ಆರ್. ಆರ್. ನಗರ ಉಪ ಚುನಾವಣೆಗೆ ಸುಪ್ರೀಂಕೋರ್ಟ್ ಒಪ್ಪಿಗೆ
ಬೆಂಗಳೂರು, ಅಕ್ಟೋಬರ್ 13 : ಬೆಂಗಳೂರಿನ ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅವಕಾಶ ನೀಡಬಾರದು ಎಂದು ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಇದರಿಂದಾಗಿ ನಿಗದಿಯಾದಂತೆ ನವೆಂಬರ್ 3ರಂದು ಉಪ ಚುನಾವಣೆ ನಡೆಯಲಿದೆ.
ಬಿಜೆಪಿಯ ಮುನಿರಾಜು ಗೌಡ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ್ದ ನ್ಯಾಯಾಲಯ ತೀರ್ಪನ್ನು ಕಾಯ್ದಿರಿಸಿತ್ತು. ಮಂಗಳವಾರ ತೀರ್ಪು ಪ್ರಕಟಗೊಂಡಿದ್ದು, ಉಪ ಚುನಾವಣೆ ನಡೆಸಲು ನ್ಯಾಯಾಲಯ ಒಪ್ಪಿಗೆ ನೀಡಿದೆ.
2018ರ ವಿಧಾನಸಭೆ ಚುನಾವಣೆ ವೇಳೆ ಆರ್. ಆರ್. ನಗರ ಕ್ಷೇತ್ರದಲ್ಲಿ ನಕಲಿ ಮತದಾರರ ಗುರುತಿನ ಚೀಟಿ ಪತ್ತೆಯಾಗಿತ್ತು. ಈ ಅಕ್ರಮದಲ್ಲಿ ಮುನಿರತ್ನ ಭಾಗಿಯಾದ ಆರೋಪ ಕೇಳಿ ಬಂದಿತ್ತು. ಚುನಾವಣೆಯಲ್ಲಿ ಕಾಂಗ್ರೆಸ್ನಿಂದ ಕಣಕ್ಕಿಳಿದು ಜಯಗಳಿಸಿದ್ದರು.
ಆದ್ದರಿಂದ, ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗೆ ಹತ್ತಿರದ ಪ್ರತಿಸ್ಪರ್ಧಿಯಾಗಿದ್ದ ನನ್ನನ್ನು ಜಯಶಾಲಿ ಎಂದು ಘೋಷಿಸಬೇಕು ಎಂದು ಕೋರಿ ಬಿಜೆಪಿಯ ಮುನಿರಾಜು ಗೌಡ ಮೇಲ್ಮನವಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿ ಈಗ ವಜಾಗೊಂಡಿದೆ.

ಮುನಿರತ್ನಗೆ ತಾತ್ಕಾಲಿಕ ನೆಮ್ಮದಿ
ಸುಪ್ರೀಂಕೋರ್ಟ್ ತೀರ್ಪಿನಿಂದಾಗಿ 2018ರ ಚುನಾವಣೆಯಲ್ಲಿ ಆರ್. ಆರ್. ನಗರ ಕ್ಷೇತ್ರದಲ್ಲಿ ಬಿಜೆಪಿಯಿಂದ ಗೆದ್ದಿದ್ದ ಮುನಿರತ್ನ ಅವರಿಗೆ ನೆಮ್ಮದಿ ಸಿಕ್ಕಿದೆ. ಈಗ ಅವರು ಬಿಜೆಪಿಯಲ್ಲಿದ್ದು, ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.

ಉಪ ಚುನಾವಣೆ ಘೋಷಣೆಯಾಗಿದೆ
ಆರ್. ಆರ್. ನಗರ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸಲು ಈಗಾಗಲೇ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಅಕ್ಟೋಬರ್ 9ರಂದು ಚುನಾವಣಾ ಅಧಿಸೂಚನೆಯೂ ಪ್ರಕಟವಾಗಿದೆ. ಅಕ್ಟೋಬರ್ 16ರ ತನಕ ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ.
Recommended Video

ಬಿಜೆಪಿ ಅಭ್ಯರ್ಥಿ ಯಾರು?
ಸುಪ್ರೀಂಕೋರ್ಟ್ ಆರ್. ಆರ್. ನಗರ ಉಪ ಚುನಾವಣೆಗೆ ಒಪ್ಪಿಗೆ ನೀಡಿದೆ. ಆದರೆ, ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಯ್ಕೆ ಮಾಡುವುದು ಪಕ್ಷಕ್ಕೆ ಕಗ್ಗಂಟಾಗಿದೆ. ಮುನಿರತ್ನ ಮತ್ತು ತುಳಸಿ ಮುನಿರಾಜು ಗೌಡ ನಡುವೆ ಟಿಕೆಟ್ಗಾಗಿ ಪೈಪೋಟಿ ನಡೆಯುತ್ತಿದೆ.

ಬಿಜೆಪಿ, ಜೆಡಿಎಸ್ ಘೋಷಣೆ ಮಾಡಬೇಕು
ಆರ್. ಆರ್. ನಗರ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಕುಸುಮಾ ಹನುಮಂತರಾಯಪ್ಪ ಅಭ್ಯರ್ಥಿಯಾಗಿದ್ದಾರೆ, ಚುನಾವಣಾ ಪ್ರಚಾರವನ್ನು ಅವರು ಆರಂಭಿಸಿದ್ದಾರೆ. ಆದರೆ, ಬಿಜೆಪಿ ಮತ್ತು ಜೆಡಿಎಸ್ ಇನ್ನೂ ಅಭ್ಯರ್ಥಿಗಳನ್ನು ಘೋಷಣೆ ಮಾಡಿಲ್ಲ.












Click it and Unblock the Notifications