ಬೆಂಗಳೂರು: ಇನ್ನೂ 504 ಒತ್ತುವರಿ ತೆರವು ಬಾಕಿ- ಹೈಕೋರ್ಟ್ಗೆ ಬಿಬಿಎಂಪಿ ಹೇಳಿಕೆ
ಬೆಂಗಳೂರು, 12. ಇತ್ತೀಚೆಗೆ ಬೆಂಗಳೂರು ನಗರದಲ್ಲಿ ಭಾರಿ ಪ್ರವಾಹಕ್ಕೆ ಕಾರಣವಾದ ರಾಜಕಾಲುವೆ ಒತ್ತುವರಿ ತೆರವು ವಿಚಾರದಲ್ಲಿ ಬಿಬಿಎಂಪಿ ನುಡಿದಂತೆ ನಡೆಯುತ್ತಿಲ್ಲ. ಅದು ಸುಮ್ಮನೆ ಬಾಯಿ ಮಾತಿನಲ್ಲಿ ಒತ್ತುವರಿ ವಿರುದ್ಧ ಸಮರೋಪಾದಿಯಲ್ಲಿ ಕ್ರಮ ಜರುಗಿಸಲಾಗುತ್ತಿದೆ ಎಂದು ಹೇಳುತ್ತಿದೆಯಾದರೂ ವಾಸ್ತವದಲ್ಲಿ ಏನೂ ನಡೆಯುತ್ತಿಲ್ಲ.
ಅದಕ್ಕೆ ಪಾಲಿಕೆ ಹೈಕೋರ್ಟ್ಗೆ ಬುಧವಾರ ನೀಡಿರುವ ಅಂಕಿ ಅಂಶಗಳೇ ಸಾಕ್ಷಿ. ಬಿಬಿಎಂಪಿಂಯೇ ಹೇಳಿರುವಂತೆ ಪಾಲಿಕೆ ವ್ಯಾಪ್ತಿಯಲ್ಲಿ ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿದ್ದ 2666 ರ ಪೈಕಿ, 2047 ಪ್ರಕರಣಗಳನ್ನು ತೆರವು ಮಾಡಲಾಗಿದೆ. ಇನ್ನೂ 504 ಒತ್ತುವರಿ ತೆರವು ಬಾಕಿ ಇದೆ ಬಿಬಿಎಂಪಿ ಹೈಕೋರ್ಟ್ಗೆ ತಿಳಿಸಿದೆ.
ಕೆರೆಗಳ ಒತ್ತುವರಿ ತೆರವುಗೊಳಿಸುವಂತೆ ಕೋರಿ ಸಿಟಿಜನ್ ಆಕ್ಷನ್ ಗ್ರೂಪ್ ಸೇರಿದಂತೆ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯನ್ಯಾಯಮೂರ್ತಿ ಆಲೋಕ್ ಆರಾಧೆ ಅವರಿದ್ದ ವಿಭಾಗೀಯ ಪೀಠಕ್ಕೆ ಬಿಬಿಎಂಪಿಯ ರಾಜಕಾಲುವೆ ವಿಭಾಗದ ಮುಖ್ಯ ಎಂಜಿನಿಯರ್ ಎಂ.ಲೋಕೇಶ್ ಒತ್ತುವರಿ ತೆರವಿಗೆ ಸಂಬಂಧಿಸಿದಂತೆ ಅನುಪಾಲನ ವರದಿ ಸಲ್ಲಿಸಿದರು.

110 ವ್ಯಾಜ್ಯ ಬಾಕಿ:
ಬಿಬಿಎಂಪಿ ವ್ಯಾಪ್ತಿಯಲ್ಲಿ ಹೊಸದಾಗಿ ಸಮೀಕ್ಷೆ ನಡೆಸಿ ಗುರುತಿಸಿರುವ 40 ಪ್ರಕರಣಗಳು ಸೇರಿದಂತೆ ಒಟ್ಟು 2666 ರಾಜಕಾಲುವೆ ಒತ್ತುವರಿ ಪ್ರಕರಣಗಳಿವೆ. ಅವುಗಳಲ್ಲಿ ಅಕ್ಟೋಬರ್ 11ರ ಅಂತ್ಯದ ವೇಳೆಗೆ 2047 ಒತ್ತುವರಿಗಳನ್ನು ತೆರವು ಮಾಡಲಾಗಿದೆ. ಇನ್ನುಳಿದಂತೆ 614 ಒತ್ತುವರಿಗಳಲ್ಲಿ 110 ಪ್ರಕರಣಗಳು ವಿವಿಧ ನ್ಯಾಯಾಲಯಗಳಲ್ಲಿ ವಿಚಾರಣಾ ಹಂತದಲ್ಲಿದ್ದು 504 ಒತ್ತುವರಿಗಳು ತೆರವು ಮಾಡಬೇಕಾಗಿದೆ ಎಂದು ಪ್ರಮಾಣ ಪತ್ರದಲ್ಲಿ ತಿಳಿಸಿದ್ದಾರೆ.
ಶೇ.50 ರಷ್ಟು ಕೆರೆ ಒತ್ತುವರಿ ತೆರವು:
ಇದೇ ವೇಳೆ ಬಿಬಿಎಂಪಿ ಪರ ವಕೀರು, ಸುಬ್ರಹ್ಮಣ್ಯ ನಗರ ಮತ್ತು ಬೇಗೂರು ಕೆರೆಗಳಲ್ಲಿ ಒತ್ತುವರಿಯಾಗಿದ್ದ ಶೇ.50 ರಷ್ಟು ಪ್ರಕರಣಗಳನ್ನು ಈಗಾಗಲೇ ತೆರವು ಮಾಡಲಾಗಿದೆ. ಇನ್ನುಳಿದ ಶೇ.50 ರಷ್ಟು ಒತ್ತುವರಿ ತೆರವು ಕಾರ್ಯ ನಡೆಯುತ್ತಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು.
ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ನ್ಯಾಯಪೀಠ, ಸಂಪೂರ್ಣ ತೆರವು ಮಾಡಿ ಅನುಪಾಲನಾ ವರದಿಯನ್ನು ಸಲ್ಲಿಸಲು ಸೂಚನೆ ನೀಡಿ ವಿಚಾರಣೆ ಮುಂದೂಡಿತು.
ಅರ್ಜಿದಾರರಲ್ಲಿ ಒಬ್ಬರ ಪರ ವಕೀಲ ಜಿ.ಆರ್.ಮೋಹನ್, ಸಣ್ಣ ಒತ್ತುವರಿದಾರರ ಪ್ರಕರಣಗಳನ್ನು ಮಾತ್ರ ಬಿಬಿಎಂಪಿ ಗುರುತಿಸಿದೆ. ಆದರೆ, ರಾಜಕಾರಣಿಗಳು ಮತ್ತು ದೊಡ್ಡ ಬಿಲ್ಡರ್ ಕಂಪನಿಗಳ ಒತ್ತುವರಿದಾರರನ್ನು ಕೈಬಿಡಲಾಗಿದೆ ಎಂದು ನ್ಯಾಯಪೀಠಕ್ಕೆ ವಿವರಿಸಿದರು. ವಾದ ಆಲಿಸಿದ ನ್ಯಾಯಪೀಠ, ವಿಚಾರಣೆಯನ್ನು ಅ.14ಕ್ಕೆ ಮುಂದೂಡಿತು.












Click it and Unblock the Notifications