ದ್ವಿತೀಯ ಪಿಯುಸಿ ಅಂಕಗಳ ಗೊಂದಲ, ಪ್ರತಿಭಟನೆ
ಬೆಂಗಳೂರು, ಮೇ 22 : ಮೇ 26ರಂದು ಪ್ರಕಟಗೊಳ್ಳಬೇಕಾಗಿದ್ದ ಸಿಇಟಿ ಪರೀಕ್ಷೆ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮುಂದೂಡಿದೆ. ದ್ವಿತೀಯ ಪಿಯುಸಿ ಅಂಕಗಳ ಗೊಂದಲದ ಹಿನ್ನಲೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಸಮಯ 12.30 : 'ಮೌಲ್ಯಮಾಪನ ಮಾಡುವಾಗ ಎಚ್ಚರ ವಹಿಸಬೇಕು. ಇದನ್ನೆಲ್ಲ ನಿಮಗೆ ಹೊಸದಾಗಿ ಹೇಳಿಕೊಡಬೇಕೆ?' ಎಂದು ಸಚಿವ ಕಿಮ್ಮನೆ ರತ್ನಾಕರ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಪೋಷಕರು ಮತ್ತು ವಿದ್ಯಾರ್ಥಿಗಳನ್ನು ಸಮಾಧಾನಪಡಿಸುತ್ತೇವೆ ಎಂದು ಸಚಿವರಿಗೆ ಅಧಿಕಾರಿಗಳು ಭರವಸೆ ನೀಡಿದ್ದಾರೆ.

ಸಮಯ 12.15 : ವಿಧಾನಸೌಧದಲ್ಲಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಸಭೆ ಆರಂಭವಾಗಿದೆ. ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಜಕುಮಾರ್ ಕತ್ರಿ, ಜಂಟಿ ನಿರ್ದೇಶಕ ರಿತ್ತಿ ಮುಂತಾದ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದಾರೆ.
ಸಮಯ 12 ಗಂಟೆ : ದ್ವಿತೀಯ ಪಿಯುಸಿ ಪರೀಕ್ಷೆ ಅಂಕಗಳ ಗೊಂದಲ ಮುಂದುವರೆದಿರುವಂತೆಯೇ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಮೊಹಮದ್ ಮೊಹಸೀನ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. [2015ರ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ]
ಸಮಯ 11.45 : ಮಾಜಿ ಸಚಿವ ಮತ್ತು ಬಿಜೆಪಿ ನಾಯಕ ಸುರೇಶ್ ಕುಮಾರ್ ಪಿಯು ಬೋರ್ಡ್ ಕಚೇರಿಗೆ ಆಗಮಿಸಿದ್ದು, ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ನೀಡಿದ್ದಾರೆ. ಗೊಂದಲವನ್ನು ತಕ್ಷಣ ಬಗೆಹರಿಸಬೇಕು ಎಂದು ಸರ್ಕಾರವನ್ನು ಒತ್ತಾಯಿಸಿದ್ದಾರೆ.[ಫಲಿತಾಂಶ : ಯಾವ ಜಿಲ್ಲೆಗೆ ಯಾವ ಸ್ಥಾನ]
ಸಮಯ 11 ಗಂಟೆ : ದ್ವಿತೀಯ ಪಿಯು ಮೌಲ್ಯಮಾಪನ ಮತ್ತು ಫಲಿತಾಂಶ ಪ್ರಕಟಣೆಯಲ್ಲಿ ಉಂಟಾಗಿರುವ ಗೊಂದಲವನ್ನು ಸರಿಪಡಿಸುವಂತೆ ಆಗ್ರಹಿಸಿ ವಿದ್ಯಾರ್ಥಿಗಳು ಪದವಿಪೂರ್ವ ಶಿಕ್ಷಣ ಇಲಾಖೆ ಮುಂದೆ ಶುಕ್ರವಾರ ಪತ್ರಿಭಟನೆ ಮುಂದುವರೆಸಿದ್ದಾರೆ. ಮೇ 26ರಂದು ಪ್ರಕಟಗೊಳ್ಳಲಿರುವ ಸಿಇಟಿ ಪರೀಕ್ಷೆ ಫಲಿತಾಂಶವನ್ನು ಮುಂದೂಡಬೇಕು ಎಂಬುದು ವಿದ್ಯಾರ್ಥಿಗಳ ಒತ್ತಾಯವಾಗಿದೆ. [ಪಿಯು ಗೊಂದಲ : ಕಡೆಗೂ ಎಚ್ಚೆತ್ತ ಕಿಮ್ಮನೆ ರತ್ನಾಕರ]
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ವಿಧಾನಸೌಧದಲ್ಲಿ ಇಲಾಖೆಯ ಅಧಿಕಾರಿಗಳ ಸಭೆ ನಡೆಸುತ್ತಿದ್ದು, ಮಧ್ಯಾಹ್ನ 1 ಗಂಟೆಗೆ ಪತ್ರಿಕಾಗೋಷ್ಠಿ ನಡೆಸುವುದಾಗಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ವಿದ್ಯಾರ್ಥಿಗಳಿಗೆ ಎಚ್ಡಿಕೆ ಬೆಂಬಲ : ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಬೆಂಬಲ ನೀಡಿದ್ದು, ಪಿಯು ಕಚೇರಿಗೆ ಆಗಮಿಸಿದರು. 'ಸರ್ಕಾರ ವಿದ್ಯಾರ್ಥಿಗಳ ಬದುಕಿನೊಂದಿಗೆ ಆಟವಾಡದೆ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮತ್ತು ಫಲಿತಾಂಶದಲ್ಲಿರುವ ಗೊಂದಲವನ್ನು ಬಗೆಹರಿಸಬೇಕು' ಎಂದು ಅವರು ಒತ್ತಾಯಿಸಿದರು.













Click it and Unblock the Notifications