ಬೆಂಗಳೂರಿನಲ್ಲಿ ನಿರ್ಮಾಣವಾಗಲಿದೆ 100 ಅಡಿ ಅಗಲದ ಜಲಪಾತ
ಬೆಂಗಳೂರು, ಮಾರ್ಚ್ 11: ಐಟಿ ಸಿಟಿ, ಕರ್ನಾಟಕ ರಾಜಧಾನಿ ಬೆಂಗಳೂರಿನಲ್ಲಿ ಜಲಪಾತವೊಂದು ಸೃಷ್ಟಿಯಾಗಲಿದ್ದು, ಉಪ ಮುಖ್ಯಮಂತ್ರಿ ಡಾ.ಸಿ.ಎನ್ ಅಶ್ವಥ್ ನಾರಾಯಣ ಅವರು ಮಹಾ ಶಿವರಾತ್ರಿ ದಿನದಂದು ಆ ಯೋಜನೆ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು.
ಉದ್ಯಾನನಗರಿ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಸ್ಯಾಂಕಿ ಕೆರೆಯ ಈಜುಕೊಳದ ಪಕ್ಕದಲ್ಲಿ ಜಲಪಾತ ನಿರ್ಮಿಸುವ ಸಂಬಂಧ ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ ಅವರು ಸ್ಥಳ ಪರಿಶೀಲನೆ ನಡೆಸಿದರು. ಈ ಮೂಲಕ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಿಸಿಕೊಂಡು ಕೃತಕ ಜಲಪಾತವನ್ನು ನಿರ್ಮಾಣ ಮಾಡಲಾಗುತ್ತಿದೆ.
ಕೃತಕ ಜಲಪಾತ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ನಡೆಸಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಅಶ್ವಥ್ ನಾರಾಯಣ ಅವರು, ಸದಾಶಿವ ನಗರದ ಸ್ಯಾಂಕಿ ಕೆರೆ ನವೀಕರಣ ಕಾಮಗಾರಿ ನಡೆಯುತ್ತಿದ್ದು, ಹೆಚ್ಚುವರಿಯಾಗಿ ಕೆರೆ ಪಕ್ಕದ ಈಜುಕೊಳಕ್ಕೆ ಹೊಂದಿಕೊಂಡಂತೆ ಜಲಪಾತದ ಗೋಡೆ ನಿರ್ಮಿಸಲಾಗುವುದು ಎಂದರು.

ಜಲಪಾತದ ಜತೆಗೆ ಏರಿಯೇಟರ್ಸ್ ಕೂಡ ಅಳವಡಿಸಲಾಗುವುದು, ಇದರಿಂದ ಕೆರೆ ನೀರು ಸ್ವಚ್ಛ ಆಗಲಿದೆ. ಈಗಾಗಲೇ ಸರ್ವಋತುಗಳಲ್ಲಿಯೂ ನಳನಳಿಸುವ ಉದ್ಯಾನವನಗಳಿಂದ ಜಗತ್ಪ್ರಸಿದ್ಧವಾಗಿರುವ ಬೆಂಗಳೂರು ನಗರಕ್ಕೆ ಈ ಜಲಪಾತ ಮತ್ತಷ್ಟು ಮೆರಗು ನೀಡಲಿದೆ. ಮಲ್ಲೇಶ್ವರದ ಪಾರಂಪರಿಕ ವೈಭವಕ್ಕೆ ಪೂರಕವಾಗಿರಲಿದೆ. ಇದಕ್ಕೆ ಒಂದೂವರೆ ಕೋಟಿ ಖರ್ಚಾಗುವ ಅಂದಾಜಿದೆ ಎಂದು ಮಾಹಿತಿ ಹಂಚಿಕೊಂಡರು.
12 ರಿಂದ 15 ಅಡಿ ಎತ್ತರ ಹಾಗೂ ಸುಮಾರು 100 ಅಡಿ ಅಗಲ ಇರಲಿರುವ ಈ ಜಲಪಾತ ನಗರದ ಪ್ರವಾಸೋದ್ಯಮಕ್ಕೂ ಪೂರಕವಾಗಿರಲಿದ್ದು, ಸ್ಯಾಂಕಿ ಕೆರೆಯು ಮಲ್ಲೇಶ್ವರಕ್ಕೆ ಮಾತ್ರವಲ್ಲ, ಇಡೀ ಬೆಂಗಳೂರಿಗೆ ಒಂದು ಮಹತ್ವದ ತಾಣ. ಮುಂದಿನ ದಿನಗಳಲ್ಲಿ ಕೆರೆಗೆ ಇನ್ನಷ್ಟು ಕಾಯಕಲ್ಪ ನೀಡಲಾಗುವುದು. ಪ್ರತಿಯೊಬ್ಬ ಬೆಂಗಳೂರಿಗರು ಇಲ್ಲಿಗೆ ಭೇಟಿ ನೀಡಬಹುದು. ಆ ರೀತಿಯಲ್ಲಿ ಇಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.

ಮಹಾನಗರ ಪಾಲಿಕೆ ಮುಖ್ಯ ಇಂಜಿನಿಯರ್ (ಕೆರೆ) ಮೋಹನ್ ಕೃಷ್ಣ, ಪಾಲಿಕೆ ಕಾರ್ಯನಿರ್ವಾಹಕ ಇಂಜಿನಿಯರ್ ಪಾಪರೆಡ್ಡಿ, ಸಹಾಯಕ ಇಂಜಿನಿಯರ್ ಗಳಾದ ಸುಷ್ಮಾ, ಸ್ವಪ್ನಾ, ಬಿಬಿಎಂಪಿ ಮಾಜಿ ಸದಸ್ಯರಾದ ಮಂಜುನಾಥ ರಾಜು ಸೇರಿದಂತೆ ಹಲವು ಬಿಜೆಪಿ ಮುಖಂಡರು ಡಿಸಿಎಂ ಜೊತೆಗಿದ್ದರು.












Click it and Unblock the Notifications