ಆರ್. ಆರ್. ನಗರ ಉಪ ಚುನಾವಣೆ; ಆದೇಶ ಕಾಯ್ದಿರಿಸಿದ ಸುಪ್ರೀಂಕೋರ್ಟ್
ಬೆಂಗಳೂರು, ಅಕ್ಟೋಬರ್ 07 : ಬೆಂಗಳೂರಿನ ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಗೆ ಅವಕಾಶ ನೀಡಬಾರದು ಎಂದು ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಪೂರ್ಣಗೊಳಿಸಿದ್ದು, ಆದೇಶ ಕಾಯ್ದಿರಿಸಿದೆ.
ಬಿಜೆಪಿಯ ತುಳಸಿ ಮುನಿರಾಜು ಗೌಡ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯ ವಿಚಾರಣೆ ನ್ಯಾಯಾಲಯ ನಡೆಸಿ, ತೀರ್ಪು ಕಾಯ್ದಿರಿಸಿದೆ. ನವೆಂಬರ್ 3ರಂದು ಉಪ ಚುನಾವಣೆ ನಡೆಸಲು ಚುನಾವಣಾ ಆಯೋಗ ಈಗಾಗಲೇ ವೇಳಾಪಟ್ಟಿ ಪ್ರಕಟಿಸಿದೆ.
2018ರ ವಿಧಾನಸಭೆ ಚುನಾವಣೆ ವೇಳೆ ಕ್ಷೇತ್ರದಲ್ಲಿ ನಕಲಿ ಮತದಾರರ ಗುರುತಿನ ಚೀಟಿಗಳು ಪತ್ತೆಯಾಗಿದ್ದವು. ಈ ಅಕ್ರಮದಲ್ಲಿ ಮುನಿರತ್ನ ಭಾಗಿಯಾದ ಆರೋಪವಿದೆ. ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗೆ ಹತ್ತಿರದ ಪ್ರತಿಸ್ಪರ್ಧಿಯಾಗಿದ್ದ ನನ್ನನ್ನು ಜಯಶಾಲಿ ಎಂದು ಘೋಷಿಸಬೇಕು ಎಂದು ಕೋರಿ ಮುನಿರಾಜು ಗೌಡ ಮೇಲ್ಮನವಿಯಲ್ಲಿ ಮನವಿ ಮಾಡಿದ್ದರು.
ಈಗ ಮುನಿರತ್ನ ಅವರು ಬಿಜೆಪಿಯಲ್ಲಿದ್ದಾರೆ. ನವೆಂಬರ್ 3ರಂದು ಆರ್. ಆರ್. ನಗರ ಕ್ಷೇತ್ರದ ಉಪ ಚುನಾವಣೆ ನಡೆಸಲು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ. ಮುನಿರತ್ನ ಮತ್ತು ತುಳಸಿ ಮುನಿರಾಜು ಗೌಡ ಇಬ್ಬರೂ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು.

ಅರ್ಜಿಯಲ್ಲಿನ ಮನವಿ
2018ರ ಚುನಾವಣೆ ನಡೆದ ಸಂದರ್ಭದಲ್ಲಿ ಆರ್. ಆರ್. ನಗರದ ಅಭ್ಯರ್ಥಿ ಮುನಿರತ್ನ ಅವರು ಅಕ್ರಮ ಎಸಗಿ ಗೆಲುವು ಸಾಧಿಸಿದ್ದಾರೆ ಎಂಬ ಅರ್ಜಿಯು ರಾಜ್ಯ ಹೈಕೋರ್ಟ್ನಲ್ಲಿ ಇತ್ಯರ್ಥವಾಗದೆ ಬಾಕಿ ಉಳಿದಿದೆ. ಅರ್ಜಿ ಇತ್ಯರ್ಥ ಆಗುವ ತನಕ ಕ್ಷೇತ್ರದ ಉಪ ಚುನಾವಣೆ ನಡೆಸಬಾರದು ಎಂದು ಮೇಲ್ಮನವಿ ಅರ್ಜಿಯಲ್ಲಿ ತುಳಸಿ ಮುನಿರಾಜು ಗೌಡ ಕೋರಿದ್ದರು.

ಚುನಾವಣೆ ಘೋಷಣೆಯಾಗಿರಲಿಲ್ಲ
2018ರ ಚುನಾವಣೆಯಲ್ಲಿ ಗೆದ್ದಿದ್ದ ಶಾಸಕ ಮುನಿರತ್ನ ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಆದರೆ, ಮುನಿರಾಜು ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ಬಾಕಿ ಇದ್ದಿದ್ದರಿಂದ ಕೇಂದ್ರ ಚುನಾವಣಾ ಆಯೋಗ ಆರ್. ಆರ್. ನಗರ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆ ಮಾಡಿರಲಿಲ್ಲ.

ಚುನಾವಣೆ ನಡೆಸುವುದು ಸೂಕ್ತ
ಕರ್ನಾಟಕ ಹೈಕೋರ್ಟ್ಗೆ ಮಧ್ಯಂತರ ಅರ್ಜಿ ಸಲ್ಲಿಕೆ ಮಾಡಿದ್ದ ಮುನಿರತ್ನ ತಮ್ಮ ಮೇಲಿನ ಆರೋಪದಲ್ಲಿ ಹುರುಳಿಲ್ಲ. ಕ್ಷೇತ್ರದಲ್ಲಿ ಚುನಾವಣೆ ನಡೆಯುವ ಅಗತ್ಯವಿದೆ ಎಂದು ಹೇಳಿದ್ದರು. ಕ್ಷೇತ್ರದಲ್ಲಿ ಶಾಸಕರು ಇಲ್ಲದೇ ಹಲವು ತಿಂಗಳು ಕಳೆದಿದೆ. ಚುನಾವಣೆ ನಡೆಸಲು ಆಯೋಗಕ್ಕೆ ಅನುಮತಿ ನೀಡುವುದು ಸೂಕ್ತ ಎಂದು ಹೈಕೋರ್ಟ್ ಸ್ಪಷ್ಟಪಡಿಸಿತ್ತು.
Recommended Video

ಚುನಾವಣೆಗೆ ತಡೆ ಸಿಗಲಿದೆಯೇ?
ಆರ್. ಆರ್. ನಗರ ಕ್ಷೇತ್ರದ ಉಪ ಚುನಾವಣೆಯನ್ನು ನವೆಂಬರ್ 3ರಂದು ನಡೆಸಲು ಆಯೋಗ ವೇಳಾಪಟ್ಟಿ ಘೋಷಣೆ ಮಾಡಿದೆ. ಸುಪ್ರೀಂಕೋರ್ಟ್ ಆದೇಶ ಏನು ಬರಲಿದೆ? ಎಂಬುದು ಕುತೂಹಲಕ್ಕೆ ಕಾರಣವಾಗಿದೆ. ಉಪ ಚುನಾವಣೆಯಲ್ಲಿ ಮುನಿರತ್ನ ಮತ್ತು ತುಳಸಿ ಮುನಿರಾಜು ಗೌಡ ಇಬ್ಬರೂ ಬಿಜೆಪಿ ಟಿಕೆಟ್ ಆಕಾಂಕ್ಷಿಗಳು.












Click it and Unblock the Notifications