ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ: ಏನಿದು ರಾಜ್ಯಮಟ್ಟದ ಉದ್ಘಾಟನಾ ಅಭಿಯಾನ?
ಬೆಂಗಳೂರು,ಸೆ.01: ಮುಂದಿನ ಒಂದೆರಡು ತಿಂಗಳಲ್ಲಿ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯ ಉದ್ಘಾಟಿಸಲಾಗುವುದು. ಇದರ ಪೂರ್ವಭಾವಿಯಾಗಿ ರಾಜ್ಯಾದ್ಯಂತ ಆರಂಭವಾದ ಪವಿತ್ರ ಮೃತ್ತಿಕೆ (ಮಣ್ಣು) ಮತ್ತು ಜಲವನ್ನು ಸಂಗ್ರಹಿಸುವ ವಿಶಿಷ್ಟ ಅಭಿಯಾನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗುರುವಾರ ಚಾಲನೆ ನೀಡಿದರು.
ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗುರುವಾರ ಆಯೋಜಿಸಿದ್ದ ಸಮಾರಂಭದಲ್ಲಿ ನಾಡಪ್ರಭು ಕೆಂಪೇಗೌಡ ಥೀಮ್ ಪಾರ್ಕ್ ನಿರ್ಮಾಣಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭೂಮಿಪೂಜೆ ನೆರವೇರಿಸಿದರು. ನಂತರ ರಾಜ್ಯಮಟ್ಟದ ಉದ್ಘಾಟನಾ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಬಸವರಾಜ ಬೊಮ್ಮಾಯಿ, ಇತಿಹಾಸ ಅರಿಯದವರು ಇತಿಹಾಸ ಸೃಷ್ಟಿಸಲಾರರು. ರಾಜ್ಯ ಸರ್ಕಾರವು ವಿಧಾನಸೌಧದ ಆವರಣದಲ್ಲಿ ಸಹ 50ಕೋಟಿ ರೂ. ವೆಚ್ಚದಲ್ಲಿ ಕೆಂಪೇಗೌಡರ ಪ್ರತಿಮೆ ಸ್ಥಾಪಿಸಲು ನಿರ್ಧರಿಸಿದೆ. ಲಾಲ್ಬಾಗ್ ಉದ್ಯಾನ ಆವರಣದಲ್ಲೂ ನಾಡಪ್ರಭುವಿನ ಪ್ರತಿಮೆ ತಲೆಎತ್ತಲಿದೆ ಎಂದು ಇದೇ ಅವೇಳೆ ಅವರು ಘೋಷಿಸಿದರು.

ವಿಮಾನ ನಿಲ್ದಾಣದಲ್ಲಿ "ಸ್ಟಾಚ್ಯೂ ಆಫ್ ಪ್ರಾಸ್ಪೇರಿಟಿ"
ವಿಮಾನ ನಿಲ್ದಾಣದಲ್ಲಿ ಕೆಂಪೇಗೌಡರ ಪ್ರತಿಮೆ ಮತ್ತು ಥೀಮ್ ಪಾರ್ಕ್ ಸ್ಥಾಪನೆಗೆ ಸರಕಾರವು 84 ಕೋಟಿ ರೂ. ವಿನಿಯೋಗಿಸುತ್ತಿದೆ. ಈ ಪ್ರತಿಮೆಗೆ ಕೆಂಪೇಗೌಡರ ಆಶಯಗಳನ್ನು ಸಂಕೇತಿಸುವಂತೆ 'ಪ್ರಗತಿ ಪ್ರತಿಮೆ' (ಸ್ಟಾಚ್ಯೂ ಆಫ್ ಪ್ರಾಸ್ಪೇರಿಟಿ) ಎಂದು ನಾಮಕರಣ ಮಾಡಲಾಗುವುದು. ಈ ಉದ್ಘಾಟನಾ ಅಭಿಯಾನವು ರಾಜ್ಯದಲ್ಲಿ ಎಲ್ಲರನ್ನೂ ಒಳಗೊಳ್ಳಲಿದೆ. ನವ ಕರ್ನಾಟಕ ನಿರ್ಮಾಣದ ದೊಡ್ಡ ಹೆಜ್ಜೆಯಾಗಿದೆ. ಇದು ಸರಕಾರದ ಸಮಗ್ರ ಅಭಿವೃದ್ಧಿ ಸಂಕಲ್ಪದ ಸಂಕೇತವಾಗಿದೆ ಎಂದು ಮುಖ್ಯಮಂತ್ರಿಗಳು ಬಣ್ಣಿಸಿದರು.

45 ದಿನಗಳ ಕಾಲ ರಾಜ್ಯಮಟ್ಟದ ಅಭಿಯಾನ
ಸಚಿವ ಮತ್ತು ನಾಡಪ್ರಭು ಕೆಂಪೇಗೌಡ ಪಾರಂಪರಿಕ ಅಭಿವೃದ್ಧಿ ತಾಣಗಳ ಪ್ರಾಧಿಕಾರದ ಉಪಾಧ್ಯಕ್ಷ ಡಾ.ಸಿ ಎನ್ ಅಶ್ವತ್ಥ ನಾರಾಯಣ್ ಮಾತನಾಡಿ, ಬೆಂಗಳೂರಿನ ಇಂದಿನ ಕೀರ್ತಿಗೆ ಈ ನಗರಕ್ಕೆ ಬುನಾದಿ ಹಾಕಿದ ಕೆಂಪೇಗೌಡರೇ ಕಾರಣ. ಅವರ ಪ್ರತಿಮೆ ಉದ್ಘಾಟನೆಗೆ ಪೂರ್ವಭಾವಿಯಾಗಿ ಇಂದಿನಿಂದ 45 ದಿನಗಳ ಕಾಲ ರಾಜ್ಯಮಟ್ಟದ ಅಭಿಯಾನ ನಡೆಯಲಿದೆ. ಇದರ ಅಂಗವಾಗಿ ಎಲ್ಲ ಹಳ್ಳಿಗಳ ವ್ಯಾಪ್ತಿಯ ಕೆರೆಕಟ್ಟೆಗಳು ಮತ್ತು ನದಿಗಳಿಂದ ಪವಿತ್ರವಾದ ಮಣ್ಣು ಮತ್ತು ಜಲ ಸಂಗ್ರಹಿಸಲಾಗುವುದು. ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಮೆ ಲೋಕಾರ್ಪಣೆ ಮಾಡಲಿದ್ದಾರೆ. ಪ್ರಧಾನಿಯವರ ಸಮಯ ನೋಡಿಕೊಂಡು ನವೆಂಬರ್ 1ರಂದು ಅನಾವರಣ ಮಾಡುವ ಉದ್ದೇಶ ಇಟ್ಟುಕೊಂಡಿದ್ದೇವೆ ಎಂದು ಅವರು ವಿವರಿಸಿದರು

31ಜಿಲ್ಲೆಗಳಿಗೆ ಎಲ್ಇಡಿ ವಾಹನ ಸಂಚಾರ
ಕೆಂಪೇಗೌಡರು ದೂರದೃಷ್ಟಿ ಹೊಂದಿದ ನಾಯಕರಾಗಿದ್ದರು. ಅವರಿಂದ ಬೆಂಗಳೂರು ಸುರಕ್ಷಿತ ಮತ್ತು ಸುಭದ್ರವಾಗಿದೆ. ಅಂತಹ ಮಹಾಪುರುಷನ ನೆನಪನ್ನು ರಾಜ್ಯ ಸರಕಾರ ಅಜರಾಮರಗೊಳಿಸುತ್ತಿದೆ. ಅಭಿಯಾನದ ಅಂಗವಾಗಿ 31 ಜಿಲ್ಲೆಗಳಿಗೂ ತಲಾ ಒಂದು ಎಲ್ಇಡಿ ಅಲಂಕೃತ ವಾಹನ ಹೋಗಲಿದೆ. ಇದರಲ್ಲಿ ಪುಣ್ಯಪುರುಷರ ಸಂದೇಶಗಳು ಇರಲಿದ್ದು, ಕೆಂಪೇಗೌಡರನ್ನು ಕುರಿತ ಸಾಕ್ಷ್ಯಚಿತ್ರ ಪ್ರಸಾರವೂ ಆಗಲಿದೆ ಎಂದು ಇದೇ ವೇಳೆ ಸಚಿವರು ತಿಳಿಸಿದರು.

23 ಎಕರೆ ವಿಸ್ತೀರ್ಣದಲ್ಲಿ ಥೀಮ್ ಪಾರ್ಕ್
ಥೀಮ್ ಪಾರ್ಕ್ ಅಭಿವೃದ್ಧಿ ಎರಡು ಹಂತಗಳಲ್ಲಿ ನಡೆಯಲಿದೆ. ಮೊದಲ ಹಂತದ ಕಾಮಗಾರಿ ಇನ್ನು ಒಂಬತ್ತು ತಿಂಗಳಲ್ಲಿ ಮುಗಿಯಲಿದೆ. ಇದಕ್ಕಾಗಿ ಈಗಾಗಲೇ 20 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ. ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರವು ಕೆಂಪೇಗೌಡರ ಜೀವನಕ್ಕೆ ಸಂಬಂಧಿಸಿದ 46 ಸ್ಥಳಗಳಿಗೆ ಕಾಯಕಲ್ಪ ನೀಡುತ್ತಿದೆ.
ಮಾಗಡಿ ತಾಲ್ಲೂಕಿನ ಕೆಂಪಾಪುರವನ್ನು ವೀರಸಮಾಧಿ ತಾಣವನ್ನಾಗಿ ಪೂರ್ಣ ಪ್ರಮಾಣದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದೆ. ಐವತ್ತು ಕೋಟಿ ವೆಚ್ಚದಲ್ಲಿ ಕೆಂಪೇಗೌಡರ ಅಧ್ಯಯನ ಕೇಂದ್ರ ಬೆಂಗಳೂರು ವಿಶ್ವವಿದ್ಯಾಲಯ ಆವರಣದಲ್ಲಿ ತಲೆಎತ್ತಲಿದೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ, ಜಿಲ್ಲಾ ಉಸ್ತುವಾರಿ ಸಚಿವ ಕೆ. ಸುಧಾಕರ್, ಸಚಿವರಾದ ಆರ್.ಅಶೋಕ, ಎಸ್.ಟಿ.ಸೋಮಶೇಖರ್, ಮುನಿರತ್ನ, ನಾರಾಯಣಗೌಡ, ಗೋಪಾಲಯ್ಯ, ಸಂಸದರಾದ ಪಿ.ಸಿ.ಮೋಹನ್, ಜಗ್ಗೇಶ್, ವಿಧಾನ ಪರಿಷತ್ ಮುಖ್ಯ ಸಚೇತಕ ಡಾ.ವೈ.ಎ.ನಾರಾಯಣಸ್ವಾಮಿ, ಶಾಸಕರಾದ ಎಸ್.ಆರ್.ವಿಶ್ವನಾಥ, ಎಲ್.ಎನ್.ನಾರಾಯಣಸ್ವಾಮಿ, ಅ.ದೇವೇಗೌಡ ಮತ್ತಿತರರು ಪಾಲ್ಗೊಂಡಿದ್ದರು.












Click it and Unblock the Notifications