BJP Candidates: ಬಿಜೆಪಿ ಅಭ್ಯರ್ಥಿಗಳ ಬಗ್ಗೆ ಇಂದು ಸ್ಪಷ್ಟ ಚಿತ್ರಣ ಸಿಗಲಿದೆ: ಬಿಎಸ್ ಯಡಿಯೂರಪ್ಪ
ಬೆಂಗಳೂರು, ಮಾರ್ಚ್ 10: ಆಡಳಿತರೂಢ ಕಾಂಗ್ರೆಸ್ ರಾಜ್ಯದಲ್ಲಿ ಈಗಾಗಲೇ ಹಲವು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ. ಆದರೆ, ಬಿಜೆಪಿ ಒಬ್ಬ ಅಭ್ಯರ್ಥಿಯನ್ನು ಘೋಷಣೆ ಮಾಡಿಲ್ಲ. ಇದೆ ವೇಳೆ ಕರ್ನಾಟಕದಲ್ಲಿ ಬಿಜೆಪಿ ಚುನಾವಣಾ ಸಮಿತಿ ಸಭೆಯ ನಂತರ ಪಕ್ಷದ ಅಭ್ಯರ್ಥಿಗಳ ಬಗ್ಗೆ ಭಾನುವಾರ ಸ್ಪಷ್ಟ ಚಿತ್ರಣ ಹೊರಬೀಳಲಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಕಾಂಗ್ರೆಸ್ ಶುಕ್ರವಾರ ರಾಜ್ಯದ ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರುಗಳನ್ನು ಘೋಷೀಸಿದೆ. ರಾಜ್ಯದಲ್ಲಿ ಬಿಜೆಪಿ ಇನ್ನೂ ತನ್ನ ಅಭ್ಯರ್ಥಿಗಳನ್ನು ಘೋಷಿಸಿಲ್ಲ. ಸೋಮವಾರ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಪ್ರಕಟಿಸುವ ಸಾಧ್ಯತೆಯಿದ್ದು, ಈ ಬಗ್ಗೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.

"ನಾಳೆ ನಾನು ದೆಹಲಿಗೆ ಹೋಗುತ್ತಿದ್ದೇನೆ. ನಾಳೆ ಸಂಜೆ ಚುನಾವಣಾ ಸಮಿತಿ ಸಭೆ ಇದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಅದರಲ್ಲಿ ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರೊಂದಿಗೆ ಒಂದು ಸುತ್ತಿನ ಮಾತುಕತೆ ನಡೆದಿದೆ. ನಾಳೆ ನಾವು ಸ್ಪಷ್ಟ ಚಿತ್ರಣ ಸಿಗುತ್ತದೆ" ಎಂದು ಯಡಿಯೂರಪ್ಪ ಶನಿವಾರ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಬಿಜೆಪಿ ನೇತೃತ್ವದ ಎನ್ಡಿಎಗೆ ಸೇರ್ಪಡೆಗೊಂಡ ಜೆಡಿಎಸ್ನೊಂದಿಗಿನ ಸೀಟು ಹಂಚಿಕೆ ಒಪ್ಪಂದದ ಕುರಿತು, ಬಿಜೆಪಿಯ ವರಿಷ್ಠರು ಜೆಡಿಎಸ್ಗೆ ಯಾವ ಸ್ಥಾನಗಳನ್ನು ನೀಡಲಾಗುವುದು ಎಂಬುದರ ಕುರಿತು ಯಾವುದೇ ಸ್ಪಷ್ಟತೆ ಇಲ್ಲ ಎಂದು ಹೇಳಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಜೆಡಿಎಸ್ 2023ರ ಸೆಪ್ಟೆಂಬರ್ನಲ್ಲಿ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿದೆ.
"ಜೆಡಿಎಸ್ಗೆ ಯಾವ ಸ್ಥಾನಗಳನ್ನು ನೀಡಲಾಗುತ್ತದೆ ಎಂಬ ಬಗ್ಗೆ ದೆಹಲಿಗೆ ಹೋದ ನಂತರ ಮಾತ್ರ ನಮಗೆ ಈ ಬಗ್ಗೆ ಮಾಹಿತಿ ಸಿಗಲಿದೆ. ರಾಜ್ಯದಲ್ಲಿ ಬಿಜೆಪಿಗೆ ಅನುಕೂಲಕರ ವಾತಾವರಣವಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ 24 ರಿಂದ 25 ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ, ಆ ನಿಟ್ಟಿನಲ್ಲಿ ನಾವು ಪ್ರಯತ್ನ ನಡೆಸುತ್ತಿದ್ದೇವೆ" ಎಂದು ಗೆಲುವಿನ ವಿಶ್ವಾಸ ವ್ಯಕ್ತಡಿಸಿದ್ದಾರೆ.

ಗೆಲುವು ಮತ್ತು ಪಕ್ಷ ನಿಷ್ಠೆಯೇ ಟಿಕೆಟ್ ಪಡೆಯಲು ಮಾನದಂಡ
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ, ಗೆಲುವು ಮತ್ತು ಪಕ್ಷ ನಿಷ್ಠೆಯೇ ಟಿಕೆಟ್ ಪಡೆಯಲು ಮಾನದಂಡ ಎಂದು ಹೇಳಿದ್ದಾರೆ. ಇನ್ನು, 50 ರಷ್ಟು ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸಲಾಗುತ್ತದೆ ಎಂಬ ಸುದ್ದಿಯ ಬಗ್ಗೆ ಕೇಳಿದಾಗ, ಅದು ಊಹಾಪೋಹ ಎಂದು ಸುದ್ದಿ ನಿರಾಕರಿಸಿದ್ದಾರೆ.
"50 ಅಥವಾ 60 ಪ್ರತಿಶತದಷ್ಟು ಹಾಲಿ ಸದಸ್ಯರಿಗೆ ಟಿಕೆಟ್ ನಿರಾಕರಿಸುವುದು ಮಾನದಂಡವಲ್ಲ, ಗೆಲುವು ಮತ್ತು ಪಕ್ಷಕ್ಕೆ ನಿಷ್ಠೆ ಮಾತ್ರ ಮಾನದಂಡಗಳು" ಎಂದು ತಿಳಿಸಿದ್ದಾರೆ. ಇದೇ ವೇಳೆ, ಬೆಂಗಳೂರು ಉತ್ತರ ಕ್ಷೇತ್ರದಿಂದ ನಾನೂ ಕೂಡ ಟಿಕೆಟ್ ಆಕಾಂಕ್ಷಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರದ ಮಾಜಿ ಸಚಿವ ಡಿವಿ ಸದಾನಂದಗೌಡ ಶನಿವಾರ ಹೇಳಿದ್ದಾರೆ.
ಮುಂಬರುವ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ಘೋಷಿಸಿದ್ದ ಗೌಡರು ಡಿವಿ ಸದಾನಂದಗೌಡ ದಿಢೀರ್ ಮನಸ್ಸು ಬದಲಾಯಿಸಿದ್ದಾರೆ. ಬೆಂಗಳೂರು ಉತ್ತರ ಕ್ಷೇತ್ರದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಆಸೆ ಈಡೇರಿಸಲು ಚುನಾವಣೆ ಎದುರಿಸುವುದಾಗಿ ಹೇಳಿದ್ದಾರೆ. ಇದು ಕೂಡ ಬಿಜೆಪಿ ನಾಯಕರಿಗೆ ನುಂಗಲಾಗದ ಬಿಸಿ ತುಪ್ಪವಾಗಿ ಕಾಡಲಾರಂಭಿಸಿದೆ. ಹೀಗಾಗಿ ಈ ಎಲ್ಲಾ ಸಮಸ್ಯೆಗಳಿಗೆ ಇಂದು ಸರಿಯಾಗಿ ಉತ್ತರ ಸಿಗಲಿದೆ.












Click it and Unblock the Notifications