ಕರ್ನಾಟಕ ಮುಕ್ತ ವಿವಿಯಿಂದ ಕಾನೂನು ಬಾಹಿರವಾಗಿ ಹಣ ವರ್ಗಾವಣೆ : ಕಾಂಗ್ರೆಸ್ ಆರೋಪ
ಬೆಂಗಳೂರು, ಜುಲೈ 23: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸುಮಾರು 85 ಕೋಟಿ ರುಪಾಯಿ ಹಣವನ್ನು ಉನ್ನತ ಶಿಕ್ಷಣ ಸಚಿವ ಅಶ್ವತ್ಥ್ ನಾರಾಯಣ ಅವರ ಪ್ರಭಾವದಿಂದ ಇತರೆ ಕಾಮಗಾರಿಗಳಿಗೆ ಕಾನೂನು ಬಾಹಿರವಾಗಿ ವರ್ಗಾವಣೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಕರ್ನಾಟಕ ಮುಕ್ತ ವಿಶ್ವವಿದ್ಯಾಲಯದ ವತಿಯಿಂದ ಮಾಡಲಾದ ವಿವಿಧ ಸಹಕಾರ ಸಂಸ್ಥೆಗಳ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದ್ದು ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದೆ.
ಬೆಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಸಂವಹನ ವಿಭಾಗದ ಉಪಾಧ್ಯಕ್ಷ ರಮೇಶ್ ಬಾಬು, ಸಂವಹನ ವಿಭಾಗದ ಸಂಜೋಜಕರಾದ ಜಿ.ಸಿ ರಾಜು ಹಾಗೂ ಕಾನೂನು ವಿಭಾಗದ ಉಪಾಧ್ಯಕ್ಷರಾದ ದಿವಾಕರ್ ಮಾಹಿತಿ ನೀಡಿದರು.
ಮೈಸೂರಿನ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯವು ಕಲಂ 4ರ ಅಡಿಯಲ್ಲಿ ತನ್ನ ಧೈಯೋದ್ದೇಶಗಳ ಅನುಗುಣವಾಗಿ ಕಾರ್ಯ ನಿರ್ವಹಿಸಬೇಕು. ಈ ವಿಶ್ವ ವಿದ್ಯಾಲಯಕ್ಕೆ ರಾಜ್ಯಪಾಲರು ಕುಲಾಧಿಪತಿಗಳಾಗಿದ್ದು, ರಾಜ್ಯದ ಉನ್ನತ ಶಿಕ್ಷಣ ಸಚಿವರಾಗಿ ಡಾ. ಅಶ್ವಥ್ ನಾರಾಯಣ್ ಸಹ ಕುಲಾಧಿಪತಿಗಳಾಗಿರುತ್ತಾರೆ. ಡಾ. ಎಸ್.ವಿದ್ಯಾಶಂಕರ್ ಕುಲಪತಿಗಳಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಮಾಸಿಕ ಅಂದಾಜು 6 ಕೋಟಿ ರುಪಾಯಿಗಳ ವೇತನ ಪಾವತಿ ಮಾಡಬೇಕಾಗಿದ್ದು, ವಿದ್ಯಾರ್ಥಿಗಳ ಮೂಲಕ ವಾರ್ಷಿಕ ಸುಮಾರು 15-16 ಕೋಟಿ ಶುಲ್ಕ ಸಂಗ್ರಹವಾಗುತ್ತದೆ. ವಿಶ್ವವಿದ್ಯಾಲಯಕ್ಕೆ ಯಾವುದೇ ಆದಾಯದ ಮೂಲಗಳು ಇಲ್ಲದಿದ್ದರೂ, ಶಿಕ್ಷಣ ಸಚಿವರ ಕಾರಣಕ್ಕಾಗಿ ವಿಶ್ವವಿದ್ಯಾಲಯದಲ್ಲಿ ಠೇವಣಿ ರೂಪದಲ್ಲಿರುವ ಹಣವನ್ನು ದುರ್ಬಳಕೆ ಮಾಡಿ ಅನುದಾನಗಳ ಮೂಲಕ ಹಂಚಲಾಗಿದೆ ಎಂದು ಆರೋಪಿಸಿದರು.

ಹಣ ದುರ್ಬಳಕೆ ಮಾಡಿರುವ ಆರೋಪ
ಯಾವುದೇ ವಿಶ್ವವಿದ್ಯಾಲಯ ರಾಜ್ಯ ಸರ್ಕಾರದ ರೀತಿಯಲ್ಲಿ ಅನುದಾನಗಳನ್ನು ಹಂಚಿಕೆ ಮಾಡಲು ಸಾಧ್ಯವಿಲ್ಲ. ಆದರೆ ಸಚಿವ ಡಾ. ಅಶ್ವತ್ಥ ನಾರಾಯಣ ಪ್ರಭಾವದಿಂದ ಕರ್ನಾಟಕ ವಿಶ್ವವಿದ್ಯಾಲಯದ ಕುಲಪತಿಗಳು ನಿಯಮ ಮೀರಿ ಹಣ ದುರ್ಬಳಕೆ ಮಾಡಿದ್ದು, ಇದರ ಸಂಪೂರ್ಣ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.
ಅಕ್ರಮ ತನಿಖೆಗೆ ರಚನೆಯಾಗಿದ್ದ ಜಸ್ಟೀಸ್ ಭಕ್ತವತ್ಸಲ ಸಮಿತಿಯ ವರದಿಯನ್ನು ಕಡೆಗಣಿಸಿ, ವಿಶ್ವವಿದ್ಯಾಲಯದಲ್ಲಿ ಅಕ್ರಮ ನೇಮಕಾತಿ, ಪದೋನ್ನತಿ ಮಾಡಲಾಗಿದೆ. ವಿಶ್ವವಿದ್ಯಾಲಯದ ಏಪ್ರಿಲ್ 1, 2006ರ ನಂತರ ನೇಮಕವಾದ ಸಿಬ್ಬಂದಿಗೆ ಎನ್ಪಿಎಸ್ ಪಿಂಚಣಿ ಯೋಜನೆ ಜಾರಿಗೊಳಿಸಲು ಸಂಪನ್ಮೂಲದ ಕೊರತೆಯಿದೆ ಎಂದು ಹೇಳುವ ವಿಶ್ವವಿದ್ಯಾಲಯ ಅಕ್ರಮದ ಮೂಲಕ ಹಲವಾರು ಕೋಟಿ ರೂಪಾಯಿಗಳನ್ನು ಇತರೆ ಕಾಮಗಾರಿಗೆ ನೀಡಿದೆ ಎಂದು ಆರೋಪಿಸಿದರು.
ಮುಕ್ತ ವಿಶ್ವ ವಿದ್ಯಾಲಯದ ಹಣವನ್ನು ಇತರ ಉದ್ದೇಶಗಳಿಗೆ ಬಳಸಲು ಆಗಸ್ಟ್ 31, 2020ರಲ್ಲಿ ಸಚಿವ ಅಶ್ವತ್ಥ ನಾರಾಯಣ ಅವಕಾಶ ನೀಡಿರುತ್ತಾರೆ. ಮೈಸೂರು ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಉಪಕುಲಪತಿಗಳು ಆಗಸ್ಟ್ 17, 2020ರಲ್ಲಿ ಸುಮಾರು 85 ಕೋಟಿ ರುಪಾಯಿ ವಿಶ್ವ ವಿದ್ಯಾಲಯದ ಹಣವನ್ನು ಇತರೆ ಕಾಮಗಾರಿಗಳಿಗೆ ಬಳಸಲು ಸಭೆಯ ಮೂಲಕ ಅನುಮತಿ ನೀಡಿದ್ದು, ಪರಿಷ್ಕೃತ ವೆಚ್ಚದಲ್ಲಿ ಇದು 94 ಕೋಟಿ ರೂಪಾಯಿ ಆಗಿರುತ್ತದೆ. ಶಿಕ್ಷಣ ಸಚಿವರ ಪ್ರಭಾವದ ಕಾರಣಕ್ಕಾಗಿ 25 ಕೋಟಿ ರುಪಾಯಿ ಸಂಸ್ಕೃತ ವಿಶ್ವವಿದ್ಯಾಲಯದ ಕಟ್ಟಡಕ್ಕೆ ನೀಡಿದ್ದಾರೆ ಎಂದು ಹೇಳಿದರು.

ಹಣ ಪಡೆದು ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ನೇಮಕ
ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ ಹೆಸರು ಬಳಸಿ ಕಳೆದ ಮೂರು ವರ್ಷಗಳಲ್ಲಿ ಸುಮಾರು ಮುನ್ನೂರು ಮಂದಿ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ಅಕ್ರಮವಾಗಿ ನೇಮಕ ಮಾಡಿಕೊಳ್ಳಲಾಗಿದೆ. ಸಚಿವರ ಹೆಸರಿನಲ್ಲಿ ನೇಮಕಾತಿಗಾಗಿ ಅಭ್ಯರ್ಥಿಗಳಿಂದ ಹಣ ಸಂಗ್ರಹಿಸಲಾಗಿದೆ ಎಂದು ಆರೋಪಿಸಿದರು.
ಸಹಕಾರ ಸಂಘಗಳ ನಿಯಮ 17ರ ಅಡಿಯಲ್ಲಿ ನೌಕರರ ನೇಮಕಾತಿಗೆ ಪೂರಕವಾಗಿ ನಡೆಸುವ ಪರೀಕ್ಷೆಯ ಮೇಲ್ವಿಚಾರಣೆಯನ್ನು ಪಡೆದುಕೊಂಡಿರುವ ಮುಕ್ತ ವಿಶ್ವವಿದ್ಯಾಲಯ ರಾಜ್ಯದ ಹಾಲು ಉತ್ಪಾದಕರ ಸಹಕಾರ ಸಂಘಗಳು, ರಾಜ್ಯ ಎಣ್ಣೆ ಬೀಜಕಾಳು ಸಹಕಾರ ಮಹಾಮಂಡಲ ಹಾಗೂ ಇನ್ನಿತರ ಸಹಕಾರಿ ಬ್ಯಾಂಕುಗಳು ಈ ವಿಶ್ವವಿದ್ಯಾಲಯದ ಮೂಲಕ ಪರೀಕ್ಷೆಗಳನ್ನು ನಡೆಸಿದ್ದು, ಎಲ್ಲಾ ಪರೀಕ್ಷಾ ವ್ಯವಸ್ಥೆಯಲ್ಲಿ ಆಕ್ರಮ ನಡೆದಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.

ಅಕ್ರಮವಾಗಿ ಹಣ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪ
ಬಮೂಲ್ ಸಂಸ್ಥೆಯ ವಿವಿಧ ಹುದ್ದೆಗಳ ನೇಮಕಾತಿಯ ಲಿಖಿತ ಪರೀಕ್ಷೆಯ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ಸಂಸದ ಡಿ.ಕೆ.ಸುರೇಶ್, ತನಿಖೆ ನಡೆಸುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದರು.
ವಿಶ್ವವಿದ್ಯಾಲಯದಲ್ಲಿ ಸಹಕಾರ ಸಂಸ್ಥೆಗಳ ಪರೀಕ್ಷೆ ನಡೆಸಲು ಲಕ್ಷಾಂತರ ರುಪಾಯಿ ಹಣ ಪಡೆಯಲಾಗಿದ್ದು, ನಿಯಮಗಳಿಗೆ ವಿರುದ್ಧವಾಗಿ ವಿಶ್ವವಿದ್ಯಾಲಯದ ಸಹಸಂಯೋಜಕರ ಹೆಸರಿನಲ್ಲಿ ಖಾತೆ ತೆಗೆದು ಈ ಹಣವನ್ನು ಬಳಸಲಾಗಿದೆ. ಲಕ್ಷಾಂತರ ರೂಪಾಯಿಗಳನ್ನು ನಗದು ರೂಪದಲ್ಲಿ ಈ ಖಾತೆಯಿಂದ ಪಡೆಯುವ ಮೂಲಕ ಹಣ ಅಕ್ರಮ ವರ್ಗಾವಣೆ ನಡೆಸಲಾಗಿದ್ದು, ಈ ಬಗ್ಗೆ ತಕ್ಷಣ ತನಿಖೆಯಾಗಬೇಕು ಎಂದು ಒತ್ತಾಯಿಸಿದೆ.

ಕುಲಪತಿ ಡಾ. ವಿದ್ಯಾಶಂಕರ್ ವಿರುದ್ಧ ಆರೋಪ
ಇನ್ನು ಬೆಂಗಳೂರಿನ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ನೌಕರರಾಗಿದ್ದ ಡಾ. ವಿದ್ಯಾಶಂಕರ್ರವರನ್ನು ಶಿಕ್ಷಣ ಸಚಿವರ ಪ್ರಭಾವದ ಕಾರಣಕ್ಕೆ ಮುಕ್ತ ವಿಶ್ವವಿದ್ಯಾಲಯದ ಕುಲಪತಿಗಳನ್ನಾಗಿ ನೇಮಿಸಲಾಗಿದೆ. ಇವರ ಮೇಲೆ ಅನೇಕ ಅಕ್ರಮದ ದೂರುಗಳು ಬಂದರೂ ಇವರನ್ನು ಒಂದು ವರ್ಷದ ಅವಧಿಗೆ ಸೇವಾವಧಿ ವಿಸ್ತರಣೆ ಮಾಡಲಾಗಿದೆ. ಇವರ ಮುಂದುವರಿಕೆಯ ಅಕ್ರಮದಲ್ಲಿ ಸಚಿವರು ಮತ್ತು ರಾಜ್ಯಪಾಲರ ಕಚೇರಿಯೂ ಭಾಗಿಯಾಗಿದೆ ಎಂದರು.
2022 ಫೆಬ್ರವರಿ 2ರಂದು ನವದೆಹಲಿಯ ಯುಜಿಸಿ ಸಂಸ್ಥೆಯು ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ಪತ್ರ ಬರೆದು ಈ ವಿಶ್ವವಿದ್ಯಾಲಯದ ಕುಲಪತಿಗಳ ಮೇಲೆ ಬಂದಿರುವ ಅಕ್ರಮಗಳ ಮೇಲೆ ಕ್ರಮ ಕೈಗೊಳ್ಳಲು ಸೂಚಿಸಿದೆ. ಅದೇ ರೀತಿ ಸಹಕಾರ ಸಂಸ್ಥೆಗಳ ಪರೀಕ್ಷಾ ಅಕ್ರಮಗಳ ಸಂಬಂಧ ತನಿಖೆ ಮಾಡಲು ಸಹಕಾರ ಸಚಿವರ ಸೂಚನೆಯ ಮೇರೆಗೆ ಸಹಕಾರ ಇಲಾಖೆಯು ನಿಬಂಧಕರಿಗೆ ಪತ್ರ ಬರೆದಿದೆ ಎಂದು ತಿಳಿಸಿದರು.
ಕುಲಪತಿಗಳ ಮೇಲೆ ಅಕ್ರಮದ ಆರೋಪಗಳಿದ್ದರೂ, ರಾಜ್ಯಪಾಲರು ಇವರ ಅವಧಿಯನ್ನು ಮತ್ತೊಂದು ವರ್ಷಕ್ಕೆ ವಿಸ್ತರಿಸಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ರಾಜ್ಯದ ವಿಶ್ವವಿದ್ಯಾಲಯಗಳ ಮತ್ತು ಉನ್ನತ ಶಿಕ್ಷಣ ಸಚಿವರ ಮಧ್ಯವರ್ತಿಯಾಗಿ ಕೆಲಸ ಮಾಡುತ್ತಿದ್ದಾರೆ. ಅಲ್ಲದೇ ಇದೇ ಸಂಪರ್ಕ ಮತ್ತು ಪ್ರಭಾವವನ್ನು ಬಳಸಿಕೊಂಡು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಕುಲಪತಿಗಳಾಗಲು ಪ್ರಯತ್ನಿಸುತ್ತಿದ್ದಾರೆ ಎಂದು ದೂರಿದ್ದಾರೆ.
ಈ ಹಿನ್ನೆಲೆಯಲ್ಲಿ ಆರೋಪಿತ ಕುಲಪತಿಗಳ ಮೇಲೆ ನ್ಯಾಯಾಂಗ ತನಿಖೆ ಒಳಪಡಿಸಿ, ವಿಶ್ವವಿದ್ಯಾಲಯ ಮತ್ತು ಇದರ ಹಣವನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications