ಅಮಾನತುಗೊಂಡಿದ್ದ ಕೆಆರ್ ಪುರಂ ಇನ್ಸ್ಪೆಕ್ಟರ್ ಹೃದಯಾಘಾತದಿಂದ ಸಾವು
ಬೆಂಗಳೂರು, ಅಕ್ಟೋಬರ್ 27: ಕರ್ತವ್ಯ ಲೋಪವೆಸಗಿದ್ದ ಆರೋಪದಡಿ ಕಳೆದವಾರ ಸೇವೆಯಿಂದ ಅಮಾನತುಗೊಂಡಿದ್ದ ಕೆ.ಆರ್. ಪುರ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಎಚ್.ಎಲ್. ನಂದೀಶ್ ಹೃದಯಾಘಾತದಿಂದಾಗಿ ಗುರುವಾರ ಮೃತಪಟ್ಟಿದ್ದಾರೆ.
ಕೆಲಸದಿಂದ ಅಮಾನತುಗೊಂಡ ಅವಧಿಯಲ್ಲಿ ನಂದೀಶ್ ಮನೆಯಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದರು. ಗುರುವಾರ ದಿಢೀರ್ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಕುಟುಂಬಸ್ಥರು ಲಕ್ಷ್ಮಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ಅವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದರೆಂದು ಪೊಲೀಸ್ ಮೂಲಗಳು ತಿಳಿಸಿವೆ.
ನಂದೀಶ್ ತಮ್ಮ ಠಾಣೆ ವ್ಯಾಪ್ತಿಯಲ್ಲಿದ್ದ ಟಾನಿಕ್ ಬಾರ್ ಆ್ಯಂಡ್ ರೆಸ್ಟೋರೆಂಟ್ ಅವಧಿ ಮೀರಿ ವಹಿವಾಟು ನಡೆಸುತ್ತಿದ್ದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ರೆಸ್ಟೋರೆಂಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳದೇ ಕರ್ತವ್ಯಲೋಪ ಎಸಗಿದ ಆರೋಪದಡಿ ಬೆಂಗಳೂರು ಕಮಿಷನರ್ ಪ್ರತಾಪ್ ರೆಡ್ಡಿ ಅವರು ಸೇವೆಯಿಂದ ಅಮಾನತು ಮಾಡಿದ್ದರು.

ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಸಂಬಂಧಿಯಾಗಿದ್ದ ನಂದೀಶ್ ಮೂಲತಃ ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನವರು. ಅವರು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ 2019ರಿಂದ 2020ರ ವರೆಗೆ ಕಾರ್ಯ ನಿರ್ವಹಿಸಿದ್ದರು. ಕಳೆದ ಎಂಟು ತಿಂಗಳಲ್ಲಿ ಸರ್ಕಲ್ ಇನ್ಸ್ಪೆಕ್ಟರ್ ಆಗಿ ಕೆಆರ್ ಪುರಂ ಠಾಣೆಗೆ ವರ್ಗಾವಣೆಯಾಗಿದ್ದರು.

ಬೆಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ರಾತ್ರಿ 1 ಗಂಟೆಯವರೆಗೆ ವಹಿವಾಟು ನಡೆಸಲು ಅವಕಾಶವಿದೆ. ಆದರೆ, ಟಾನಿಕ್ ಬಾರ್ ಆ್ಯಂಡ್ ರೆಸ್ಟೋರೆಂಟ್ ನಿತ್ಯವೂ ತಡರಾತ್ರಿಯವರೆಗೂ ವಹಿವಾಟು ನಡೆಸಲಾಗುತ್ತಿದೆ. ಇದು ಗೊತ್ತಿದ್ದರೂ ಸರ್ಕಲ್ ಇನ್ಸ್ಪೆಕ್ಟರ್ ನಂದೀಶ್ ಯಾವುದೇ ಕ್ರಮ ಕೈಗೊಂಡಿರಲಿಲ್ಲ ಎಂದು ಸಿಸಿಬಿ ಪೊಲೀಸರು, ಹಿರಿಯ ಅಧಿಕಾರಿಗಳಿಗೆ ವರದಿ ನೀಡಿದ್ದರಿಂದ ನಂದೀಶ್ರನ್ನು ಅಮಾನತು ಮಾಡಲಾಗಿತ್ತು.












Click it and Unblock the Notifications