'ತೇಜಸ್ವಿ ಸೂರ್ಯ ಅಮವಾಸ್ಯೆ ಇದ್ದಂತೆ' ಸಿಎಂ ಹೇಳಿಕೆಗೆ ತಿರುಗೇಟು...
ಬೆಂಗಳೂರು ಏಪ್ರಿಲ್ 8: 'ತೇಜಸ್ವಿ ಸೂರ್ಯ ಅಮವಾಸ್ಯೆ ಇದ್ದಂತೆ' ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ತಿರುಗೇಟು ನೀಡಿದ್ದಾರೆ.
ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತೇಜಸ್ವಿ ಸೂರ್ಯ ಅವರು, ಸಿದ್ದರಾಮಯ್ಯ ಅವರು ತಮ್ಮ ತಂದೆಯೊಂದಿಗೆ ಕೆಲಸ ಮಾಡಿದ್ದಾರೆ. ಅವರ ಕೆಲಸದ ಬಗ್ಗೆ ನಮ್ಮ ತಂದೆ ಹಲವಾರು ಬಾರಿ ಹೇಳಿದ್ದಾರೆ. ಅವರೊಬ್ಬ ಉತ್ತಮ ಕೆಲಸಗಾರ. ಪ್ರತೀ ಬಾರಿ ನಮ್ಮ ತಂದೆ ಅವರ ಬಗ್ಗೆ ಒಳ್ಳೆಯದನ್ನೇ ಹೇಳಿಕೊಂಡು ಬಂದಿದ್ದಾರೆ. ಹೀಗಾಗಿ ವೈಯಕ್ತಿಕವಾಗಿ ಅವರ ಬಗ್ಗೆ ನನಗೆ ಗೌರವವಿದೆ. ಅವರು ನಮ್ಮ ತಾತ ಅಜ್ಜನ ವಯಸ್ಸಿನಲ್ಲಿ ಇದ್ದಾರೆ. ಅವರು ಏನೇ ಹೇಳಿದರು ಅದು ಆಶೀರ್ವಾದ ಎಂದು ಭಾವಿಸ್ತೀನಿ' ಎಂದು ತೇಜಸ್ವಿ ಸೂರ್ಯ ಅವರು ಹೇಳಿದರು.

ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ವಿರುದ್ಧ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಕಣದಲ್ಲಿದ್ದಾರೆ. ಬೆಂಗಳೂರಿನಲ್ಲಿ ಸೌಮ್ಯ ರೆಡ್ಡಿ ಪರ ಪ್ರಚಾರ ಮಾಡಿದ ಸಿಎಂ ಸಿದ್ದರಾಮಯ್ಯ ತೇಜಸ್ವಿ ಸೂರ್ಯ ವಿರುದ್ಧ ಹರಿಹಾಯ್ದಿದ್ದರು. ಮೋದಿ ಹೆಸರು ಹೇಳಿಕೊಂಡು ಅವರು ಮತಯಾಚನೆ ಮಾಡುತ್ತಿದ್ದಾರೆ. ಅವರ ಕೊಡುಗೆ ಏನೂ ಇಲ್ಲ. ಹೀಗಾಗಿ ತೇಜಸ್ವಿ ಸೂರ್ಯ, ಸೂರ್ಯ ಅಲ್ಲ ಅಮವಾಸ್ಯೆ ಇದ್ದಂತೆ ಎಂದು ವ್ಯಂಗ್ಯವಾಡಿದ್ದರು. ಸಿದ್ದರಾಮಯ್ಯ ಹೇಳಿಕೆಗೆ ತೇಜಸ್ವಿ ಸೂರ್ಯ ನಯವಾಗಿ ತಿರುಗೇಟು ಕೊಟ್ಟಿದ್ದಾರೆ. ಅವರ ಮಾತು ನನಗೆ ಆಶೀರ್ವಾದ ಇದ್ದಂತೆ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ.
ಕಳೆದ ದಿನ ಪದ್ಮನಾಭನಗರ ಮತ್ತು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಗಳಲ್ಲಿ ವ್ಯಕ್ತವಾದ ಭರ್ಜರಿ ಜನ ಬೆಂಬಲಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಭಯಾನಕ ಬಿಜೆಪಿ ವಿರೋಧಿ ಅಲೆ ಇದೆ. ಸೌಮ್ಯರೆಡ್ಡಿ ಭಾರೀ ಅಂತರದಲ್ಲಿ ಗೆಲ್ಲುತ್ತಾರೆ. ಈ ಮಾತನ್ನು ನಾನು ಸುಮ್ಮನೆ ಹೇಳುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಬೊಮ್ಮನಹಳ್ಳಿಯಲ್ಲಿ ಇಂದು ಆಯೋಜಿಸಿದ್ದ ರೋಡ್ ಶೋದಲ್ಲಿ ಸೇರಿದ್ದ ಸುಮಾರು ಹತ್ತು ಸಾವಿರಕ್ಕೂ ಅಧಿಕ ಜನರನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಸೌಮ್ಯ ರೆಡ್ಡಿ ಅವರು ನೂರಕ್ಕೆ ನೂರು ಗೆಲ್ಲುತ್ತಾರೆ. ವಿಧಾನಸಭೆ ಚುನಾವಣೆಯಲ್ಲಿ ಸೌಮ್ಯರೆಡ್ಡಿಗೆ ಅನ್ಯಾಯವಾಗಿದೆ. ತೇಜಸ್ವಿ ಸೂರ್ಯ ಅವರನ್ನು ಸೋಲಿಸಿ ಸೌಮ್ಯರೆಡ್ಡಿಗೆ ನ್ಯಾಯ ಕೊಡುವ ಕೆಲಸವನ್ನು ಕ್ಷೇತ್ರದ ಜನರು ಮಾಡಬೇಕು ಎಂದರು.
ಪದ್ಮನಾಭನಗರ ಮತ್ತು ಬೊಮ್ಮನಹಳ್ಳಿ ವಿಧಾನಸಭಾ ಕ್ಷೇತ್ರಗಳಲ್ಲಿ ವ್ಯಕ್ತವಾದ ಭರ್ಜರಿ ಜನ ಬೆಂಬಲ ನೋಡಿದರೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ವಿರೋಧಿ ಅಲೆ ಜೋರಾಗಿದೆ ಎಂಬುದು ಕಾಣುತ್ತಿದೆ. ಸೌಮ್ಯರೆಡ್ಡಿ ಭಾರೀ ಅಂತರದಲ್ಲಿ ಗೆಲ್ಲುತ್ತಾರೆ. ಈ ಮಾತನ್ನು ನಾನು ಸುಮ್ಮನೆ ಹೇಳುತ್ತಿಲ್ಲ, ಇಂದಿನ ಜನಸಾಗರ ಇದಕ್ಕೆ ನಿದರ್ಶನವಾಗಿದೆ ಎಂದು ಸಿದ್ದರಾಮಯ್ಯ ಹೇಳಿದರು.












Click it and Unblock the Notifications