ಬೆಂಗಳೂರಲ್ಲಿ ಕೆಆರ್ ಮಾರುಕಟ್ಟೆಯಂತಹ ಮೂರು ಮಾರುಕಟ್ಟೆ ನಿರ್ಮಾಣ
ಬೆಂಗಳೂರು, ಅ.4: ಕೆ.ಆರ್. ಮಾರುಕಟ್ಟೆ ಮಾದರಿಯಲ್ಲೇ ಮೈಸೂರು ರಸ್ತೆ, ತುಮಕೂರು ರಸ್ತೆ ಮತ್ತು ಹೊಸೂರು ರಸ್ತೆಯ ಭಾಗದಲ್ಲಿ ಬೃಹತ್ ಮಾರುಕಟ್ಟೆ ನಿರ್ಮಾಣ ಸಂಬಂಧ ಕ್ರಮ ಕೈಗೊಳ್ಳಲಾಗುವುದು ಎಂದು ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹೇಳಿದರು.
ಕೆ.ಆರ್. ಮಾರುಕಟ್ಟೆ ವಿವಿಧ ಭಾಗಗಳಿಗೆ ಭೇಟಿ ನೀಡಿದ ಅವರು ಅಲ್ಲಿನ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕೆ.ಆರ್. ಮಾರುಕಟ್ಟೆಯಲ್ಲಿ ಬಹಳಷ್ಟು ವ್ಯಾಪಾರಸ್ಥರು ಬಾಡಿಗೆ ನೀಡದೇ ನಡೆಸುತ್ತಿದ್ದಾರೆ.
ಬಿಕೋ ಎನ್ನುತ್ತಿರುವ ಮಂಗಳೂರು ಮಾರ್ಕೆಟ್, ಸಮಯಕ್ಕೆ ಬಾರದ ತರಕಾರಿಗಳು
ವ್ಯಾಪಾರಸ್ಥರಿಗಾಗಿಯೇ ನಿರ್ಮಿಸಿರುವ ಕಟ್ಟಡವನ್ನು ಬಳಕೆ ಮಾಡಿಕೊಳ್ಳದೇ ಬೀಗ ಹಾಕಿದ್ದಾರೆ. ವ್ಯಾಪಾರಸ್ಥರೇ ಹೋಗುವುದಿಲ್ಲ ಎಂಬ ದೂರು ಇದೆ. ಆ ಜಾಗವನ್ನು ಪಾರ್ಕಿಂಗ್ ಅಥವಾ ಇತರೆ ಕೆಲಸಗಳಿಗೆ ಉಪಯೋಗಿಸಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಮಾರುಕಟ್ಟೆ ಸಂಪೂರ್ಣ ಅವ್ಯವಸ್ಥೆಯಿಂದ ಕೂಡಿದೆ. ಯಾವುದೂ ಸೂಕ್ತ ರೀತಿಯಲ್ಲಿ ಇಲ್ಲ. ಇಲ್ಲಿನ ಅಧಿಕಾರಿಗಳು ಹೆಚ್ಚು ನಿರ್ಲಕ್ಷ್ಯದಿಂದ ಇರುವುದು ಗಮನಕ್ಕೆ ಬಂದಿದೆ. ನಾನೇ ಖುದ್ದು ಪ್ರತಿಯೊಂದನ್ನು ವೀಕ್ಷಿಸಿದ್ದೇನೆ. ಅಧಿಕಾರಿಗಳ ನಿರ್ಲಕ್ಷ್ಯ ಇಲ್ಲಿ ಎದ್ದು ಕಾಣುತ್ತಿದೆ.
ಝೀರೋ ಟ್ರಾಫಿಕ್, ಪರಮೇಶ್ವರ ಬೆನ್ನಿಗೆ ನಿಂತ ರಾಜ್ಯ ಸರ್ಕಾರ
ಕೆ.ಆರ್. ಮಾರುಕಟ್ಟೆಗೆ ಲಕ್ಷಾಂತರ ಜನ ಬರುವುದರಿಂದ ಸದಾ ಗಿಜುಗುಡುತ್ತಿದೆ. ಜನರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ನಗರದ ವಿವಿಧ ಭಾಗಗಳಲ್ಲಿ ಕೆ.ಆರ್. ಮಾರುಕಟ್ಟೆ ಮಾದರಿಯಲ್ಲೇ ಮಾರುಕಟ್ಟೆ ತೆರೆಯುವ ಸಂಬಂಧ ಅಧಿಕಾರಿಗಳೊಂದಿಗೆ ಚರ್ಚಿಸಿ, ಕೌನ್ಸಿಲಿಂಗ್ ಮೂಲಕ ಒಪ್ಪಿಗೆ ಪಡೆದು, ಬಜೆಟ್ ನಲ್ಲಿ ಅನುದಾನ ಮೀಸಲಿಡಲಾಗುವುದು ಎಂದರು.
ಶೀಘ್ರ ಕೆಆರ್ ಮಾರುಕಟ್ಟೆ ಕಾಯಕಲ್ಪ
ಕೆ.ಆರ್. ಮಾರುಕಟ್ಟೆಯನ್ನು ಕಾಯಕಲ್ಪ ಮಾಡಲಾಗುವುದು. ಜೊತೆಗೆ ಇಲ್ಲಿ ಬಾಡಿಗೆ ನೀಡದೇ ವ್ಯಾಪಾರ ಮಾಡುವವರು ಬಗ್ಗೆ ಹಾಗೂ ಈ ಭಾಗದ ಬಿಬಿಎಂಪಿ ಪ್ರಾಪರ್ಟಿ ಬಗ್ಗೆ 15 ದಿನದೊಳಗೆ ಸಂಪೂರ್ಣ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಈ ವೇಳೆ ಮೇಯರ್ ಗಂಗಾಂಭಿಕೆ, ಉಪಮೇಯರ್ ರಮೀಳ ಉಮಾಶಂಕರ್, ನಗರ ಪೊಲೀಸ್ ಆಯುಕ್ತ ಸುನೀಲಗ ಕುಮಾರ್ ಉಪಸ್ಥಿತರಿದ್ದರು.
ಅಧಿಕಾರಿಗಳ ಅಮಾನತು
ಮಾರುಕಟ್ಟೆಯೊಳಗೆ ನಿರ್ಮಿಸಿದ್ದ ಸಾಲು ಅಂಗಡಿಗಳು ಯಾವ ಇಲಾಖೆ ವ್ಯಾಪ್ತಿಗೆ ಸೇರಲಿದೆ ಎಂದು ಪರಮೇಶ್ವರ್ ಅವರು ಮಾರುಕಟ್ಟೆ ಡಿಸಿ ಮುನಿಲಕ್ಷ್ಮಿ ಅವರ ಬಳಿ ಮಾಹಿತಿ ಕೇಳಿದರು.ಆದರೆ ಈ ಬಗ್ಗೆ ಅವರಿಗೇ ಮಾಹಿತಿ ಇಲ್ಲದೇ ಇರುವುದಕ್ಕೆ ಆಕ್ರೋಶಗೊಂಡರು. ಏನು ಕೆಲಸ ಮಾಡುತ್ತೀದೀರ? ನಿಮ್ಮ ಇಲಾಖೆ ಜಾಗ ಯಾವುದು ಎಂಬುದೇ ಗೊತ್ತಿಲ್ಲವೆಂದರೆ ಯಾಕೆ ಈ ಸ್ಥಾನದಲ್ಲಿ ಇರಬೇಕು? ಎಂದು ಚಾಟಿ ಬೀಸಿದರು. ಜತೆಗೆ ಈ ಅಧಿಕಾರಿಯನ್ನು ಅಮಾನತುಗೊಳಿಸಿರುವುದಾಗಿ ಮಾಧ್ಯಮಕ್ಕೆ ಹೇಳಿದರು.
ಕೆರೆಗಳ ಅಭಿವೃದ್ಧಿಗೆ ಕಾರ್ಪೊರೇಟ್ ಕಂಪನಿಗಳ ನೆರವು ಕೋರಿದ ಡಿಸಿಎಂ
ಮೀಟರ್ ಬಡ್ಡಿಗೆ ಕಡಿವಾಣ
ಮಾರುಕಟ್ಟೆಯಲ್ಲಿ ಮೀಟರ್ ಬಡ್ಡಿ ದಂದೆ ನಡೆಯುತ್ತಿರುವ ಬಗ್ಗೆ ನನಗೂ ಮಾಹಿತಿ ಇದೆ. ಹೀಗಾಗಿ ಈ ದಂಧೆಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ ಎಂದರು.
ಮಾರುಕಟ್ಟೆಯಲ್ಲಿ ತ್ಯಾಜ್ಯ ಸಂಸ್ಕರಣ ಕೇಂದ್ರ
ಮಾರುಕಟ್ಟೆಯಲ್ಲಿಯೇ ಸ್ಯಾಗ್ರಿಗೇಷನ್ ಕೇಂದ್ರ ಇದ್ದರೂ ಅಲ್ಲಿ ಕಸ ಸಂಸ್ಕರಣೆ ಮಾಡದೇ ಇರುವುದಕ್ಕೆ ಸಂಬಂಧಪಟ್ಟ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು.
ಯಾವ ಕಾರಣಕ್ಕಾಗಿ ಈ ಕೇಂದ್ರ ಮುಚ್ಚಲಾಗಿದೆ ಎಂದು ಅಧಿಕಾರಿಗಳ ಮಾಹಿತಿ ಕೇಳಿದರೆ, ಅದಕ್ಕೆ ಉತ್ತರ ನೀಡದೇ ತಡಬಡಾಯಿಸಿದರು. ಇದರಿಂದ ಕೋಪಗೊಂಡ ಅವರು ಒಂದು ವಾರದೊಳಗೆ ಯಾಕೆ ಈಕೇಂದ್ರ ನಿಷ್ಕ್ರಿಯೆಗೊಂಡಿದೆ ಎಂದು ಮಾಹಿತಿ ನೀಡದಿದ್ದರೆ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.
ಹಸಿ ಕಸ ನಿರ್ವಹಣೆ ಉತ್ತೇಜನಕ್ಕೆ ತೆರಿಗೆ ವಿನಾಯ್ತಿಗಾಗಿ ಅಭಿಯಾನ
ಕೆಆರ್ ಮಾರುಕಟ್ಟೆಯಲ್ಲಿ ನಿಲ್ಲಿಸಿದ್ದ ವಾಹನಗಳ ಹರಾಜು
ಮಾರುಕಟ್ಟೆಯೊಳಗೆ ನೆಲಮಹಡಿಯಲ್ಲಿರುವ ಪಾರ್ಕಿಂಗ್ ಕೇಂದ್ರದಲ್ಲಿ ಸಾಕಷ್ಟು ಹಳೇ ವಾಹನಗಳು ಇರುವುದನ್ನು ಗಮನಿಸಿದರು. ಮಾಲೀಕರಿಲ್ಲದ ವಾಹನಗಳನ್ನು ಪೊಲೀಸರ ನೆರವಿನೊಂದಿಗೆ ಹರಾಜು ಹಾಕುವಂತೆ ಸೂಚಿಸಿದರು.
ಮೀನು ಮಾರುಕಟ್ಟೆಗೆ ತೆರಳಿದ ಪರಮೇಶ್ವರ್ ಅವರು, ಅಲ್ಲಿನ ಅವ್ಯವಸ್ಥೆ ಹಾಗೂ ದುರ್ವಾಸನೆಗೆ ಅಧಿಕಾರಿಗಳ ವಿರುದ್ಧ ಕಿಡಿಕಾರಿದರು. ಈ ಭಾಗದಲ್ಲಿ ಇಷ್ಟೊಂದು ದುರ್ನಾಥ ಇದ್ದರೂ ಬಿಬಿಎಂಪಿ ಕಸ ವಿಲೇವಾರಿ ಮಾಡದೇ ಇರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ, ಕೂಡಲೇ ಕಸವನ್ನು ತೆರವುಗೊಳಿಸುವಂತೆ ಸೂಚಿಸಿದರು.