Bhagavad Gita: ಪಠ್ಯದಲ್ಲಿ ಇದೇ ವರ್ಷದಿಂದ ಭಗವದ್ಗೀತೆ ಪರಿಚಯಿಸಲ್ಲ; ಸಚಿವ ಬಿ.ಸಿ. ನಾಗೇಶ್
ಬೆಂಗಳೂರು, ಮಾರ್ಚ್ 18: "ರಾಜ್ಯದ ಪಠ್ಯಪುಸ್ತಕದಲ್ಲಿ ಈ ವರ್ಷ ಭಗವದ್ಗೀತೆಯನ್ನು ಪರಿಚಯಿಸುವುದಿಲ್ಲ, ಸೇರಿಸಲ್ಲ," ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದಾರೆ.
ಕರ್ನಾಟಕದ ಪಠ್ಯ-ಪುಸ್ತಕದಲ್ಲಿ ಭಗವದ್ಗೀತೆ ಪರಿಚಯಿಸುವ ವಿಚಾರವಾಗಿ ಬೆಂಗಳೂರಿನಲ್ಲಿ ಮಾತನಾಡಿದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟನೆ ನೀಡಿದ ಅವರು, "ಈಗ ಪುಸ್ತಕದಲ್ಲಿ ಜ್ಞಾನವಿದೆ, ಸಂಸ್ಕಾರವಿಲ್ಲ ಎನ್ನುತ್ತಿದ್ದಾರೆ. ಮಾರಲ್ ಸೈನ್ಸ್ ತರುವಂತೆ ಹಲವರು ಬೇಡಿಕೆ ಇಟ್ಟಿದ್ದು, ಇಂತಹದೊಂದು ಬೇಡಿಕೆ ಬಗ್ಗೆ ನಾವು ಚರ್ಚೆ ಮಾಡುತ್ತೇವೆ. ಸಿಎಂ ಬಸವರಾಜ ಬೊಮ್ಮಾಯಿ, ಶಿಕ್ಷಣ ತಜ್ಞರ ಜೊತೆ ಚರ್ಚಿಸುತ್ತೇವೆ. ಅದನ್ನು ಹೇಗೆ ಜಾರಿ ಮಾಡಬೇಕೆಂದು ನಿರ್ಧಾರ ಮಾಡುತ್ತೇವೆ," ಎಂದು ತಿಳಿಸಿದ್ದಾರೆ.
ಕೋಲಾರ-ಚಿಕ್ಕಬಳ್ಳಾಪುರ ಪ್ರಾಕೃತಿಕ ವಿಪತ್ತಿಗೆ ಒಳಗಾಗಿವೆ ಎಂದು ಘೋಷಿಸಲು ಒತ್ತಾಯ
"ಗುಜರಾತ್ ಮಾದರಿ ಎಂಬುದು ನನಗೆ ಗೊತ್ತಿಲ್ಲ. ವಿದ್ಯಾರ್ಥಿಗಳಿಗೆ ಜ್ಞಾನದ ಜತೆ ಸಂಸ್ಕಾರ ಕಲಿಸಬೇಕಿದೆ. ಅದರ ಬಗ್ಗೆ ಈಗ ಚರ್ಚೆ ನಡೆಯುತ್ತಿದೆ," ಎಂದು ಬೆಂಗಳೂರಿನಲ್ಲಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದರು.
ಗುಜರಾತ್ ರಾಜ್ಯದ ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆ ವಿಚಾರವಾಗಿ ಬೆಂಗಳೂರಿನಲ್ಲಿ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಪ್ರತಿಕ್ರಿಯೆ ನೀಡಿದ್ದು, "ರಾಜ್ಯದಲ್ಲಿ ಶಿಕ್ಷಣ ವ್ಯವಸ್ಥೆ ಬದಲಾಯಿಸಲು ಹೋಗಬೇಡಿ. ಕೊರೊನಾದಿಂದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ. ಅವರಿಗೆ ಗುಣಮಟ್ಟದ ಶಿಕ್ಷಣ ಕೊಡುವ ಬಗ್ಗೆ ಗಮನಹರಿಸಿ. ಶಾಲಾ ಕಟ್ಟಡಗಳು, ಮೂಲಸೌಕರ್ಯಗಳ ಬಗ್ಗೆ ಗಮನ ಕೊಡಿ," ಎಂದು ರಾಜ್ಯ ಸರ್ಕಾರಕ್ಕೆ ಶಾಸಕ ಪ್ರಿಯಾಂಕ್ ಖರ್ಗೆ ಟಾಂಗ್ ನೀಡಿದರು.
ಪರೀಕ್ಷೆ, ತರಗತಿಗಳಲ್ಲಿ ಹಿಜಾಬ್ ನಿಯಮ ಸಡಿಲಿಕೆ ಇಲ್ಲ: ಬಿಸಿ ನಾಗೇಶ್
ಹಿಜಾಬ್ ವಿಚಾರವಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗುವ ವಿದ್ಯಾರ್ಥಿನಿಯರಿಗೆ ಶಿಕ್ಷಣ ಇಲಾಖೆ ಮತ್ತೆ ಸ್ಪಷ್ಟನೆ ನೀಡಿದ್ದು, ಅದರಂತೆ ಸದ್ಯ ಹೈಕೋರ್ಟ್ ತೀರ್ಪಿನ ಅನುಸಾರ ಹಿಜಾಬ್ ಧರಿಸಿ ಶಾಲೆಗೆ ಹಾಕರಾಗಲು ಅಥವಾ ಪರೀಕ್ಷೆಗೆ ಹಾಜರಾಗಲು ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿಸಿ ನಾಗೇಶ್ ಸ್ಪಷ್ಟಪಡಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆಗೆ ತಿಂಗಳು ಮಾತ್ರ ಬಾಕಿ ಇದ್ದು, ಈ ನಡುವೆಯೇ ಸುಪ್ರೀಂ ಕೋರ್ಟ್ ಮೊರೆ ಹೋದರೆ, ಅಲ್ಲಿಯ ತೀರ್ಪು ಬರುವವರೆಗೂ ಹಿಜಾಬ್ ಧರಿಸಲು ಅವಕಾಶ ನೀಡಿ ಎಂದು ಕೆಲ ಮುಸ್ಲಿಂ ವಿದ್ಯಾರ್ಥಿಗಳು ಬೇಡಿಕೆ ಇಟ್ಟಿದ್ದರು. ಪರೀಕ್ಷೆಯಲ್ಲಾದರೂ ಹಿಜಾಬ್ ಧರಿಸಲು ಅವಕಾಶ ನೀಡಿ ಎಂದು ಕೇಳಿದ್ದರು. ಆದರೆ, ಅದಕ್ಕೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ.
ತರಗತಿಯಲ್ಲಿ ಇನ್ನು ಹಿಜಾಬ್ ಧರಿಸಲು ಅವಕಾಶ ಇಲ್ಲ. ಹೈಕೋರ್ಟ್ ತೀರ್ಪು ನೀಡಿದ್ದು, ಹೀಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗುವ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಮತ್ತೆ ಅವಕಾಶ ಸಡಿಲಿಕೆ ಇರುವುದಿಲ್ಲ. ಇನ್ನು ಮುಂದೆ ಪರೀಕ್ಷೆಯ ವಿಚಾರದಲ್ಲಿ ವಿಶೇಷ ಅವಕಾಶವನ್ನು ನೀಡಲ್ಲ. ಇಷ್ಟು ದಿನ ಕೋರ್ಟ್ ತೀರ್ಪು ಬಂದಿರಲಿಲ್ಲ. ಹೀಗಾಗಿ ಶಿಕ್ಷಣ ಇಲಾಖೆ ಕೊಂಚ ಸಡಿಲಿಕೆ ನೀಡಿತ್ತು. ಇನ್ನು ಮುಂದೆ ಮತ್ತೆ ಯಾವುದೇ ಕಾರಣಕ್ಕೂ ಹಿಜಾಬ್ಗೆ ಅವಕಾಶ ಇಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಸ್ಪಷ್ಟವಾಗಿ ಹೇಳಿದ್ದಾರೆ.
Recommended Video