ಬೆಂಗಳೂರು ಗ್ರಾಮಾಂತರದಿಂದ ಸುಮಲತಾ ಸ್ಪರ್ಧೆ, ಮಹತ್ವದ ಹೆಜ್ಜೆ ಇಟ್ಟ ಯೋಗೇಶ್ವರ್!
ಬೆಂಗಳೂರು ಫೆಬ್ರವರಿ 14: ಲೋಕಸಭಾ ಚುನಾವಣೆಗೆ ಪ್ರಬಲ ಪಕ್ಷಗಳ ತಯಾರಿ ಜೋರಾಗಿದೆ. ಟಿಕೆಟ್ ಆಕಾಂಕ್ಷಿಗಳು ಹೈಕಮಾಂಡ್ ಮಟ್ಟದಲ್ಲಿ ಲಾಬಿ ಶುರುಮಾಡಿದ್ದಾರೆ. ಈ ಬಾರಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಒಟ್ಟಾಗಿ ಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿವೆ. ಈ ಮೈತ್ರಿ ಬಿಜೆಪಿ ಪ್ರಾಬಲ್ಯ ಹೊಂದಿರುವ ಕ್ಷೇತ್ರದಲ್ಲಿ ಜೆಡಿಎಸ್ಗೆ ಹಾಗೂ ಜೆಡಿಎಸ್ ಪ್ರಾಬಲ್ಯ ಹೊಂದಿರುವ ಕ್ಷೇತ್ರಗಳಲ್ಲಿ ಬಿಜೆಪಿ ಆಕಾಂಕ್ಷಿಗಳಿಗೆ ನಿರಾಸೆ ತಂದಿದೆ. ಈ ಮನಸ್ತಾಪದ ಕಿಚ್ಚು ವಿಶೇಷವಾಗಿ ಮಂಡ್ಯದಲ್ಲಿ ಹೆಚ್ಚಾಗಿದೆ.
ಹೀಗಾಗಿ ಮಂಡ್ಯ ಮೈತ್ರಿ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ನಡುವಿನ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ. ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಲ್ಲಿ ಅಸಮಾಧಾನದ ಅಲೆ ಮಂಡ್ಯದಲ್ಲಿ ಹೆಚ್ಚಾಗಿದೆ. ಮಂಡ್ಯವನ್ನು ಕೈಗೆತ್ತಿಕೊಳ್ಳುವಲ್ಲಿ ಜೆಡಿಎಸ್ ಮುಂದಾಗಿದೆ. ಇದರಿಂದ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಬೇರೆಡೆ ಅವಕಾಶ ಕಲ್ಪಿಸಬೇಕಾಗಿದ್ದು, ಬೆಂಗಳೂರು ಗ್ರಾಮಾಂತರ ಲೋಕಸಭಾ ಸ್ಥಾನ ನೀಡುವ ಮೂಲಕ ಅವರನ್ನು ಸಮಾಧಾನಪಡಿಸಲು ಪಕ್ಷದ ಹೈಕಮಾಂಡ್ ಮುಂದಾಗಿದೆ.

ಈ ಸಮೀಕರಣಗಳ ಮೇಲೆ ತೀವ್ರ ನಿಗಾ ಇಟ್ಟುಕೊಂಡು ಬೆಂಗಳೂರು ಗ್ರಾಮಾಂತರದ ಮೇಲೆ ಕಣ್ಣಿಟ್ಟಿದ್ದ ಎಂಎಲ್ಸಿ ಸಿ.ಪಿ.ಯೋಗೇಶ್ವರ ಅವರು ಚುರುಕಿನ ಹೆಜ್ಜೆ ಇಟ್ಟಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಅವರೊಂದಿಗೆ ಈ ಹಿಂದೆ ಮಾತುಕತೆ ನಡೆಸಿದ್ದ ಯೋಗೇಶ್ವರ ಅವರು ದೇವೇಗೌಡರನ್ನು ಭೇಟಿ ಮಾಡಿದರು. ಭಾನುವಾರ ಸಂಜೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಭೇಟಿ ಮಾಡಿ ಯೋಗಿಶ್ವರ್ ಹಿಂದಿನ ಚುನಾವಣೆಗಳ ಅಂಕಿಅಂಶಗಳನ್ನು ಅವಲೋಕಿಸಿದ್ದಾರೆ.
2009ರ ಲೋಕಸಭೆ ಚುನಾವಣೆಯಲ್ಲಿ ಅವರು 3.6 ಲಕ್ಷ ಮತಗಳನ್ನು ಗಳಿಸಿದ್ದರೆ, ಮಾಜಿ ಸಿಎಂ ಎಚ್ಡಿ ಕುಮಾರಸ್ವಾಮಿ ಅವರು 4.9 ಲಕ್ಷ ಮತಗಳನ್ನು ಗಳಿಸಿದ್ದರು. ಹೀಗಾಗಿ ಯೋಗೇಶ್ವರ ಅವರು ತಾವು ಬಿಜೆಪಿ-ಜೆಡಿಎಸ್ ಇತರ ಅಭ್ಯರ್ಥಿಗಳಿಗಿಂತ ಉತ್ತಮ ಎಂದು ಗೌಡರಿಗೆ ಮನವರಿಕೆ ಮಾಡಲು ಪ್ರಯತ್ನಿಸಿದರು. ಏಕೆಂದರೆ ಅವರು ಎರಡೂ ಪಕ್ಷಗಳ ಮತಗಳನ್ನು ಗಳಿಸಿದರೆ ಅಧಿಕ ಮತಗಳಿಂದ ಜಯ ಗಳಿಸಬಹುದು ಎಂದು ದಳಪತಿಗೆ ವಿವರಿಸಿದ್ದಾರೆ. ಇದರಿಂದ ಮೈತ್ರಿ ಪಕ್ಷದ ಗೆಲುವಿಗೆ ಸಾಧ್ಯವಾಗುತ್ತದೆ ಎಂದು ಗೌಡರಿಗೆ ಮನವರಿಗೆ ಮಾಡಿದ್ದಾರೆ. ಜೊತೆಗೆ ಬಿಜೆಪಿ ಅಭ್ಯರ್ಥಿಗಳ ಆಯ್ಕೆಯಲ್ಲೂ ಅವರ ಹೆಸರು ಮುಂಚಿಣಿಯಲ್ಲಿದೆ.

ಇನ್ನೂ ಮಂಡ್ಯ ಜಿಲ್ಲೆಯ ಪಕ್ಕದ ರಾಮನಗರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸುಮಲತಾ ಕಣಕ್ಕಿಳಿಯಲು ರಾಮನಗರ ಕ್ಷೇತ್ರ ಕಾಂಗ್ರೆಸ್ ನ ಭದ್ರಕೋಟೆಯಾಗಿದೆ. ಅಲ್ಲಿ ಈ ಬಾರಿಯೂ ಡಿ.ಕೆ. ಸುರೇಶ್ ಅವರೇ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಬಹುದು. ಸುಮಲತಾ ಅವರು ರಾಮನಗರದಲ್ಲಿ ಕಣಕ್ಕಿಳಿದರೆ ಅಲ್ಲಿ ಡಿ.ಕೆ.ಸುರೇಶ್ ಅವರನ್ನು ಎದುರಿಸುವುದು ಕಷ್ಟವಾಗಲಿದೆ.
ರಾಮನಗರದಲ್ಲಿ ಅವರ ಸ್ಪರ್ಧೆ ಸಾಧ್ಯವಿಲ್ಲ ಎಂದಾದರೆ, ಅವರ ಮುಂದಿನ ದಾರಿ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರ. ಸದ್ಯಕ್ಕೆ ಈ ಕ್ಷೇತ್ರವನ್ನು ಬಿಜೆಪಿಯ ನಾಯಕ ಹಾಗೂ ಮಾಜಿ ಸಿಎಂ ಸದಾನಂದ ಗೌಡರು ಪ್ರತಿನಿಧಿಸುತ್ತಿದ್ದಾರೆ. ಈ ಬಾರಿ ಸದಾನಂದ ಗೌಡರಿಗೆ ಟಿಕೆಟ್ ಸಿಗುವುದು ಅನುಮಾನ ಎನ್ನಲಾಗುತ್ತಿದೆ. ಇನ್ನು, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ತೇಜಸ್ವಿ ಸೂರ್ಯರಿಗೆ ಮತ್ತೆ ಟಿಕೆಟ್ ಸಿಗುವುದು ಪಕ್ಕಾ ಎನ್ನಲಾಗುತ್ತಿದೆ. ಹಾಗಾಗಿ, ಬೆಂಗಳೂರು ಉತ್ತರದಿಂದಲೇ ಸುಮಲತಾ ಅವರು ಕಣಕ್ಕಿಳಿಯಬಹುದು ಎನ್ನಲಾಗುತ್ತಿದೆ. ಅವರಿಗೆ ಟಿಕೆಟ್ ಸಿಗದೇ ಹೋದರೆ ಅಲ್ಲಿ ಬಿಜೆಪಿ ಟಿಕೆಟ್ ಪಡೆಯಲು ಕೇಂದ್ರದ ಮಾಜಿ ಸಚಿವ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿ ಅನಂತ ಕುಮಾರ್ ಅವರು ಪ್ರಬಲ ಆಕಾಂಕ್ಷಿಯಾಗಿದ್ದಾರೆ.
ಇತ್ತೀಚೆಗೆ ನವದೆಹಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ ಎಲ್ ಸಂತೋಷ್ ಅವರನ್ನು ಭೇಟಿ ಮಾಡಿದ್ದರು. ಈ ವೇಳೆ ಸುಮಲತಾ ಅವರೊಂದಿಗೆ ಹೈಕಮಾಂಡ್ ಮಾತುಕತೆ ನಡೆಸಿದೆ ಎನ್ನಲಾಗಿದೆ. ಒಟ್ಟಿನಲ್ಲಿ ಮಂಡ್ಯ ಸಂಸದೆ ಸುಮಲತಾ ಅವರು ಯಾವ ಕ್ಷೇತ್ರದಿಂದ ಚುನಾವಣಾ ಕಣಕ್ಕೆ ಇಳಿಯಲಿದ್ದಾರೆ ಎನ್ನುವ ಬಗ್ಗೆ ಭಾರೀ ಕುತೂಹಲ ಮೂಡಿದ್ದು ಇದನ್ನು ಕಾದು ನೋಡಬೇಕಿದೆ.












Click it and Unblock the Notifications