ಕೊವಿಡ್ 19: ತಜ್ಞರು ನೀಡಿದ ಸಲಹೆಯೇನು? ಸರ್ಕಾರ ತೆಗೆದುಕೊಂಡ ಕ್ರಮಗಳೇನು?
ಬೆಂಗಳೂರು, ಮಾರ್ಚ್ 17: ಕೊವಿಡ್ 19 ಪ್ರಕರಣಗಳ ಸಂಖ್ಯೆಯು ಬೆಂಗಳೂರು ಹಾಗೂ ಮಹಾರಾಷ್ಟ್ರ ಮತ್ತು ಕೇರಳ ರಾಜ್ಯಗಳ ಗಡಿಯಲ್ಲಿರುವ ಜಿಲ್ಲೆಗಳಲ್ಲಿ ಹೆಚ್ಚಾಗುತ್ತಿವೆ. ಈ ಹಿನ್ನೆಲೆಯಲ್ಲಿ ಮಾರ್ಚ್ 15 ರಂದು ತಜ್ಞರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗಿತ್ತು. ಸಭೆಯಲ್ಲಿ ಅನೇಕ ಕ್ರಮಗಳನ್ನು ಸೂಚಿಸಿದ್ದರು. ಈ ಪೈಕಿ ರಾಜ್ಯ ಸರ್ಕಾರ ಯಾವ ಕ್ರಮಗಳನ್ನು ಕೈಗೊಂಡಿದೆ ಎಂಬುದರ ಬಗ್ಗೆ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
Recommended Video
ರಾಜ್ಯದಲ್ಲಿ 2020ರ ಆಗಸ್ಟ್ ತಿಂಗಳಿಂದ ಅಕ್ಟೋಬರ್ವರೆಗೆ ಕೋವಿಡ್ 19 ಸೋಂಕು ತೀವ್ರಗೊಂಡಿತ್ತು. ನವೆಂಬರ್ನಿಂದ ಪ್ರಕರಣಗಳ ಸಂಖ್ಯೆಯಲ್ಲಿ ಇಳಿಕೆಯಾಗತೊಡಗಿತು. ಡಿಸೆಂಬರ್ನಲ್ಲಿ ಇನ್ನೂ ಹೆಚ್ಚಿನ ಇಳಿಕೆಯಾಯಿತು. ಆದರೆ ಕಳೆದ 10 ದಿನಗಳಲ್ಲಿ ಕೋವಿಡ್ 19 ಪ್ರಕರಣಗಳು ಮತ್ತೆ ಏರುಗತಿಯಲ್ಲಿವೆ. ಪಾಸಿಟಿವಿಟಿ ರೇಟ್ ಮಾರ್ಚ್ 15 ರಂದು ಶೇ. 1.65ರಷ್ಟು ವರದಿಯಾಗಿದೆ ಎಂದು ಸುಧಾಕರ್ ಹೇಳಿದರು.

ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳು:
- ಕೋವಿಡ್ 19 ರ ವಿರುದ್ಧ ಮುನ್ನೆಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳುವ ಕುರಿತು ಜಾಗೃತಿ ಅಭಿಯಾನ ಹಮ್ಮಿಕೊಳ್ಳುವುದು.
- ಮಾಸ್ಕ್ ಧಾರಣೆ ಕಡ್ಡಾಯಗೊಳಿಸುವುದು ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜನಸಂದಣಿಯಾಗದಂತೆ ಮುನ್ನೆಚ್ಚರಿಕೆ ವಹಿಸುವ ಕುರಿತು ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
- ಮದುವೆ ಮತ್ತು ಇತರ ಸಮಾರಂಭಗಳಲ್ಲಿ ಮಾರ್ಗಸೂಚಿಯಲ್ಲಿ ನಿಗದಿಪಡಿಸಿದ್ದಕ್ಕಿಂತ ಹೆಚ್ಚಿನ ಜನ ಸೇರದಂತೆ ಮುನ್ನೆಚ್ಚರಿಕೆ ವಹಿಸುವುದು.
- ಕೋವಿಡ್ ಸೋಂಕಿತರಿಗಾಗಿ ಹೆಚ್ಚುವರಿ ಹಾಸಿಗೆಗಳು, ಐಸಿಯುಗಳನ್ನು ಮೀಸಲಿಡಲು ಕ್ರಮ ಕೈಗೊಳ್ಳಲಾಗುತ್ತಿದೆ.
- ಬೆಂಗಳೂರಿನಲ್ಲಿ 3 ಕೋವಿಡ್ ಕೇರ್ ಸೆಂಟರ್ಗಳನ್ನು ಸ್ಥಾಪಿಸಲು ನಿರ್ಧಾರ.
- ಇದರೊಂದಿಗೆ ರಾಜ್ಯದಲ್ಲಿರುವ 3500 ಕ್ಕೂ ಹೆಚ್ಚಿನ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಅಭಿಯಾನವನ್ನು ತೀವ್ರಗೊಳಿಸಲಾಗುವುದು.
- ಪ್ರತಿ ದಿನ 3 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ.
- ಭಾರತ ಸರ್ಕಾರದ ನೀತಿಯಂತೆ ಆರೋಗ್ಯ ಕೇಂದ್ರಗಳಲ್ಲಿ ಮಾತ್ರ ಲಸಿಕೆ ನೀಡಬೇಕಾಗಿದೆ. ವೃದ್ಧಾಶ್ರಮಗಳಲ್ಲಿ, ಅಪಾರ್ಟ್ ಮೆಂಟ್ ಗಳಲ್ಲಿ ಹಾಗೂ ದುರ್ಗಮ ಪ್ರದೇಶಗಳಲ್ಲಿ ಲಸಿಕೆ ಅಭಿಯಾನ ಕೈಗೊಳ್ಳಲು ಅನುಮತಿ ಕೋರಲಾಯಿತು.
ಇಂತಹ ಸ್ಥಳಗಳಲ್ಲಿ ಲಸಿಕೆ ಕೇಂದ್ರದಲ್ಲಿ ಒದಗಿಸುವ ಎಲ್ಲ ಸೌಲಭ್ಯಗಳು, ಅಂಬ್ಯುಲೆನ್ಸ್ ಹಾಗೂ ಸಾಕಷ್ಟು ಸಂಖ್ಯೆಯ ಆರೋಗ್ಯ ಕಾರ್ಯಕರ್ತರನ್ನು ನಿಯೋಜಿಸಲು ಕ್ರಮ ಕೈಗೊಳ್ಳಲಾಗುವುದು ಎಂಬ ಅಂಶವನ್ನು ಪ್ರಧಾನಿಯವರ ಗಮನಕ್ಕೆ ತರಲಾಯಿತು ಎಂದರು.












Click it and Unblock the Notifications