ರಾಜ್ಯಾದ್ಯಂತ ಅಕ್ರಮ ಕಲ್ಲು ಗಣಿಗಾರಿಕೆಯನ್ನು ಸ್ಥಗಿತಗೊಳಿಸಿ: ಆಪ್ ಆಗ್ರಹ
ಬೆಂಗಳೂರು, ಜನವರಿ 23: ಕರ್ನಾಟಕದ ಪ್ರತಿ ಜಿಲ್ಲೆಯಲ್ಲೂ ನೂರಾರು ಅಕ್ರಮ ಕಲ್ಲು ಗಣಿಗಾರಿಕೆ ನಡೆಯುತ್ತಿದ್ದು, ಸ್ಥಳೀಯ ಶಾಸಕರು, ಪ್ರಭಾವಿಗಳೇ ಇದರ ರೂವಾರಿಗಳು. ಇವರಿಂದಲೇ ದುರ್ಘಟನೆಗಳು ನಡೆಯುತ್ತಿದ್ದು, ಅಮಾಯಕರ ಪ್ರಾಣಕ್ಕೆ ಬೆಲೆಯೆ ಇಲ್ಲದಂತಾಗಿದೆ. ಈ ಕೂಡಲೇ ಸರ್ಕಾರ ಇಂತಹ ಅಕ್ರಮ ಕಲ್ಲು ಗಣಿಗಾರಿಕೆಗಳನ್ನು ಸ್ಥಗಿತಗೊಳಿಸಬೇಕು ಎಂದು ಆಮ್ ಆದ್ಮಿ ಪಕ್ಷದ ಬೆಂಗಳೂರು ನಗರ ಉಪಾಧ್ಯಕ್ಷ ಬಿ.ಟಿ.ನಾಗಣ್ಣ ಆಗ್ರಹಿಸಿದರು.
ಶನಿವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿ, ರಾಜ್ಯದ ಮುಖ್ಯಮಂತ್ರಿ ಮತ್ತು ಪ್ರಭಾವಿ ಸಚಿವರ ಜಿಲ್ಲೆಯಲ್ಲಿ ಡೈನಾಮೈಟ್ ಸಿಡಿದು ನಡೆದಿರುವ ಘೋರ ಘಟನೆ ವಿಷಾದನೀಯ. ಪಶ್ಚಿಮ ಘಟ್ಟಗಳ ಸೆರಗಿನಲ್ಲಿ ಇಂತಹ ಅಕ್ರಮ ಗಣಿಗಾರಿಕೆ ತೀರ ಅಪಾಯಕಾರಿ ಎಂದು ಅನೇಕ ವರದಿಗಳನ್ನು ಸರ್ಕಾರಕ್ಕೆ ನೀಡಿದ್ದರೂ, ಯಾವುದೇ ಕ್ರಮ ತೆಗೆದುಕೊಳ್ಳದ ಸರ್ಕಾರ ಪ್ರಭಾವಿಗಳ ಜೊತೆ ಕೈಜೋಡಿಸಿ ಹಫ್ತಾ ವಸೂಲಿಗೆ ನಿಂತಿದೆ ಎಂದು ಆರೋಪಿಸಿದರು.
ಅಕ್ರಮ ಗಣಿಗಾರಿಕೆ ವಿರುದ್ಧ ನಾಗರಿಕರು, ಗ್ರಾಮಸ್ಥರು ಶಿವಮೊಗ್ಗ ಭಾಗದಲ್ಲಿ ಪ್ರತಿಭಟನೆ ನಡೆಸುತ್ತಲೇ ಇದ್ದರು. ಪ್ರತಿಭಟನೆಗೆ ಮಣಿದ ಅಧಿಕಾರಿಗಳು ಅಕ್ರಮ ಗಣಿಗಾರಿಕೆ ನಡೆಸುತ್ತಿರುವವರಿಗೆ ನೋಟಿಸ್ ಜಾರಿ ಮಾಡಿದ್ದರು. ಆಗ ಸಚಿವ ಈಶ್ವರಪ್ಪ ಅವರು ಅಧಿಕಾರಿಗಳ ಮೇಲೆ ಪ್ರಭಾವ ಬೀರಿ ನೋಟಿಸ್ ವಾಪಸ್ಸು ಪಡೆಯುವಂತೆ ಮಾಡಿದ್ದಾರೆ ಎಂದರು.

ಇಡೀ ರಾಜ್ಯದ ಎಲ್ಲಾ ಭಾಗಗಳಲ್ಲೂ ಸೇರಿದಂತೆ ಅನೇಕ ಸೂಕ್ಷ್ಮ ಪ್ರದೇಶಗಳಲ್ಲಿ ನಿಯಮ ಮೀರಿ ಅತಿ ಆಳದವರೆಗೂ ಕಾನೂನು ಬಾಹಿರವಾಗಿ ಗಣಿಗಾರಿಕೆ ನಡೆಸಲಾಗುತ್ತಿದೆ. ಇದಕ್ಕೆ ಸ್ಥಳೀಯ ಪ್ರತಿನಿಧಿಗಳ ಕುಮ್ಮಕ್ಕೂ ಇದೆ. ಇದರಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ರಾಜಸ್ವ ಹಣ ನಷ್ಟವಾಗುತ್ತಿದೆ ಎಂದರು.
ಸರ್ಕಾರವನ್ನು ನಂಬಿಕೊಂಡರೆ ಸೂಕ್ತ ತನಿಖೆ ನಡೆಸುತ್ತದೆ ಎನ್ನುವ ನಂಬಿಕೆ ಇಲ್ಲ. ಆದ ಕಾರಣ ಹೈಕೋರ್ಟ್ ನ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಸಮಿತಿ ರಚಿಸಬೇಕು ಎಂದು ಒತ್ತಾಯಿಸಿದರು.
ಅಕ್ರಮವಾಗಿ ನಡೆಯುತ್ತಿರುವ ಎಲ್ಲಾ ಗಣಿಗಾರಿಕೆಗಳನ್ನೂ ಈ ಕೂಡಲೇ ಸ್ಥಗಿತಗೊಳಿಸಬೇಕು ಮತ್ತು ಅಕ್ರಮ ಗಣಿಗಾರಿಕೆಗೆ ಕಾರಣಕರ್ತರಾದ ಸರ್ಕಾರಿ ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು, ಶಾಸಕರಿಗೆ ಸರ್ಕಾರ ಬಿಸಿ ಮುಟ್ಟಿಸಬೇಕು ಎಂದರು.












Click it and Unblock the Notifications