ಸಿಎಂ ಬೊಮ್ಮಾಯಿ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ; ಪ್ರಯಾಣ ವಿಳಂಬ
ಬೆಂಗಳೂರು, ಡಿಸೆಂಬರ್ 28: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬೆಂಗಳೂರಿನಿಂದ ಹುಬ್ಬಳ್ಳಿಗೆ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಸದ್ಯಕ್ಕೆ ಅವರ ಪ್ರಯಾಣ ಎರಡು ಗಂಟೆಗಳ ಕಾಲ ವಿಳಂಬಗೊಂಡಿದೆ.
ವಿಮಾನದ ಬ್ಯಾಟರಿಯಲ್ಲಿ ಸಮಸ್ಯೆ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಪ್ರಯಾಣ ವಿಳಂಬವಾಗಲಿದ್ದು, ಸಿಎಂ ಬೊಮ್ಮಾಯಿ ಎಚ್ಎಎಲ್ ವಿಮಾನ ನಿಲ್ದಾಣದಲ್ಲಿಯೇ ವಿಶ್ರಾಂತಿ ಕೊಠಡಿಯಲ್ಲಿ ಕಾದು ಕುಳಿತಿದ್ದಾರೆ.
ಇಂದು ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆ ನಿಗದಿಯಾಗಿದ್ದು, ಅದರಲ್ಲಿ ಪಾಲ್ಗೊಳ್ಳಲು ಸಿಎಂ ಬಸವರಾಜ ಬೊಮ್ಮಾಯಿ ಹುಬ್ಬಳ್ಳಿಗೆ ವಿಮಾನದಲ್ಲಿ ಪ್ರಯಾಣ ಮಾಡಬೇಕಿತ್ತು. ಕಂದಾಯ ಸಚಿವ ಆರ್. ಅಶೋಕ್ ಸಹ ಸಿಎಂ ಬೊಮ್ಮಾಯಿ ಜೊತೆಯಲ್ಲಿದ್ದರು.

ಬೆಳಗ್ಗೆ 8.45ಕ್ಕೆ ಟೇಕ್ ಆಫ್ ಆಗಬೇಕಿದ್ದ ವಿಮಾನಕ್ಕೆ ಸದ್ಯಕ್ಕೆ ಟೇಕ್ ಆಫ್ ಕ್ಲಿಯರನ್ಸ್ ಸಿಕ್ಕಿಲ್ಲ. ಬೆಳಿಗ್ಗೆ 9.45ಕ್ಕೆ ಹುಬ್ಬಳ್ಳಿಗೆ ಆಗಮಿಸಬೇಕಿತ್ತು. ಆದರೆ ತಾಂತ್ರಿಕ ದೋಷದಿಂದಾಗಿ ವಿಮಾನ ಪ್ರಯಾಣ ಇನ್ನೂ ಎರಡು ಗಂಟೆ ತಡವಾಗುವ ಸಾಧ್ಯತೆಯಿದೆ.
ಮಧ್ಯಾಹ್ನ 12ಕ್ಕೆ ಮತ್ತೊಂದು ವಿಶೇಷ ವಿಮಾನದ ವ್ಯವಸ್ಥೆ ಮಾಡಲಾಗಿದ್ದು, ಅದರಲ್ಲಿ ಹುಬ್ಬಳ್ಳಿಗೆ ಪ್ರಯಾಣಿಸಲಿದ್ದಾರೆ. ಮುಖ್ಯಮಂತ್ರಿ ಬರುವುದು ವಿಳಂಬವಾದ ಕಾರಣ ಹುಬ್ಬಳ್ಳಿಯ ಡೆನ್ನಿಸನ್ ಹೋಟೆಲ್ನಲ್ಲಿ ಮಧ್ಯಾಹ್ನ 2ಕ್ಕೆ ಆರಂಭವಾಗಬೇಕಿದ್ದ ಬಿಜೆಪಿ ರಾಜ್ಯ ಪದಾಧಿಕಾರಿಗಳ ಸಭೆಯನ್ನು ಸಂಜೆ 7ಕ್ಕೆ ಮುಂದೂಡಲಾಗಿದೆ.
ಎರಡು ವಾರಗಳ ಹಿಂದೆ ಹುಬ್ಬಳ್ಳಿಯಲ್ಲಿ ದಟ್ಟ ಮೋಡಗಳ ಕಾರಣ, ಸಿಎಂ ಬೊಮ್ಮಾಯಿ ಸೇರಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಇದ್ದ ವಿಮಾನ ಅರ್ಧ ಗಂಟೆ ಕಾಲ ಆಗಸದಲ್ಲಿಯೇ ರೌಂಡ್ಸ್ ಹೊಡೆದಿತ್ತು.
ಇಂದಿನಿಂದ ಎರಡು ದಿನ ಕಾರ್ಯಕಾರಿಣಿ ಸಭೆ
ಇಂದಿನಿಂದ ಎರಡು ದಿನ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ನಾಳೆ (ಡಿಸೆಂಬರ್ 29) ಸಮಾರೋಪ ಸಮಾರಂಭ ನಡೆಯಲಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಪ್ರವಾಸ ಕೊನೆ ಕ್ಷಣದಲ್ಲಿ ರದ್ದಾಗಿದ್ದು, ಉಳಿದಂತೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತಿತರರು ಭಾಗಿಯಾಗಲಿದ್ದಾರೆ.
ಕೋವಿಡ್ ಹಿನ್ನೆಲೆಯಲ್ಲಿ ಬಹಿರಂಗ ಸಮಾವೇಶಗಳು ರದ್ದುಗೊಳಿಸಲಾಗಿದ್ದು, ಉಪ ಚುನಾವಣೆ, ಪರಿಷತ್ ಚುನಾವಣಾ ಫಲಿತಾಂಶದ ಕುರಿತು ಆತ್ಮಾವಲೋಕನ ನಡೆಯಲಿದೆ. ಮುಂಬರುವ ಚುನಾವಣೆಗೆ ಸಜ್ಜುಗೊಳ್ಳುವ ಕುರಿತು ಸಹ ಚರ್ಚೆಗಳು ನಡೆಯಲಿವೆ. ಶಾಸಕರು ಅಹವಾಲುಗಳನ್ನೂ ಪಡೆಯಲಿರುವ ರಾಷ್ಟ್ರೀಯ ನಾಯಕರು, ಹೈಕಮಾಂಡ್ಗೆ ತಲುಪಿಸುವ ಕಾರ್ಯ ಮಾಡಲಿದ್ದಾರೆ ಎನ್ನಲಾಗಿದೆ. ಮಹತ್ವದ ನಿರ್ಣಯಗಳಿಗೆ ಹುಬ್ಬಳ್ಳಿ ಕಾರ್ಯಕಾರಿಣಿ ಸಾಕ್ಷಿಯಾಗುತ್ತದೆ ಅನ್ನುವ ನಿರೀಕ್ಷೆ ಇದೆ.
ಮುಖ್ಯಮಂತ್ರಿ ಬದಲಾಗಲ್ಲ ಎಂದ ಅರುಣ್ ಸಿಂಗ್
"ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬದಲಾವಣೆ ಕೇವಲ ಊಹಾಪೋಹ. ಮುಂದಿನ ಚುನಾವಣೆಯನ್ನು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ನಡೆಸಲಾಗುವುದು," ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ರಾಜ್ಯ ಕಾರ್ಯಕಾರಿಣಿ ಹಿನ್ನೆಲೆಯಲ್ಲಿ ಹುಬ್ಬಳ್ಳಿ ನಗರಕ್ಕೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅರುಣ್ ಸಿಂಗ್, ಸಿಎಂ ಬೊಮ್ಮಾಯಿ ಆಡಳಿತಕ್ಕೆ ಬಹುಪರಾಕ್ ಹೇಳಿದ್ದಾರೆ. ಸಿಎಂ ಅದ್ಭುತ ಕೆಲಸ ಮಾಡುತ್ತಿದ್ದಾರೆ. ಬೊಮ್ಮಾಯಿ ಅತ್ಯಂತ ಪ್ರಾಮಾಣಿಕ, ಸಜ್ಜನ ರಾಜಕಾರಣಿ. ಬಸವರಾಜ ಬೊಮ್ಮಾಯಿ ಸಿಎಂ ಆಗಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಬೊಮ್ಮಾಯಿ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತಾರೆ. ಬೊಮ್ಮಾಯಿ ನೇತೃತ್ವದಲ್ಲಿ ಮುಂದಿನ ಚುನಾವಣೆ ನಡೆಯಲಿದೆ ಎಂದು ಹೇಳಿದ್ದಾರೆ.












Click it and Unblock the Notifications