ನಟಿ ರಾಗಿಣಿ ಜಾಮೀನು ಅರ್ಜಿ ಮತ್ತೊಂದು ವಾರಕ್ಕೆ ಮುಂದೂಡಿದ ಸುಪ್ರೀಂಕೋರ್ಟ್
ಬೆಂಗಳೂರು, ಜನವರಿ 12: ಸ್ಯಾಂಡಲ್ ವುಡ್ ಡ್ರಗ್ ಜಾಲ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ನಟಿ ರಾಗಿಣಿ ದ್ವಿವೇದಿ ಅವರ ಜಾಮೀನು ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮತ್ತೊಮ್ಮೆ ಜನವರಿ 19 ಕ್ಕೆ ಮುಂದೂಡಿದೆ.
ಸ್ಯಾಂಡಲ್ ವುಡ್ ಡ್ರಗ್ ಕೇಸ್: ಆದಿತ್ಯ ಆಳ್ವ ಚೆನ್ನೈನಲ್ಲಿ ಬಂಧನ
ನಟಿ ರಾಗಿಣಿ ಅವರ ದ್ವಿವೇದಿ ಅವರ ಪರ ವಾದ ಮಂಡಿಸಿದ ಹಿರಿಯ ವಕೀಲ ಸಿದ್ಧಾರ್ಥ ಲೂತ್ರಾ, ನಟಿ ರಾಗಿಣಿ ಅವರ ವಿಚಾರಣೆಯನ್ನು ಸಿಸಿಬಿ ಪೊಲೀಸರು ಮುಗಿಸಿದ್ದಾರೆ. ಈಗಾಗಲೇ ಅನಾರೋಗ್ಯದಿಂದ ಬಳಲುತ್ತಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪ್ರಕರಣದ ಇತರೆ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿದೆ. ತನಿಖಾಧಿಕಾರಿಗಳಿಗೆ ನಮ್ಮ ಕಕ್ಷಿದಾರೆ ಸಂಪೂರ್ಣ ಸಹಕಾರ ನೀಡಿದ್ದಾರೆ. ಹೀಗಾಗಿ ಜಾಮೀನು ನಿರಾಕರಿಸಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ರದ್ದು ಪಡಿಸಿ ಜಾಮೀನು ನೀಡುವಂತೆ ಕೋರಿದ್ದಾರೆ. ವಾದವನ್ನು ಆಲಿಸಿದ ಸುಪ್ರೀಂಕೋರ್ಟ್ ನ್ಯಾ. ಆರ್.ಎಫ್. ನಾರಿಮನ್, ಸರ್ಕಾರದ ಪರವಾಗಿ ಪ್ರತಿನಿಧಿಸುವಂತೆ ಸರ್ಕಾರಿ ಅಭಿಯೋಜಕರಿಗೆ ಸೂಚಿಸಿದರು. ಅರ್ಜಿಯ ವಿಚಾರಣೆಯನ್ನು ಜನವರಿ 19 ಕ್ಕೆ ಮುಂದೂಡಿ ನ್ಯಾಯಮೂರ್ತಿಗಳು ಆದೇಶಿಸಿದರು.
ಡ್ರಗ್ ಸೇವನೆ ಹಾಗೂ ಡೀಲಿಂಗ್ ಮಾಡಿದ ಆರೋಪದ ಮೇಲೆ ನಟಿ ರಾಗಿಣಿ ದ್ವಿವೇದಿ ಅವರ ಮನೆ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಗಾಂಜಾ ಮತ್ತು ಇತರೆ ಮಾದಕ ವಸ್ತು ಸಿಕ್ಕಿದ ಹಿನ್ನೆಲೆಯಲ್ಲಿ ನಟಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದರು. ನಟಿ ರಾಗಿಣಿ ಜತೆಗೆ ಸಂಜನಾ ಗಲ್ರಾಣಿ ಸೇರಿದಂತೆ ಇತರೆ ಆರೋಪಿಗಳು ಬಂಧನಕ್ಕೆ ಒಳಗಾಗಿದ್ದರು. ಅನಾರೋಗ್ಯದ ಹಿನ್ನೆಲೆಯಲ್ಲಿ ನಟಿ ಸಂಜನಾಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ರಾಗಿಣಿ ಅವರ ಜಾಮೀನು ಅರ್ಜಿ ತಿರಸ್ಕೃತವಾಗಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಗಿಣಿ ದ್ವಿವೇದಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಕಳೆದ ವಾರದ ಹಿಂದೆ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್ ಒಂದು ವಾರ ಕಾಲ ಮುಂದೂಡಿತ್ತು. ಡ್ರಗ್ ಡೀಲ್ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಶಿವಪ್ರಕಾಶ್ ಅಲಿಯಾಸ್ ಚಿಪ್ಪಿಗೂ ಸಹ ಜಾಮೀನು ಸಿಕ್ಕಿದ್ದು ಸಿಸಿಬಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುತ್ತಿದ್ದಾರೆ. ಡ್ರಗ್ ಡೀಲ್ ಕಿಂಗ್ ಪಿನ್ ವೀರೇನ್ ಖನ್ನಾ ಗೂ ಜಾಮೀನು ಸಿಕ್ಕಿದ್ದು, ಬೇರೆ ಪ್ರಕರಣ ಬಾಕಿ ಇರುವ ಕಾರಣ ಆತನಿಗೆ ಇನ್ನೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.