Suhas Shetty: ಸುಹಾಸ್ ಕೇಸ್ನಲ್ಲಿ ತುಷ್ಟೀಕರಣ ಸಾಧ್ಯವೇ ಇಲ್ಲ! ದಿನೇಶ್ ಗುಂಡೂರಾವ್ ಮಹತ್ವದ ಹೇಳಿಕೆ
ಬೆಂಗಳೂರು, ಮೇ 02: ಕರಾವಳಿ ಭಾಗದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮತ್ತೊಂದು ಕೋಮು ಹಿಂಸಾಚಾರಕ್ಕೆ, ವ್ಯಕ್ತಿ ಹತ್ಯೆಗೆ ಸಾಕ್ಷಿಯಾಗಿದ್ದು, ರಾಜ್ಯವನ್ನೇ ತಲ್ಲಣಗೊಳಿಸಿದೆ. ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಕೊಲೆಯಾಗಿದೆ. ಭೀಕರ ಹತ್ಯೆ ಮಾಡಿ ಪರಾರಿಯಾಗಿದ್ದಾರೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ಈ ಘಟನೆ ಅತ್ಯಂತ ಭೀಭತ್ಸ್ಯ ಮತ್ತು ಆಘಾತಕಾರಿ. ಸೂಕ್ತ ಕ್ರಮಗಳಿಗೆ ಅವರು ಆಗ್ರಹಿಸಿದ್ದಾರೆ.
ಸುದ್ದಿಗಾರರ ಜೊತೆಗೆ ಶುಕ್ರವಾರ ಮಾತನಾಡಿದ ಅವರು, ಮಂಗಳೂರಿನ ಬಜಪೆಯಲ್ಲಿ ನಡೆದ ಸುಹಾಸ್ ಶೆಟ್ಟಿ ಕೊಲೆಯಿಂದ ವೈಯಕ್ತಿಕವಾಗಿ ನಾನು ವಿಚಲಿತನಾಗಿದ್ದೇನೆ. ಮೇಲ್ನೋಟಕ್ಕೆ ಈ ಕೃತ್ಯ ಹಳೆ ದ್ವೇಷಕ್ಕೆ ನಡೆದಂತೆ ಕಂಡು ಬಂದರೂ ಇದರ ಹಿಂದಿನ ಉದ್ದೇಶ ಕರಾವಳಿಯಲ್ಲಿ ಶಾಂತಿ ಭಂಗ ಮಾಡುವಂತಿದೆ. ಹಾಗಾಗಿ ಈ ಕೃತ್ಯ ಎಸಗಿದ ಕ್ರಿಮಿಗಳ ವಿರುದ್ಧ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಲಿದೆ ಎಂದು ಎಚ್ಚರಿಸಿದರು.

ಸುಹಾಸ್ ಶೆಟ್ಟಿ ಹತ್ಯೆಯಲ್ಲಿ ಭಾಗಿಯಾದ ದುಷ್ಕರ್ಮಿಗಳನ್ನು ಯಾವುದೇ ಕಾರಣಕ್ಕೂ ರಕ್ಷಿಸುವ ಪ್ರಶ್ನೆಯೇ ಇಲ್ಲ. ಇಲ್ಲಿ ಯಾರ ಓಲೈಕೆಯೂ ಇಲ್ಲ., ಯಾರ ತುಷ್ಠೀಕರಣವೂ ಇಲ್ಲ. ಈಗಾಗಲೇ ಈ ಕೃತ್ಯದ ಕುರಿತು ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದಿದ್ದೇನೆ. ಹತ್ಯೆ ನಡೆಸಿದ ದುಷ್ಕರ್ಮಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮಕ್ಕೆ ಪೊಲೀಸರಿಗೆ ಸೂಚಿಸಿದ್ದೇನೆ ಎಂದರು.
ಬಿಜೆಪಿಯವರು ಈಗಾಗಲೇ ಸುಹಾಸ್ ಪ್ರಕರಣವನ್ನು ರಾಜಕೀಯ ಮಾಡಲು ಹೊರಟಿದ್ದಾರೆ. ಹೆಣದ ಮೇಲೆ ರಾಜಕೀಯ ಮಾಡಲು ಹೊರಟಿರುವ ಬಿಜೆಪಿಯವರಿಗೆ ಒಂದು ಮಾತು. ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ದಾರಿ ನಿಮ್ಮದು ಕೂಡ ಇದೆ. ದ್ವೇಷ ಹರಡುವ ಮೂಲಕ, ಪ್ರಚೋದಿಸುವ ಮೂಲಕ ಮಂಗಳೂರಿನಲ್ಲಿ ಶಾಂತಿ ಭಂಗ ಮಾಡುವ ದುಷ್ಟ ಕೆಲಸಕ್ಕೆ ಕೈ ಹಾಕಬೇಡಿ. ಜವಾಬ್ದಾರಿಯಿಂದ ವರ್ತಿಸಿ ಎಂದು ಮನವಿ ಮಾಡಿದ್ದಾರೆ.
ಕೊಲೆಯಾದ ಸುಹಾಸ್ ಕುಟುಂಬಕ್ಕೆ ನ್ಯಾಯ ಕೊಡಿಸುವುದು ನಮ್ಮ ಸರ್ಕಾರದ ಜವಾಬ್ದಾರಿ. ನಾವು ಕೇವಲ ಬಾಯಿ ಮಾತಿನಲ್ಲಿ ಕಠಿಣ ಕ್ರಮದ ಭರವಸೆ ನೀಡುವವರಲ್ಲ. ಬದಲಿಗೆ ಕಾನೂನಿನ ಅನುಸಾರ ಈ ಕೃತ್ಯ ಎಸಗಿದವರಿಗೆ ತಕ್ಕ ಪಾಠ ಕಲಿಸುವವರು. ಇದು ನಿಶ್ಚಿತ ಎಂದು ಅವರು ಗುಡುಗಿದರು.
ಅಂತಿಮವಾಗಿ ಭೀಕರ ಕೃತ್ಯದಲ್ಲಿ ಜೀವ ಕಳೆದುಕೊಂಡ ಸುಹಾಸ್ ಶೆಟ್ಟಿ ಆತ್ಮಕ್ಕೆ ಶಾಂತಿ ಬೇಡುತ್ತೇನೆ. ಸುಹಾಸ್ ಅಗಲಿಕೆಯ ನೋವಿನಿಂದ ಬಳಲುತ್ತಿರುವ ಅವರ ಕುಟುಂಬಕ್ಕೆ ನನ್ನ ಕಡೆಯಿಂದ ಮನಃಪೂರ್ವಕ ಸಾಂತ್ವಾನ ತಿಳಿಸಿದ್ದಾರೆ.
ಸುನೀಲ್ ಕುಮಾರ್ ಹೇಳಿದ್ದೇನು?
ನೆನ್ನೆ ರಾತ್ರಿ ಸುಹಾಸ್ ಶೆಟ್ಟಿ ಹತ್ಯೆ ನಡೆಯುತ್ತಿದ್ದಂತೆ ಪ್ರತಿಕ್ರಿಯಿಸಿದ್ದಾರೆ ಬಿಜೆಪಿ ಮಾಜಿ ಸಚಿವ ಸುನೀಲ್ ಕುಮಾರ್ ಇಂದು ಬಳಗ್ಗೆ ತಮ್ಮ ಟ್ವಿಟ್ಗಳನ್ನು ಡಿಲೀಟ್ ಮಾಡಿದ್ದಾರೆ. ನಂತರ ಮತ್ತೆ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಕಾನೂನು - ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದಿದೆ. ಮಂಗಳೂರಿನಲ್ಲಿ ಹಿಂದು ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಖಂಡನೀಯ. ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿಂದು ಕಾರ್ಯಕರ್ತರ ರಕ್ಷಣೆ ಇಲ್ಲ ಎಂದು ಹೇಳಿದ್ದಾರೆ.
ಪಾಕಿಸ್ತಾನ ಜಿಂದಾಬಾದ್ ಎಂದವರ ಪರ ಕಾಳಜಿ ತೋರುವ ಸರ್ಕಾರ ಹಿಂದು ಕಾರ್ಯಕರ್ತನ ಹತ್ಯೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತಪ್ಪಿತಸ್ಥರಿಗೆ ಉಗ್ರ ಶಿಕ್ಷೆ ನೀಡಬೇಕೆಂದು ನಾನು ಬಯಸುತ್ತೇನೆ ಎಂದು ಅವರು ಆಗ್ರಹಿಸಿದ್ದಾರೆ.












Click it and Unblock the Notifications