ಬಿಜೆಪಿಯ ಶಕ್ತಿ ಬಗ್ಗೆ 'ಜನೋತ್ಸವ'ದಲ್ಲಿ ಉತ್ತರ ಸಿಗಲಿದೆ: ಸುಧಾಕರ್
ಬೆಂಗಳೂರು, ಜುಲೈ 26: ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಬಿಜೆಪಿಗೆ ಶಕ್ತಿ ಇಲ್ಲ ಎಂದು ಹೇಳುವ ಬೇರೆ ಪಕ್ಷದ ನಾಯಕರಿಗೆ, ಜುಲೈ 28 ರಂದು ನಡೆಯಲಿರುವ ಜನೋತ್ಸವ ಸಮಾವೇಶದಲ್ಲಿ ಉತ್ತರ ಸಿಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿರುಗೇಟು ನೀಡಿದ್ದಾರೆ.
ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಬಿಜೆಪಿಗೆ ಜನರ ಆಶೀರ್ವಾದವಿದೆ. ಜನರಿಗೋಸ್ಕರ ಕೆಲಸ ಮಾಡುತ್ತಿದೆ. ಆಡಳಿತಕ್ಕೆ ಬಂದು 3 ವರ್ಷವಾಗಿದೆ. ಕೋವಿಡ್ ಕಾರಣದಿಂದ ಕಳೆದ 2 ವರ್ಷಗಳಲ್ಲಿ ಯಾವುದೇ ಕಾರ್ಯಕ್ರಮ ನಡೆಸಲು ಸಾಧ್ಯವಾಗಿಲ್ಲ. ಈಗ ಬಸವರಾಜ ಬೊಮ್ಮಾಯಿಯವರು ಸಿಎಂ ಆಗಿ ಒಂದು ವರ್ಷ ಆಗಿದ್ದು, ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಂಡಿದ್ದೇವೆ," ಎಂದರು.
ಈ ಸಮಾರಂಭದಕ್ಕೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳ ನೆರವು ಪಡೆದ ಲಕ್ಷಾಂತರ ಫಲಾನುಭವಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಲಕ್ಷಾಂತರ ಕಾರ್ಯಕರ್ತರು ಪಕ್ಷ ಹಾಗೂ ಸರ್ಕಾರದ ಕಾರ್ಯ ವೈಖರಿಯನ್ನು ಮೆಚ್ಚಿ ಸಂದೇಶ ಕಳುಹಿಸಲಿದ್ದಾರೆ ಎಂದು ತಿಳಿಸಿದರು.

ಜಮೀರ್ ಹೇಳಿಕೆಯಿಂದ ಪಕ್ಷಕ್ಕೆ ನಷ್ಟ
ಯಾವುದೇ ಒಂದು ಸಮುದಾಯದಿಂದ ಒಬ್ಬರು ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ. ಸಮುದಾಯದ ಒಟ್ಟಾರೆ ಅಭಿಪ್ರಾಯ ಇರಬೇಕು. ಉಳಿದ ಸಮುದಾಯಗಳ ವಿಶ್ವಾಸ ಗಳಿಸಬೇಕು. ಜನರ ನಾಯಕತ್ವದ ಮೇಲೆ ನಂಬಿಕೆ ಇಟ್ಟವರು ಮಾತ್ರ ಮುಖ್ಯಮಂತ್ರಿಯಾಗಬಹುದು. ಯಾವುದೇ ಸಮುದಾಯಕ್ಕೆ ನೋವಾಗುವ ರೀತಿಯಲ್ಲಿ ಹೇಳಿಕೆ ನೀಡುವುದು ಪ್ರಜಾಪ್ರಭುತ್ವದಲ್ಲಿ ಸರಿಯಲ್ಲ. ಸಚಿವರಾಗಿ ಅನುಭವವಿರುವ ಶಾಸಕ ಜಮೀರ್ ಅಹ್ಮದ್ರಿಂದ ಒಕ್ಕಲಿಗರಿಗೆ ನೋವಾಗುವಂತಹ ಮಾತನ್ನು ನಿರೀಕ್ಷೆ ಮಾಡಿರಲಿಲ್ಲ. ರಾಜಕಾರಣಿಗಳು ಮಾತನಾಡುವ ಮುನ್ನ ಯೋಚನೆ ಮಾಡಿ ಮಾತನಾಡಬೇಕು ಎಂದರು.
ಒಕ್ಕಲಿಗ ಸಮುದಾಯ ಕೃಷಿಕರ ಸಮುದಾಯ. ಕೃಷಿಕರು ದೇಶದ ಬೆನ್ನೆಲುಬು. ಈ ಸಮುದಾಯ ಎಲ್ಲಾ ಸಮುದಾಯಗಳ ಜೊತೆ ಒಳ್ಳೆಯ ವಿಶ್ವಾಸ ಇಟ್ಟುಕೊಂಡಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ಒಳ್ಳೆಯ ವಾತಾವರಣ ನಿರ್ಮಾಣ ಮಾಡಿದೆ. ಕಾಯಕವನ್ನೇ ನಂಬಿರುವ ಸಮುದಾಯ ಒಕ್ಕಲಿಗ ಸಮುದಾಯ ಎಂದರೆ ತಪ್ಪಾಗಲಾರದು. ಜಮೀರ್ ಹೇಳಿಕೆಯಿಂದ ಅವರಿಗೆ ಹಾಗೂ ಅವರ ಪಕ್ಷಕ್ಕೆ ಹೆಚ್ಚು ನಷ್ಟವಾಗುತ್ತದೆ ತಿಳಿಸಿದರು.

ಬಾಯಿ ಬಡಿದುಕೊಂಡ ಕಾಂಗ್ರೆಸ್ ಮೌನವಾಗಿದೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆ ವೇಳೆ ಬಾಯಿ ಬಡಿದುಕೊಂಡರೂ ಪ್ರಯೋಜನ ಆಗಲಿಲ್ಲ. ಈಗ ಮೌನಕ್ಕೆ ಶರಣಾಗಿದ್ದಾರೆ. ಈ ಹಿಂದೆಯೂ ತನಿಖಾ ಸಂಸ್ಥೆಗಳು ಇದ್ದವು. 54 ವರ್ಷ ಆಡಳಿತ ಮಾಡಿದ್ದ ಕಾಂಗ್ರೆಸ್ ಅವಧಿಯಲ್ಲಿ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡಿಲ್ಲವೇ? ಅವರ ಆಡಳಿತದಲ್ಲೂ ಎಲ್ಲವೂ ಸರಿ ಇತ್ತು ಎನ್ನುವ ಕಾಂಗ್ರೆಸ್ ನಾಯಕರು ಈಗೇಕೆ ತನಿಖೆ ಸಂಸ್ಥೆಗಳ ಮೇಲೆ ಸಂದೇಹ ಪಡುತ್ತಿದ್ದಾರೆ ಎಂದು ಖಾರವಾಗಿ ಪ್ರಶ್ನಿಸಿದರು.

ಕಾಂಗ್ರೆಸ್ ಪಕ್ಷದ್ದು ದ್ವಿಮುಖ ನೀತಿ
ಈ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರು ಗುಜರಾತ್ ಮುಖ್ಯಮಂತ್ರಿ ಆಗಿದ್ದಾಗಲೇ ಕಡಿಮೆ ಎಂದರೂ ಸುಮಾರು ಎಂಟು-ಹತ್ತು ಗಂಟೆ ವಿಚಾರಣೆ ಎದುರಿಸಿದ್ದರು. ಅಮಿತ್ ಶಾ ಅವರನ್ನು ಗಡಿಪಾರು ಮಾಡಲಾಗಿತ್ತು. ಈಗ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರು ವಿಚಾರಣೆ ಕರೆದರೆ, ಸಮನ್ಸ ನೀಡಿದರೆ ಕಾಂಗ್ರೆಸ್ಗೆ ನೋವಾಗುತ್ತಿದೆ ಅಲ್ಲವೇ? ಕಾಂಗ್ರೆಸ್ನ ಇಂತಹ ದ್ವಿಮುಖ ನೀತಿಯನ್ನು ಜನರು ಒಪ್ಪಿಕೊಳ್ಳುವುದಿಲ್ಲ ಎಂದು ಕಿಡಿ ಕಾರಿದರು.

ಪ್ರಜಾಪ್ರಭುತ್ವ ನಂಬುವವರು ತನಿಖೆ ಸಹಕರಿಸಲಿ
ಕಾನೂನು ವ್ಯವಸ್ಥೆ, ಪ್ರಜಾಪ್ರಭುತ್ವದಲ್ಲಿ ನಂಬಿಕೆ ಇದ್ದವರು ಮಾತ್ರ ತನಿಖೆಗೆ ಆಗಲಿ ಅಥವಾ ವಿಚಾರಣೆಗೆ ಆಗಲಿ ಹೆದರುವುದಿಲ್ಲ. ನಂಬಿಕೆ ಇದ್ದವು ವಿಚಾರಣೆಗೆ, ತನಿಖೆಗೆ ಸಹಕರಿಸುತ್ತಾರೆ. ಒಂದು ವೇಳೆ ನ್ಯಾಯ ಸಿಕ್ಕಿಲ್ಲ ಎಂದಾದರೆ ದೇಶದಲ್ಲಿ ನ್ಯಾಯಾಲಯ ವ್ಯವಸ್ಥೆ ಇದೆ. ಅಲ್ಲಿ ಸಹ ಪ್ರಶ್ನಿಸಬಹುದು. ಅದನ್ನ ಬಿಟ್ಟು ತನಿಖೆ ಸಂಸ್ಥೆಗಳ ವಿರುದ್ಧ ಮಾತನಾಡುವುದು ಸರಿಯಲ್ಲ ಎಂದು ಸೊನಿಯಾ ಗಾಂಧಿ ವಿಚಾರಣೆಯಲ್ಲಿ ಕಾಂಗ್ರೆಸ್ ಪ್ರತಿಭಟನೆಯ ಬಗ್ಗೆ ಸಚಿವರು ಕಿಡಿಕಾರಿದರು.












Click it and Unblock the Notifications