ಫೆಬ್ರವರಿ ವೇಳೆಗೆ ಶಿಕ್ಷಕರ ವರ್ಗಾವಣೆ ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ ಭರವಸೆ
ಬೆಂಗಳೂರು, ನವೆಂಬರ್ 16: ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಗೊಂದಲವನ್ನು ಮುಂದಿನ ಫೆಬ್ರವರಿ ತಿಂಗಳ ಒಳಗಾಗಿ ಬಗೆಹರಿಸಿಕೊಡುತ್ತೇನೆ ಎಂದು ಸಿಎಂ ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.
ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಆಯೋಜಿಸಲಾಗಿದ್ದ ರಾಜ್ಯಮಟ್ಟದ ಶೈಕ್ಷಣಿಕ ಸಮ್ಮೇಳನಕ್ಕೆ ಚಾಲನೆ ಹಾಗೂ ಉತ್ತಮ ಶಿಕ್ಷಕರಿಗೆ ಸಾವಿತ್ರಿಭಾಯಿ ಫುಲೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.
ಮುಂದಿನ ನಾಲ್ಕು ತಿಂಗಳಲ್ಲಿ ಶೈಕ್ಷಣಿಕ ವರ್ಷ ಪೂರೈಕೆ ಆಗಲಿದೆ, ಈಗ ವರ್ಗಾವಣೆ ಮಾಡಿದರೆ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗುತ್ತದೆ ಎಂದ ಅವರು, ವರ್ಗಾವಣೆ ನೀತಿಯನ್ನು ಬದಲಾಯಿಸಿ ಶಿಕ್ಷಕರಿಗೆ ಅನುಕೂಲ ಮಾಡಿಕೊಡುವುದಾಗಿಯೂ ಭರವಸೆ ನೀಡಿದರು.

ವರ್ಗಾವಣೆಯಲ್ಲಿ ಆಗುತ್ತಿರುವ ಸಮಸ್ಯೆಗಳಿಂದ ಶಿಕ್ಷಕರು ನೊಂದಿದ್ದಾರೆ ಅವರ ಸಮಸ್ಯೆ ಬಗೆಹರಿಸುವುದು ನನ್ನ ಕರ್ತವ್ಯ, ಆದಷ್ಟು ಶೀಘ್ರವಾಗಿ ಕಮಿಟಿ ರಚನೆ ಮಾಡಿ ಶಿಕ್ಷಕರ ಸಮಸ್ಯೆಗಳನ್ನು ಬಗೆಹರಿಸುವುದು ನನ್ನ ಬಾದ್ಯತೆ ಎಂದು ಅವರು ಹೇಳಿದರು.
1200 ಕೋಟಿ ವೆಚ್ಚದಲ್ಲಿ ಶಾಲೆಗಳನ್ನು ದುರಸ್ತಿ ಮಾಡುವ ಕಾರ್ಯ ಈಗ ಜಾರಿಯಲ್ಲಿದೆ. ಖಾಸಗಿ ಶಾಲೆಗಳ ಗುಣಮಟ್ಟಕ್ಕೆ ಸರಿಸಮನಾಗಿ ಸರ್ಕಾರಿ ಶಾಲೆಗಳನ್ನು ಅಭಿವೃದ್ಧಿ ಪಡಿಸುವ ಗುರಿ ನಮ್ಮ ಸರ್ಕಾರಕ್ಕೆ ಇದೆ ಎಂದು ಅವರು ಹೇಳಿದರು.











Click it and Unblock the Notifications