ಸಿಎಂ ವಸತಿ ಯೋಜನೆ: 50 ಸಾವಿರ ಮನೆ ನಿರ್ಮಾಣಕ್ಕೆ ಶೀಘ್ರ ಟೆಂಡರ್
ಬೆಂಗಳೂರು, ಸೆ.25: ಸಿಎಂ ವಸತಿ ಯೋಜನೆಯಲ್ಲಿ ಬೆಂಗಳೂರಿನಲ್ಲಿ 50 ಸಾವಿರ ಮನೆಗಳ ನಿರ್ಮಾಣಕ್ಕೆ ಅ.10ರೊಳಗೆ ಟೆಂಡರ್ ಕರೆಯಲಾಗುತ್ತದೆ ಎಂದು ಸಚಿವ ಯು.ಟಿ. ಖಾದರ್ ಹೇಳಿದ್ದಾರೆ.
ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ನಗರದಲ್ಲಿ ಒಂದು ಲಕ್ಷ ಮನೆ ನಿರ್ಮಾಣ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಅದರಲ್ಲಿ 49,500 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದೆ. ಇದಾದ ನಂತರ 2ನೇ ಹಂತದ ಫಲಾನುಭವಿಗಳ ಆಯ್ಕೆ ಮಾಡಲಾಗಿದೆ ಎಂದು ಹೇಳಿದರು.
ರಾಜೀವ್ ಗಾಂಧಿ ವಸತಿ ಯೋಜನೆ ಮೂಲಕ ಟೆಂಡರ್ ಕರೆದು ಕೈಗೆಟುಕುವ ದರದಲ್ಲಿ ಮನೆಗಳನ್ನು ನಿರ್ಮಿಸಿಕೊಡುವ ಉದ್ದೇಶವಿದೆ. ಎತ್ತರದ ಕಟ್ಟಡಗಳನ್ನು ಕಟ್ಟುವ ಬಗ್ಗೆ ರಾಜೀವ್ ಗಾಂಧಿ ವಸತಿ ನಿಗಮದ ಅಧಿಕಾರಿಗಳು ಬಾಂಬೆ, ಹೈದರಾಬಾದ್ ನಗರಗಳಲ್ಲಿ ಅಧ್ಯಯನ ಮಾಡಲಿದ್ದಾರೆ. ಮಾದರಿಯಾದ ಮನೆಗಳನ್ನು ನಿರ್ಮಿಸಿಕೊಡುವ ಉದ್ದೇಶ ಸರ್ಕಾರದ್ದಾಗಿದೆ ಎಂದರು.

ಮೊದಲು ನೆಲಮಹಡಿ ಸೇರಿ ಒಟ್ಟು ನಾಲ್ಕು ಮಹಡಿಗಳ ಕಟ್ಟಡಗಳ ನಿರ್ಮಿಸಬೇಕು ಎಂಬ ಉದೇಶವಿತ್ತು. ಈಗ 10-14 ಮಹಡಿಗಳ ಕಟ್ಟಡ ನಿರ್ಮಿಸಲು ಚಿಂತಿಸಲಾಗಿದೆ ಎಂದು ಹೇಳಿದರು.
ಬೆಂಗಳೂರು ನಗರ 6367 ಮನೆಗಳು ಸೇರಿದಂತೆ ರಾಜ್ಯದಲ್ಲಿ 83 ಸಾವಿರ ಮನೆಗಳನ್ನು ಕೊಳಗೇರಿ ನಿವಾಸಿಗಳಿಗೆ ನಿರ್ಮಾಣ ಮಾಡಲು ಶೀಘ್ರದಲ್ಲೇ ಟೆಂಡರ್ ಕರೆಯಲಾಗುವುದು ಎಂದರು. ಈಗಾಗಲೇ 62 ಸಾವಿರ ಮನೆ ನಿರ್ಮಾಣಕ್ಕೆ ಟೆಂಡರ್ ಪ್ರಕ್ರಿಯೆ ಪ್ರಗತಿಯಲ್ಲಿದ್ದು ಉಳಿದ 21 ಸಾವಿರ ಮನೆಗಳ ನಿರ್ಮಾಣಕ್ಕೂ ರಾಜ್ಯದ ಉನ್ನತ ಮಟ್ಟದ ಸಭೆ ಒಪ್ಪಿಗೆ ನೀಡಿದೆ ಎಂದರು.











Click it and Unblock the Notifications