ಪಕ್ಷದ ಗೌರವಕ್ಕೆ ಧಕ್ಕೆ ತರುವಂತಹ ಭಿನ್ನಾಭಿಪ್ರಾಯ ನನ್ನ ಡಿಕೆಶಿ ನಡುವೆ ಇಲ್ಲ: ಸಿದ್ದರಾಮಯ್ಯ
ಬೆಂಗಳೂರು, ನವೆಂಬರ್ 1: ಪಕ್ಷದ ಗೌರವಕ್ಕೆ ಧಕ್ಕೆ ತರುವಂತಹ ಭಿನ್ನಾಭಿಪ್ರಾಯ ನನ್ನ ಮತ್ತು ಡಿಕೆ ಶಿವಕುಮಾರ್ ನಡುವೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಶುಕ್ರವಾರ ಬೆಂಗಳೂರು ಪ್ರೆಸ್ಕ್ಲಬ್ನಲ್ಲಿ ನಡೆದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ಡಿಕೆ ಶಿವಕುಮಾರ್ ನನ್ನ ನಡುವೆ ಪಕ್ಷದ ಗೌರವಕ್ಕೆ ಕಳಂಕ ತರುವಂತಹ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ, ಎಲ್ಲರಿಗೂ ಸ್ವಾತಂತ್ರ್ಯವಿದೆ ಎಂದಿದ್ದಾರೆ.
ಬಿಜೆಪಿ ಸರ್ಕಾರದ ನೂರು ದಿನದ ಸಾಧನೆ ಶೂನ್ಯ: ಸಿದ್ದರಾಮಯ್ಯ
ಉಪ ಚುನಾವಣೆಯ 15 ಕ್ಷೇತ್ರಗಳ ಪೈಕಿ 12ರಲ್ಲಿ ನಮ್ಮದೇ ಗೆಲುವು. 15 ಕ್ಷೇತ್ರದಲ್ಲಿ ನಾವೇ ಗೆದ್ದರೂ ಆಶ್ಚರ್ಯವೇನಿಲ್ಲ. ಯಡಿಯೂರಪ್ಪನವರು ಆಶಾಭಾವನೆಯಿಂದ 13 ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ ಎಂದು ಹೇಳಿದ್ದಾರೆ.
ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಜನರು ಬಹುತೇಕ ಪಕ್ಷಾಂತರಿಗಳನ್ನು ಸೋಲಿಸಿದ್ದಾರೆ. ಹಾಗಾಗಿ ಕರ್ನಾಟಕದಲ್ಲಿ ಅದೇ ರೀತಿ ಆಗುವ ಸಾಧ್ಯತೆಗಳು ಹೆಚ್ಚಿದ್ದು, ಗೆಲುವು ನಮ್ಮದೇ ಎಂದರು.
ಉಪ ಚುನಾವಣೆ ಪ್ರಚಾರ ಈಗಾಗಲೇ ಅರಂಭಿಸಿದ್ದು, ಕಾರ್ಯಕರ್ತರ ಸಭೆಗಳನ್ನು ನಡೆಸಲಾಗುತ್ತಿದೆ. ಅನರ್ಹ ಶಾಸಕರ ಪ್ರಕರಣ ನ್ಯಾಯಾಲಯದಲ್ಲಿದ್ದು, ತೀರ್ಪು ಬಂದ ಬಳಿಕ ಪ್ರಚಾರದ ವೇಗವನ್ನು ಹೆಚ್ಚಿಸಲಾಗುವುದು.
ಹೈಕಮಾಂಡ್ ಈಗಾಗಲೇ ಉಪಚುನಾವಣೆಗೆ 8 ವಿಧಾನಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಉಪಚುನಾವಣೆ ಕ್ಷೇತ್ರಗಳ ಸಮೀಕ್ಷೆಗೆ ಕೆಲ ನಾಯಕರನ್ನು ಕಳುಹಿಸಲಾಗಿತ್ತು. ಸಮೀಕ್ಷೆಯ ವರದಿ ಬಂದ ನಂತರ ಎರಡು ಸಭೆಗಳನ್ನು ನಡೆಸಿ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ತಿಳಿಸಿದರು.