ಮುಖ್ಯಮಂತ್ರಿಗಳ ಗಮನ ಸೆಳೆದ ಬೆಳ್ಳಂದೂರು ಕೆರೆ ನೊರೆ
ಬೆಂಗಳೂರು, ಅಕ್ಟೋಬರ್ 09 : ಬೆಳ್ಳಂದೂರು ಕೆರೆಯ ನೊರೆ ಸಮಸ್ಯೆಯನ್ನು ನಿವಾರಿಸಲು ತಕ್ಷಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಬಿಎಂಪಿ ಆಯುಕ್ತ ಜಿ. ಕುಮಾರ್ ನಾಯಕ್ ಅವರಿಗೆ ಸೂಚನೆ ನೀಡಿದ್ದಾರೆ.
ಬೆಳ್ಳಂದೂರು ಕೆರೆಯಿಂದ ಉಕ್ಕಿ ಹರಿಯುತ್ತಿರುವ ನೊರೆಯ ಸಮಸ್ಯೆಯನ್ನು ತಡೆಗಟ್ಟಲು ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಮುಖ್ಯಮಂತ್ರಿಗಳು ಗುರುವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ದೂರವಾಣಿ ಕರೆ ಮಾಡಿ ನಿರ್ದೇಶನ ನೀಡಿದ್ದಾರೆ. [ಬೆಳ್ಳಂದೂರು ಕೆರೆ ಶುದ್ಧ ಮಾಡಲು ಸಹಿ ಹಾಕಿ]

ಬೆಳ್ಳಂದೂರು ಕೆರೆಯಲ್ಲಿ ನೊರೆ ಹಾಗೂ ದುರ್ನಾತ ಹೊರಹೊಮ್ಮಿ ಆರೋಗ್ಯ ಸಮಸ್ಯೆಗಳು ಉಂಟಾಗುತ್ತಿವೆ ಎಂದು ಸಾಮಾಜಿಕ ಜಾಲ ತಾಣದಲ್ಲಿ ಚರ್ಚೆ ನಡೆಯುತ್ತಿದೆ. ಈ ದೂರುಗಳಿಗೆ ತಕ್ಷಣ ಸ್ಪಂದಿಸಿರುವ ಮುಖ್ಯಮಂತ್ರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು. [ರಸ್ತೆಗೆ ಬಂತು ಬೆಳ್ಳಂದೂರು ಕೆರೆ ನೊರೆ]
ನೊರೆಯ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಕೈಗೊಳ್ಳಬಹುದಾದ ದೀರ್ಘಕಾಲಿಕ ಕ್ರಮಗಳ ಕುರಿತು ಚರ್ಚೆ ನಡೆಸಲು ಶೀಘ್ರವೇ ಉನ್ನತ ಮಟ್ಟದ ಅಧಿಕಾರಿಗಳ ಸಭೆ ಕರೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಅಭಿಯಾನ ಆರಂಭವಾಗಿತ್ತು : ಸುಮಾರು ಆರು ತಿಂಗಳಿನಿಂದ ಬೆಳ್ಳಂದೂರು ಕರೆಯ ನೊರೆ ಉಕ್ಕಿ ಹರಿಯುತ್ತಿದೆ. ಒಡಲಲ್ಲಿ ವಿಷ ತುಂಬಿಕೊಂಡಿರುವ ಬೆಳ್ಳಂದೂರು ಕೆರೆಯ ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಅಗತ್ಯ ಕ್ರಮಗಳನ್ನು ಕೈಗೊಂಡಿಲ್ಲ.
ಆದ್ದರಿಂದ, 'ಕ್ಲೀನ್ ಅಪ್ ಬೆಳ್ಳಂದೂರು ಲೇಕ್' ಎಂಬ ಅಭಿಯಾನ ಆರಂಭವಾಗಿತ್ತು. 18,769 ಜನರು ಇದುವರೆಗೂ ಈ ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದು ಕೆರೆ ಸಮಸ್ಯೆಯನ್ನು ಬಗೆಹರಿಸಿ ಎಂದು ಸಹಿ ಹಾಕಿದ್ದಾರೆ. ಇದಕ್ಕೆ ಸ್ಪಂದಿಸಿರುವ ಸಿದ್ದರಾಮಯ್ಯ ಅವರು ಬಿಬಿಎಂಪಿಗೆ ಈ ಕುರಿತು ಸೂಚನೆ ನೀಡಿದ್ದಾರೆ.












Click it and Unblock the Notifications