ಕಾವೇರಿಗೆ ಕನ್ನ ಹಾಕಿದ ಸಬ್ ರಿಜಿಸ್ಟ್ರಾರ್ಗಳಿಗೆ ಬಂಧನ ಭೀತಿ
ಬೆಂಗಳೂರು, ನವೆಂಬರ್ 5: 'ಕಾವೇರಿ' ವೆಬ್ಸೈಟ್ಗೆ ಕನ್ನ ಹಾಕಿದ್ದ ಸಬ್ ರಿಜಿಸ್ಟ್ರಾರ್ಗಳಿಗೆ ಬಂಧನ ಭೀತಿ ಎದುರಾಗಿದೆ.
ಈ ವಿವಾದದ ಕುರಿತು ವಿಚಾರಣೆಗೆ ಹಾಜರಾಗುವಂತೆ ಲಗ್ಗೆರೆ, ಮಾದನಾಯಕನಹಳ್ಳಿ, ಪೀಣ್ಯ, ಕೆಂಗೇರಿ, ದಾಸನಪುರ ಸಬ್ ರಿಜಿಸ್ಟ್ರಾರ್ಗಳಿಗೆ ನೋಟಿಸ್ ನೀಡಲಾಗಿತ್ತು.
ರಾಜ್ಯ ನೋಂದಣಿ ಮತ್ತು ಮುದ್ರಾಂಕ ಇಲಾಖೆಯ ಕಾವೇರಿ ವೆಬ್ಸೈಟ್ ತಿರುಚಿ ನಿವೇಶನಗಳ ಅಕ್ರಮ ಪರಭಾರೆ ಕುರಿತು 18 ಸಬ್ ರಿಜಿಸ್ಟ್ರಾರ್ಗಳಿಗೆ ಭೀತಿ ಎದುರಾಗಿದೆ. ಆದರೆ ಇದಕ್ಕೆ ಯಾವುದೇ ಸ್ಪಂದನೆ ಲಭ್ಯವಾಗಿಲ್ಲ. ಹಾಗಾಗಿ ಇದರಲ್ಲಿ ಸಬ್ ರಿಜಿಸ್ಟ್ರಾರ್ಗಳ ಕೈವಾಡವಿದೆ ಎಂದು ಪೊಲೀಸರು ಅನುಮಾನ ವ್ಯಕ್ತಪಡಿಸಿದ್ದಾರೆ.
ಪ್ರಕರಣದ ಕುರಿತು ಡಿಸಿಪಿ ರವಿಕುಮಾರ್ ನೇತೃತ್ವದ ತಂಡ ಕಾರ್ಯಾಚರಣೆ ಮುಂದುವರೆಸಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ಸಬ್ ರಿಜಿಸ್ಟ್ರಾರ್ ಕಚೇರಿಗಳ ಮೇಲೆ ದಾಳಿ ನಡೆಸಿ ಕಂಪ್ಯೂಟರ್ ಸೇರಿದಂತೆ ಹಲವು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಾವೇರಿ ವೆಬ್ಸೈಟ್ ಪ್ರಕರಣದ ಕುರಿತು ದೂರುದಾರರಿಂದ ಕೆಲವು ದಾಖಲೆಗಳನ್ನು ನೀಡುವಂತೆ ಕೇಳಲಾಗಿತ್ತು. ಆದರೆ ಇದುವರೆಗೆ ಅವರಿಂದ ಯಾವುದೇ ದಾಖಲೆಗಳು ಲಭ್ಯವಾಗಿಲ್ಲ ಎಂದು ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಕೆಲವು ಅಧಿಕಾರಿಗಳ ಪಾತ್ರ ಕುರಿತು ನಿಖರ ಮಾಹಿತಿ ನಮಗೆ ಲಭ್ಯವಾಗಿದೆ. ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಕೂಡ ನೀಡಲಾಗಿದೆ. ಒಂದು ವೇಳೆ ವಿಚಾರಣೆಗೆ ಹಾಜರಾಗದಿದ್ದಲ್ಲಿ ಶಿಸ್ತು ಕ್ರಮ ಜರುಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ.