ಕೊರೊನಾ: ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದಿನಿಂದ ಮನೆ ಮನೆ ಸರ್ವೆ
ಬೆಂಗಳೂರು, ಏ. 12: ದೇಶದಲ್ಲಿ ಕೊರೊನಾ ವೈರಸ್ ವಿರುದ್ಧ ಲಾಕ್ಡೌನ್ ಜೊತೆಗೆ ಕೆಲವೆಡೆ ಸೀಲ್ಡೌನ್ ಜಾರಿ ಮಾಡಲಾಗಿದೆ. ಬೆಂಗಳೂರು ಮಹಾನಗರ ಕೂಡ ಕೋವಿಡ್ ಹಾಟ್ಸ್ಪಾಟ್ಗಳಲ್ಲಿ ಒಂದು ಎಂದು ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ಗುರುತಿಸಿದೆ. ಬೆಂಗಳೂರಿನಲ್ಲಿ ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಸೂಚಿಸಿದೆ.
ಹೀಗಾಗಿ ಕೊರೊನಾ ವೈರಸ್ ಹರಡದಂತೆ ತಡೆಯಲು ಮತ್ತಷ್ಟು ಬಿಗಿ ಕ್ರಮಗಳನ್ನು ಬೆಂಗಳೂರು ನಗರ ಜಿಲ್ಲೆಯಲ್ಲಿ ತರಲಾಗಿದೆ. ಇವತ್ತಿನಿಂದ ಮನೆ ಮನೆ ಕೋವಿಡ್ ಸಮೀಕ್ಷೆ ಪ್ರಾರಂಭವಾಗಿದೆ. ಬೆಂಗಳೂರು ನಗರ ಜಿಲ್ಲೆಯ ತಾಲ್ಲೂಕು ಮಟ್ಟದ ವೈದ್ಯಕೀಯ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಈ ಕುರಿತು ತರಬೇತಿ ಕೊಡಲಾಗಿದೆ ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ತಿಳಿಸಿದ್ದಾರೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಗ್ರಾಮವಾರು ಪ್ರತಿನಿತ್ಯ 60 ಮನೆಗಳಿಗೆ ಕೋವಿಡ್ ಸರ್ವೇಕ್ಷಣಾ ತಂಡ ಏಪ್ರಿಲ್ 30ರವರೆಗೆ ಭೇಟಿ ಕೊಡಲಿದೆ. ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಪ್ರಮುಖವಾಗಿದ್ದು, ಕಾರ್ಯನಿರತ ಸಿಬ್ಬಂದಿಗೆ ವಾಹನ ಪಾಸ್, ಗುರುತಿನ ಚೀಟಿ, ಸುರಕ್ಷತಾ ಕಿಟ್ಗಳನ್ನು ಕೊಡಲಾಗುವುದು. ಸಂಕಷ್ಟದ ಪರಿಸ್ಥಿತಿಯಲ್ಲಿ ಎಲ್ಲ ಸರ್ಕಾರಿ ನೌಕರರು ಕೈಜೋಡಿಸಿ ಕರ್ತವ್ಯ ನಿರ್ವಹಿಸಬೇಕು. ಅಶ್ರದ್ಧೆ ತೋರುವವರ ವಿರುದ್ಧ ವಿಪ್ಪತ್ತು ನಿರ್ವಹಣಾ ಕಾಯ್ದೆ ಅನ್ವಯ ಶಿಕ್ಷೆಗೆ ಕ್ರಮ ಕೈಗೊಳ್ಳಲಾಗುವುದು.

ಕೊರೊನಾ ವೈರಸ್ ಸಮೀಕ್ಷೆ ಪ್ರಗತಿ ಕುರಿತು ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ಮಾಡಲಾಗುವುದು. ಒಟ್ಟಾರೆಯಾಗಿ ಕೊರೊನಾ ವೈರಸ್ ತಡೆಯಲು ಎಲ್ಲರೂ ಸಾಂಘಿಕ ಪ್ರಯತ್ನ ಮಾಡಬೇಕು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ.ಎನ್. ಶಿವಮೂರ್ತಿ ತಿಳಿಸಿದ್ದಾರೆ. ತರಬೇತಿ ಸಂದರ್ಭದಲ್ಲಿ ವಿಶೇಷ ಜಿಲ್ಲಾಧಿಕಾರಿ ಜಗದೀಶ್, ಜಿ. ಪಂ ಉಪಕಾರ್ಯದರ್ಶಿ ಸಿದ್ದರಾಮಪ್ಪ, ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣಾಧಿಕಾರಿ ಡಾ. ಶ್ರೀನಿವಾಸ್ ಮಾಹಿತಿ ಕೊಟ್ಟಿದ್ದಾರೆ.












Click it and Unblock the Notifications