ಕೈಗಾರಿಕಾ ವ್ಯಾಜ್ಯಗಳ ಇತ್ಯರ್ಥ್ಯಕ್ಕೆ ಸಚಿವ ಜಗದೀಶ್ ಶೆಟ್ಟರ್ ಹೊಸ ಮಾರ್ಗ!
ಬೆಂಗಳೂರು ಜುಲೈ 3: ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಯಲ್ಲಿರುವ ಭೂ ಸ್ವಾಧೀನ ಹಾಗೂ ಹಂಚಿಕೆಯ ಬಗ್ಗೆ ಇರುವ ವ್ಯಾಜ್ಯಗಳನ್ನು ಶೀಘ್ರವಾಗಿ ಪರಿಹರಿಸುವ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರಾದ ಶ್ರೀ ಜಗದೀಶ ಶೆಟ್ಟರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
Recommended Video
ಕರ್ನಾಟಕ ಉದ್ಯೋಗ ಮಿತ್ರ ಸಭಾಂಗಣದಲ್ಲಿ ನಡೆದ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಯ ಮುಂದುವರೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು. ಕರ್ನಾಟಕ ಪ್ರದೇಶಾಭಿವೃದ್ದಿ ಮಂಡಳಿಯ ಅಡಿಯಲ್ಲಿ ಹಲವಾರು ವ್ಯಾಜ್ಯಗಳಿಗೆ ಕೇವಲ ಮಧ್ಯಸ್ಥಿಕೆಯ ಅವಶ್ಯಕತೆಯಿದೆ. ಇಂತಹ ಪ್ರಕರಣಗಳನ್ನು ವೇಗವಾಗಿ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಬೇಕಾಗಿದೆ. ಈ ಹಿನ್ನಲೆ ಲೋಕ್ ಅದಾಲತ್ ಮೂಲಕ ಪರಿಹರಿಸಬಹುದಾದ ಪ್ರಕರಣಗಳ ಪಟ್ಟಿಯನ್ನು ತಯಾರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಕರ್ನಾಟಕ ಕೈಗಾರಿಕಾ ವ್ಯವಸ್ಥೆಯಲ್ಲಿ ಕ್ರಾಂತಿಕಾರಕ ಬದಲಾವಣೆ
ಇನ್ನು, ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ, ಕೈಗಾರಿಕಾ ಇಲಾಖೆ ಆಯುಕ್ತೆ ಶ್ರೀಮತಿ ಗುಂಜನ್ ಕೃಷ್ಣ, ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ ಹೆಚ್ ಶಿವಶಂಕರ್ ಸೇರಿದಂತೆ ಹಲವು ಅಧಿಕಾರಿಗಳು ಭಾಗವಹಿಸಿದ್ದರು.
|
ಕಾನೂನು ಸಲಹೆಗಾರರ ತಂಡ ರಚಿಸಿ ಎಂದು ಶೆಟ್ಟರ್ ಸಲಹೆ
ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಗೆ ಲಾಭ ಹಾಗೂ ಮಂಡಳಿಯ ಬಗ್ಗೆ ನ್ಯಾಯಾಲಯದಲ್ಲಿ ಹಿತಾಸಕ್ತಿಯನ್ನು ಕಾಪಾಡುವಂತಹ ಕೆಲಸ ಮಾಡುವ ಕಾನೂನು ಸಲಹೆಗಾರರ ತಂಡ ರಚಿಸುವಂತೆ ಸಚಿವ ಜಗದೀಶ್ ಶೆಟ್ಟರ್ ಸೂಚನೆ ನೀಡಿದರು. ಅಲ್ಲದೆ, ಮಂಡಳಿಯ ವತಿಯಿಂದ ಭೂಸ್ವಾಧೀನ, ಹಂಚಿಕೆ, ಪರಿಹಾರ ಹಣ ವಿತರಣೆ ಸೇರಿದಂತೆ ಹಲವಾರು ಕಾರ್ಯಗಳಿಗೆ ಒಂದು ಕಾಲಮಿತಿಯ ನಿಯಮಗಳನ್ನು ರೂಪಿಸುವಂತೆ ತಿಳಿಸಿದ್ದಾರೆ.
ಕೈಗಾರಿಕಾ ಪ್ರದೇಶಕ್ಕೆ ಸಮರ್ಪಕ ವಿದ್ಯುತ್ ಪೂರೈಕೆ
ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿ ಆಯಾ ಪ್ರದೇಶಗಳಲ್ಲಿ ಸಮರ್ಪಕವಾದ ವಿದ್ಯುತ್ ವ್ಯವಸ್ಥೆ ಕಲ್ಪಿಸುವುದು ಅವಶ್ಯಕವಾಗಿದೆ. ಭೂ ಸ್ವಾಧೀನ ಹಾಗೂ ಹಂಚಿಕೆ ಪ್ರಕ್ರಿಯೆ ಮತ್ತು ಮೂಲಭೂತ ಸೌಕರ್ಯಗಳ ಜೊತೆ ಕೈಗಾರಿಕೆಗಳ ಸಮರ್ಪಕ ಮುನ್ನಡೆಗೆ ಅವಶ್ಯಕವಾಗಿರುವ ವಿದ್ಯುತ್ ಹಾಗೂ ನೀರಿನಂತಹ ಸೌಲಭ್ಯಗಳನ್ನು ನಾವು ಕಲ್ಪಿಸುವುದು ಅತ್ಯವಶ್ಯಕವಾಗಿದೆ. ಈ ನಿಟ್ಟಿನಲ್ಲಿ ವಾಟರ್ ಸೆಲ್ ನ ರೀತಿಯಲ್ಲಿ ಪವರ್ ಸೆಲ್ ಕೂಡಾ ರಚಿಸುವಂತೆ ಅಧಿಕಾರಿಗಳಿಗೆ ಹೇಳಿದ್ದಾರೆ.
ಆದಾಯ ಸಂಗ್ರಹಕ್ಕೂ ಆದ್ಯತೆ ನೀಡುವಂತೆ ಸಲಹೆ
ರಾಜ್ಯದ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯ ವತಿಯಿಂದ ಈಗಾಗಲೇ ಕೈಗಾರಿಕೆಗಳಿಗೆ ಹಂಚಿಕೆಯಾಗಿರುವ ಭೂಮಿಯಿಂದ ಬರಬೇಕಾಗಿರುವ ಶುಲ್ಕವನ್ನು ಸಂಗ್ರಹಿಸಬೇಕಿದೆ. ಈ ನಿಟ್ಟಿನಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಅಧಿಕಾರಿಗಳು ಕೈಗಾರಿಕೆಗಳಿಂದ ಸಂಗ್ರಹಿಸಬೇಕಾದ ಆದಾಯಕ್ಕೆ ಆದ್ಯತೆ ನೀಡುವಂತೆ ಸೂಚನೆ ನೀಡಿದರು.
ಭೂ ಹಂಚಿಕೆ ಕುರಿತು ಪತ್ರಗಳ ಶೀಘ್ರ ವಿಲೇವಾರಿ
ಕರ್ನಾಟಕ ರಾಜ್ಯದ ಏಕಗವಾಕ್ಷಿ ಮೂಲಕ ಅನುಮತಿ ಪಡೆದಿರುವಂತಹ ಕೈಗಾರಿಕೆಗಳಿಗೆ ಭೂ ಹಂಚಿಕೆ ಪತ್ರವನ್ನು ಕಾಲಮಿತಿಯಲ್ಲಿ ನೀಡಬೇಕು. ಒಟ್ಟಾರೆ ಕಾಲಮಿತಿಯ ಹೊಸ ನಿಯಮವನ್ನು ಜಾರಿಗೆ ತರುವುದರ ಜೊತೆಗೆ ಕಚೇರಿ ಕೆಲಸಗಳಿಗೆ ವೇಗ ನೀಡಿ ಎಂದು ಸಚಿವ ಜಗದೀಶ್ ಶೆಟ್ಟರ್ ಸಲಹೆ ನೀಡಿದ್ದಾರೆ.