ಬೆಂಗಳೂರು: ಉಚಿತ ಬಸ್ಪಾಸ್ಗೆ ಆಗ್ರಹಿಸಿ ಶಾಲಾ-ಕಾಲೇಜುಗಳು ಬಂದ್
ಬೆಂಗಳೂರು, ಜು.21: ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವಂತೆ ಒತ್ತಾಯಿಸಿ ಬೆಂಗಳೂರಿನಲ್ಲಿ ಶಾಲಾ-ಕಾಲೇಜುಗಳನ್ನು ಸ್ವಯಂಪ್ರೇರಿತವಾಗಿ ಬಂದ್ ಮಾಡಲಾಗಿದೆ.
ವಿದ್ಯಾರ್ಥಿಗಳು ತರಗತಿಗಳಿಗೆ ಬಾರದೆ ಪ್ರತಿಭಟನೆಗೆ ಕರೆ ಕೊಟ್ಟಿದ್ದಾರೆ, ಎಬಿವಿಪಿ ಸೇರಿದಂತೆ ವಿವಿಧ ವಿದ್ಯಾರ್ಥಿ ಸಂಘಟನೆಗಳು ಇದರಲ್ಲಿ ಭಾಗಿಯಾಗಿದೆ. ಕಾಲೇಜುಗಳಲ್ಲಿ ಪ್ರತಿ ತರಗತಿಯಲ್ಲಿ ಐದರಿಂದ ಆರು ವಿದ್ಯಾರ್ಥಿಗಳು ಮಾತ್ರ ಹಾಜರಾಗಿದ್ದಾರೆ.
ಮೊಬೈಲ್ನಲ್ಲಿ ವಿದ್ಯಾರ್ಥಿ ಬಿಎಂಟಿಸಿ ಬಸ್ಪಾಸ್ ಪಡೆಯಲು ಹೀಗೆ ಮಾಡಿ
ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಪ್ರತಿ ವಿದ್ಯಾರ್ಥಿಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಉಚಿತ ಬಸ್ಪಾಸ್ ನೀಡುವಂತೆ ಭರವಸೆ ನೀಡುವವರೆಗೂ ಪ್ರತಿಭಟನೆ ಮುಂದುವರೆಯುತ್ತದೆ ಎಂದು ವಿದ್ಯಾರ್ಥಿಗಳು ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಬಹುತೇಕ ಶಾಲಾ-ಕಾಲೇಜುಗಳು ಬಂದ್ ಆಗಿವೆ. ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ ಕೊಟ್ಟ ಮಾತನ್ನು ಉಳಿಸಿಕೊಳ್ಳಬೇಕು ಮತ್ತು ಈಗಾಗಲೇ ಬಸ್ ಪಾಸ್ ಪಡೆದ ವಿದ್ಯಾರ್ಥಿಗಳಿಗೆ ಹಣ ವಾಪಸ್ಸು ಮಾಡಬೇಕೆಂಬ ಬೇಡಿಕೆಗಳನ್ನು ವಿದ್ಯಾರ್ಥಿಗಳು ಮುಂದಿಟ್ಟಿದ್ದಾರೆ.
ಈ ಸಂಬಂಧ ಸಿಎಂ ಅವರಿಗೆ ಮನವಿ ಪತ್ರವನ್ನು ನೀಡಲಾಗಿದೆ. ಆದರೆ ಈ ಬಗ್ಗೆ ತಲೆಕೆಡಿಸಿಕೊಳ್ಳದ ಹಿನ್ನೆಲೆಯಲ್ಲಿ ನಾಳೆ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್(ಎಐಡಿಎಸ್ಓ), ಆಲ್ ಇಂಡಿಯಾ ಡೆಮಾಕ್ರೆಟಿಕ್ ಯೂತ್ ಆರ್ಗನೈಸೇಷನ್(ಎಐಡಿವೈಓ) ಹಾಗೂ ಆಲ್ ಇಂಡಿಯಾ ಮಹಿಳಾ ಸಾಂಸ್ಕೃತಿಕ ಸಂಘಟನೆಗಳು ಬಂದ್ಗೆ ಕರೆ ನೀಡಿವೆ.