ಶುಕ್ರವಾರ ಮಾಣಿಕ್ ಷಾ ಪರೇಡ್ ಮೈದಾನಕ್ಕೆ ಬನ್ನಿ
ಬೆಂಗಳೂರು, ಆ.13 : ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಶಾಂತಿಯತವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಹೇಳಿದ್ದಾರೆ. 1450 ಕ್ಕೂ ಹೆಚ್ಚು ಪೊಲೀಸರು ಕವಾಯತಿನಲ್ಲಿ ಭಾಗವಹಿಸಲಿದ್ದಾರೆ ಎಂದು ಆಯುಕ್ತರು ತಿಳಿಸಿದರು.
ಬುಧವಾರ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಬಿಬಿಎಂಪಿ ಆಯುಕ್ತ ಎಂ.ಲಕ್ಷ್ಮೀನಾರಾಯಣ ಮತ್ತು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ, 68ನೇ ಸ್ವಾತಂತ್ರ್ಯ ದಿನಾಚರಣೆಗೆ ಮಾಡಿಕೊಂಡಿರುವ ಸಿದ್ಧತೆಗಳ ಕುರಿತು ಮಾಹಿತಿ ನೀಡಿದರು.

ಆ.15ರ ಶುಕ್ರವಾರ ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಮಾಡಲಿದ್ದಾರೆ ಎಂದು ಬಿಬಿಎಂಪಿ ಆಯುಕ್ತ ಲಕ್ಷ್ಮೀನಾರಾಯಣ ಅವರು ತಿಳಿಸಿದರು. ಧ್ವಜಾರೋಹಣದ ನಂತರ ರಕ್ಷಣಾ ಪಡೆಗಳಿಂದ ಮುಖ್ಯಮಂತ್ರಿಗಳು ಗೌರವವಂದನೆ ಸ್ವೀಕರಿಸಲಿದ್ದಾರೆ ಎಂದು ಅವರು ಹೇಳಿದರು. [ಮೋದಿ ಭಾಷಣ ಕೇಳಲು ಜನ ಸಾಮಾನ್ಯರಿಗೆ ಎಂಟ್ರಿ]
ಆ.15ರಂದು ಬೆಳಗ್ಗೆ 8.45ಕ್ಕೆ ಮುಖ್ಯಮಂತ್ರಿಗಳು ಮೈದಾನಕ್ಕೆ ಆಗಮಿಸಲಿದ್ದು, ವಾಯುದಳ, ನೌಕಾದಳ, ಸೇನಾದಳದ ಮೂವರು ಹಿರಿಯ ಅಧಿಕಾರಿಗಳು ಮುಖ್ಯಮಂತ್ರಿಯವರನ್ನು ಸ್ವಾಗತಿಸಲಿದ್ದಾರೆ ಎಂದು ಲಕ್ಷ್ಮೀನಾರಾಯಣ ತಿಳಿಸಿದರು. ಧ್ವಜಾರೋಹಣ ನೆರವೇರಿಸುವ ಸಂದರ್ಭದಲ್ಲಿ ಹೆಲಿಕಾಪ್ಟರ್ ನಿಂದ ಪುಷ್ಪವೃಷ್ಟಿ ಮಾಡಲಾಗುವುದು. ನಂತರ ಮುಖ್ಯಮಂತ್ರಿಯವರು ರಾಜ್ಯದ ಜನತೆಯನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ತಿಳಿಸಿದರು.
58 ದಳಗಳ ಎರಡು ಸಾವಿರ ಮಂದಿ ಕವಾಯತಿನಲ್ಲಿ ಭಾಗವಹಿಸಲಿದ್ದಾರೆ. 2400 ಮಕ್ಕಳು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಕರ್ಷಕ ನೃತ್ಯ ಪ್ರದರ್ಶಿಸಲಿದ್ದಾರೆ. ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಹಾಗೂ ಅವರ ತಂಡ ನಾಡಗೀತೆ ಸೇರಿದಂತೆ ವಿವಿಧ ಗೀತೆಗಳನ್ನು ಹಾಡಲಿದ್ದಾರೆ ಎಂದರು. [ಮಾಣಿಕ್ ಷಾ ಯಾರು?]
11 ಸಾವಿರ ಆಸನಗಳು : ಸ್ವಾತಂತ್ರ್ಯ ದಿನಾಚರಣೆ ನೋಡಲು ಆಗಮಿಸುವವರಿಗಾಗಿ 11 ಸಾವಿರ ಆಸನಗಳ ವ್ಯವಸ್ಥೆ ಮಾಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆ ಮತ್ತು ವೈದ್ಯರ ತಂಡವನ್ನು ಸಜ್ಜುಗೊಳಿಸಲಾಗಿದೆ ಎಂದು ಲಕ್ಷ್ಮಿನಾರಾಯಣ ತಿಳಿಸಿದರು. ಪರೇಡ್ ಮೈದಾನದ ಸುತ್ತಮುತ್ತ 15 ಆಸ್ಪತ್ರೆಗಳನ್ನು ಗುರುತಿಸಲಾಗಿದ್ದು, ತಲಾ ನೂರು ಹಾಸಿಗೆಗಳನ್ನು ಕಾಯ್ದಿರಿಸಲಾಗಿದೆ.
22 ಆಂಬ್ಯುಲೆನ್ಸ್, 30 ವೈದ್ಯರೂ ಸೇರಿದಂತೆ 140 ನರ್ಸ್ ಸೇರಿದಂತೆ 250 ಮಂದಿ ವೈದ್ಯಕೀಯ ಸಿಬ್ಬಂದಿ ತುರ್ತು ಸಂದರ್ಭದಲ್ಲಿ ಕಾರ್ಯನಿರ್ವಹಿಸಲು ಸಜ್ಜಾಗಿದ್ದಾರೆ. ಮೈದಾನದ ಸುತ್ತ ಮೂರು ಅಗ್ನಿಶಾಮಕ ದಳಗಳದ ವಾಹನಗಳನ್ನು ನಿಯೋಜಿಸಲಾಗಿದೆ ಎಂದು ವಿವರಣೆ ನೀಡಿದರು.
ಅಗತ್ಯ ಬಂದೋಬಸ್ತ್ : ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲಯಲ್ಲಿ ನಗರದಲ್ಲಿ ಅಗತ್ಯ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಎಂ.ಎನ್.ರೆಡ್ಡಿ ಹೇಳಿದರು. ಮಾಣಿಕ್ ಷಾ ಪರೇಡ್ ಮೈದಾನದ ಸುತ್ತಮುತ್ತ ಸಿಸಿಟಿವಿಗಳನ್ನು ಆಳವಡಿಸಲಾಗಿದ್ದು, ಕವಾಯತು ವೀಕ್ಷಿಸಲು ಆಗಮಿಸುವ ಜನರು ಚಾಕು, ಮಾರಕಾಸ್ತ್ರ, ಕಪ್ಪು ಕರವಸ್ತ್ರ, ಕಪ್ಪು ಬಟ್ಟೆ, ವಿಡಿಯೋ, ಕ್ಯಾಮೆರಾ, ಸ್ಫೋಟಕ ವಸ್ತುಗಳು, ಬಣ್ಣದ ದ್ರಾವಣಗಳು, ರಾಸಾಯನಿಕ ವಸ್ತುಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದರು.












Click it and Unblock the Notifications