Brand Bengaluru: ಶೈಕ್ಷಣಿಕ ಬೆಂಗಳೂರಿಗಾಗಿ ಬಂದ ಸಲಹೆ ಕ್ರೂಢಿಕರಿಸಿ ವರದಿ ಸಲ್ಲಿಕೆ
ಬೆಂಗಳೂರು, ಆಗಸ್ಟ್ 21: ಸಿಲಿಕಾನ್ ಸಿಟಿ ಬೆಂಗಳೂರು ವ್ಯಾಪ್ತಿಯಲ್ಲಿ ಉನ್ನತ ಮಟ್ಟದ ಶಿಕ್ಷಣ ನೀಡುವ ಸಲುವಾಗಿ ನಾವೆಲ್ಲರೂ ಸೇರಿ ಉತ್ತಮ ಯೋಜನೆಯನ್ನು ರೂಪಿಸಬೇಕಿದೆ ಎಂದು ಶಿಕ್ಷಣ ವಿಭಾಗದ ವಿಶೇಷ ಆಯುಕ್ತರು ಹಾಗೂ ಶೈಕ್ಷಣಿಕ ಬೆಂಗಳೂರಿನ ನೋಡಲ್ ಅಧಿಕಾರಿಯಾದ ಪ್ರೀತಿ ಗೆಹ್ಲೋಟ್ ತಿಳಿಸಿದರು.
ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ ಶೈಕ್ಷಣಿಕ ಬೆಂಗಳೂರು ವಿಷಯಕ್ಕೆ ಸಂಬಂಧಿಸಿದಂತೆ ಮೊದಲ ಸಭೆ ಬಿಬಿಎಂಪಿ ಕೇಂದ್ರ ಕಚೇರ ಆವರಣದಲ್ಲಿ ನಡೆಯಿತು. ಈ ವೇಳೆ ಮಹತ್ವದ ಸಲಹೆಗಳನ್ನು ಸ್ವೀಕರಿಸಲಾಯಿತು.

ಇನ್ನು ಸಭೆ ಉದ್ದೇಶಿಸಿ ಮಾತನಾಡಿದ ಪ್ರೀತಿ ಗೆಹ್ಲೋಟ್ ಅವರು, ಬ್ರ್ಯಾಂಡ್ ಬೆಂಗಳೂರು ಯೋಜನೆಯಡಿ 7 ವಿವಿಧ ವಿಷಯಗಳ ಕುರಿತು ಸಾರ್ವಜನಿಕರಿಂದ ಸಲಹೆ/ಅಭಿಪ್ರಾಯಗಳನ್ನು ಪಡೆದು ಅದನ್ನು ಶೈಕ್ಷಣಿಕ ಸಂಸ್ಥೆಗಳ ಪಾಲುದಾರಿಕೆಯೊಂದಿಗೆ ಕ್ರೋಡೀಕರಿಸಿ ವರದಿ ಸಿದ್ದಪಡಿಸಲಾಗುತ್ತಿದೆ. ಇದೀಗ ಹೊಸದಾಗಿ ಶೈಕ್ಷಣಿಕ ಬೆಂಗಳೂರನ್ನು ಬ್ರ್ಯಾಂಡ್ ಬೆಂಗಳೂರು ಯೋಜನೆಯಲ್ಲಿ ಸೇರ್ಪಡೆ ಮಾಡಲಾಗಿದೆ ಎಂದರು.
ವಾರದೊಳಗೆ ವರದಿ ಸಲ್ಲಿಕೆ
ಶೈಕ್ಷಣಿಕ ಬೆಂಗಳೂರು ವಿಷಯವಾಗಿ ಬರುವಂತಹ ಸಲಹೆಗಳ ಜೊತೆ ಒಂದು ವಾರದೊಳಗಾಗಿ ವಿಚಾರ ಸಂಕಿರಣವನ್ನು ಏರ್ಪಡಿಸಿ ಅದರಲ್ಲಿ ಬಂದಂತಹ ಸಲಹೆಗಳನ್ನು ಕ್ರೋಢೀಕರಿಸಿ ವರದಿಯನ್ನು ಸಿದ್ದಪಡಿಸಿ ಸರ್ಕಾರಕ್ಕೆ ಸಲ್ಲಿಸಲಾಗುವುದು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಸುಮಾರು 3000 ಸಾವಿರ ಸರ್ಕಾರಿ ಶಾಲಾ-ಕಾಲೇಜುಗಳು ಹಾಗೂ ಪಾಲಿಕೆಯ ಒಡೆತನದ 166 ಶಾಲಾ-ಕಾಲೇಜುಗಳು ಇವೆ. ಈ ಎಲ್ಲಾ ಶಾಲಾ-ಕಾಲೇಜುಗಳನ್ನು ದತ್ತು ಪಡೆಯುವ ಸಲುವಾಗಿ ಉಪ ಮುಖ್ಯಮಂತ್ರಿಗಳ ಜೊತೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಶೈಕ್ಷಣಿಕ ಬೆಂಗಳೂರಿಗೆ ಬಂದ ಸಲಹೆಗಳ ಪಟ್ಟಿ
• ಬೆಂಗಳೂರನ್ನು ಜ್ಞಾನ ನಗರಿಯನ್ನಾಗಿ ಪರಿವರ್ತಿಸುವುದು.
• ನಗರದಲ್ಲಿ ಹೆಚ್ಚು ಗ್ರಂಥಾಲಯನ್ನು ತೆರೆದು ಓದುವ ಹವ್ಯಾಸವನ್ನು ಹೆಚ್ಚಿಸುವುದು.
• ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟ ಶಿಕ್ಷಣ ನೀಡುವುದು.
• ಇರುವ ಸರ್ಕಾರಿ ಶಾಲಾ-ಕಾಲೇಜುಗಳನ್ನು ಪರಿಶೀಲಿಸಿ ಮೂಲಸೌಕರ್ಯಗಳ ವ್ಯವಸ್ಥೆ ಕಲ್ಪಿಸುವುದು.
• ಪಾರಂಪರಿಕ ಶಾಲಾ-ಕಾಲೇಜುಗಳನ್ನು ಗುರುತಿಸಿ ಆರ್ಕಿಟೆಕ್ಟ್ ಮೂಲಕ ವಿನ್ಯಾಸಗೊಳಿಸುವುದು.
• ಮಕ್ಕಳು ಹಾಗೂ ಪೋಷಕರಿಗೆ ಕೌನ್ಸೆಲಿಂಗ್ ನೀಡಿ ಎಲ್ಲಾ ಮಕ್ಕಳು ವಿದ್ಯಾಭ್ಯಾಸ ಪಡೆಯುವಂತೆ ಮಾಡಬೇಕು.
• ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುವ ನಿಟ್ಟಿನಲ್ಲಿ ಮಕ್ಕಳಿಗೆ ತರಬೇತಿ ನಿಡುವುದು.
• ಮಕ್ಕಳಿಗಾಗಿ ಕ್ಲಸ್ಟರ್ ಅಕಾಡೆಮಿಕ್ ಸೆಂಟರ್ ಗಳನ್ನು ತೆರೆಯುವುದು.
• ತಂತ್ರಜ್ಞಾನವನ್ನು ಬಳಸಿಕೊಂಡು ಸುಲಭ ರೀತಿಯಲ್ಲಿ ಶಿಕ್ಷಣ ಕಲಿಯುವ ವ್ಯವಸ್ಥೆ ಕಲ್ಪಿಸುವುದು.
• ಸರ್ಕಾರಿ ಶಾಲೆಗಳ ಅಭಿವೃದ್ಧಿಯಾಗಬೇಕು, ಶೈಕ್ಷಣಿಕ ವ್ಯವಸ್ಥೆಯನ್ನು ಸರಿಪಡಿಸುವುದು.
• ವಿಷಯದ ಜೊತೆಗೆ ಲೋಕಜ್ಞಾನದ ಬಗ್ಗೆ ಅರಿವು ಮೂಡಿಸಬೇಕು.
• ಮಕ್ಕಳಿಗೆ ಯಾವ ವಿಷಯದಲ್ಲಿ ಹೆಚ್ಚು ಆಸಕ್ತಿಯಿದೆ ಎಂಬುದನ್ನರಿತು, ಹೆಚ್ಚು ಆಸಕ್ತಿಯೆದೆಯೋ ಅದೇ ವಿಷಯದಲ್ಲಿ ಹೆಚ್ಚು ಪ್ರೋತ್ಸಾಹ ನಿಡುವ ಕೆಲಸ ಮಾಡಬೇಕು.
• ಸಿಎಸ್ಆರ್ ಅಡಿ ಶೈಕ್ಷಣಿಕ ವ್ಯವಸ್ಥೆಯಲ್ಲಿ ಬದಲಾವಣೆ ತರುವುದು.
• ಕೊಳಗೇರಿ ಪ್ರದೇಶದಲ್ಲಿರುವ ಮಕ್ಕಳಿಗೆ ಶಿಕ್ಷಣ ನೀಡಲು ಅಗತ್ಯ ಕ್ರಮ ಕೈಗೊಳ್ಳುವುದು.
• ಉತ್ತಮ ವಿಜ್ಞಾನ ಲ್ಯಾಬ್ ಹಾಗೂ ಗಣಕಯಂತ್ರ ಲ್ಯಾಬ್ ವ್ಯವಸ್ಥೆ ಕಲ್ಪಿಸುವುದು.
• ಕನ್ನಡ ಮಾಧ್ಯಮದಲ್ಲಿ ವಿದ್ಯಾಭ್ಯಾಸ ಮಾಡುವ ಮಕ್ಕಳಿಗೆ ಕನ್ನಡದ ಜೊತೆಗೆ ಆಂಗ್ಲ ಭಾಷೆಯನ್ನೂ ಕಲಿಸುವುದು.
• ಶಿಕ್ಷಕರಿಗೆ ಉತ್ತಮ ತರಬೇತಿ ನೀಡುವುದು.
ಸಭೆಯಲ್ಲಿ ಶಿಕ್ಷಣ ವಿಭಾಗದ ಸಹಾಯ ಆಯುಕ್ತರಾದ ವೆಂಕಟರಾಜು, ಕಾಲೇಜು ಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ, ಸಾರ್ವಜನಿಕ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಅಧಿಕಾರಿಗಳು, ಶಿಕ್ಷಣ ತಜ್ಞರು ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.












Click it and Unblock the Notifications