.

ಪ್ರಧಾನಮಂತ್ರಿ ಸ್ವ ನಿಧಿ, ರೈತ ವಿಧ್ಯಾನಿಧಿ ಯೋಜನೆ, ರೈತ ಶಕ್ತಿ ಯೋಜನೆಗಳು ಡಿಬಿಟಿ ಮುಖಾಂತರವಾಗಿ ಪಾವತಿಯಾಗುತ್ತಿದೆ. ಈ ಎಲ್ಲಾ ರಾಜ್ಯ ಮತ್ತು ಕೇಂದ್ರ ಸರ್ಕಾರದ ಫಲಾನುಭವಿಗಳಿಗೆ ನೇರವಾಗಿ ಮುಟ್ಟಲು ಹಾಗೂ ಸೌಲಭ್ಯ ವಂಚಿತರಾದವರಿಗೆ ಕಾರ್ಯಕ್ರಮ ಮುಟ್ಟಿಸಲು ಕೂಡಲೇ ಕ್ರಮ ತೆಗೆದುಕೊಳ್ಳಬೇಕೆಂದು ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಸ್ತ್ರೀಶಕ್ತಿ ಯೋಜನೆ, ಸ್ವಾಮಿ ವಿವೇಕಾನಂದ ಯುವ ಶಕ್ತಿ ಯೋಜನೆ, ಅಮೃತ ಯೋಜನೆಗಳನ್ನು ಜಾರಿಗೆ ತರುವುದು ಬಾಕಿ ಇದೆ. ಈ ಸಂಬಂಧ ಜಾಗೃತಿ ಮೂಡಿಸುವ ಕೆಲಸವಾಗಬೇಕು. ಬಾಕಿ ಫಲಾನುಭವಿಗಳನ್ನು ಗುರುತಿಸುವ ಹಾಗೂ ಯೋಜನೆಗಳ ಮಾಹಿತಿ ತಲುಪಿಸುವ ಕಾರ್ಯವಾಗಬೇಕು. ಈ ಸಂಬಂಧ ಎಲ್ಲ ಜಾಗೃತಿ ಅಭಿಯಾನ ನಡೆಸಿ ಸಮ್ಮೇಳನ ಮಾಡಲಿದ್ದೇವೆ ಎಂದು ಅವರು ವಿವರಿಸಿದರು.

ಈ ಮೇಲಿನ ಎಲ್ಲ ಅಂಶಗಳನ್ನು ಒಳಗೊಂಡ ಆದೇಶವೊಂದನ್ನು ಸರ್ಕಾರ ಆದಷ್ಟು ಶೀಘ್ರವೇ ಹೊರಡಿಸಲಿದೆ. ಸಮ್ಮೇಳನಕ್ಕೆ ಮುನ್ನ ಅಭಿಯಾನವಾದರೆ ಜನರಿಗೆ ಮಾಹಿತಿ ದೊರೆತು ಸೌಲಭ್ಯಗಳನ್ನು ಪಡೆಯಬಹುದು. ಈ ಅಭಿಯಾನ ಜಿಲ್ಲಾ ಉಸ್ತುವಾರಿ ಸಚಿವರು ನೇತೃತ್ವದಲ್ಲಿ ನಡೆಯಲಿದೆ ಎಂದರು.
ಸ್ವತಃ ಕಂದಾಯ ಸಚಿವ ಆರ್.ಅಶೋಕ್ ಪತ್ರ ಬರೆದು ಕೋರಿದ್ದರಿಂದ ಅವರನ್ನು ಮಂಡ್ಯ ಜಿಲ್ಲಾ ಉಸ್ತುವಾರಿ ಸ್ಥಾನದಿಂದ ತೆರವು ಮಾಡಲಾಗಿದೆ. ಅವರಿಗೆ ದಾವಣಗೆರೆಯಲ್ಲಿ ಹಕ್ಕು ಪತ್ರ ನೀಡುವ ಕೆಲಸ, ಗ್ರಾಮ ವಾಸ್ತ್ಯವ್ಯ, ಜಿಲ್ಲಾಧಿಕಾರಿಗಳ ನಡೆ-ಹಳ್ಳಿ ಕಡೆ ಮುಂತಾದ ಕಾರ್ಯಕ್ರಮ ಯಶಸ್ವಿಗೊಳಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.












Click it and Unblock the Notifications