ಬೆಂಗಳೂರು : ಟೋಲ್ ದರ 20 ರೂ ಕಡಿಮೆ ಆಗುತ್ತಾ?
ಬೆಂಗಳೂರು, ಮೇ 12 : ಕೆಂಪೇಗೌಡ ವಿಮಾನ ನಿಲ್ದಾಣಕ್ಕೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 7ರ ಟೋಲ್ ಸಮಸ್ಯೆ ಕುರಿತು ಚರ್ಚಿಸಲು ಸೋಮವಾರ ನಡೆಸಿದ ಸಭೆ ವಿಫಲವಾಗಿದೆ. ಆದ್ದರಿಂದ ಟೋಲ್ ದರ ಕಡಿಮೆ ಮಾಡುವ ಕುರಿತು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಗುವುದು ಎಂದು ಲೋಕೋಪಯೋಗಿ ಸಚಿವ ಎಚ್.ಸಿ.ಮಹದೇವಪ್ಪ ಹೇಳಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 7ರಲ್ಲಿ ಟೋಲ್ ದರ ಹೆಚ್ಚಳಕ್ಕೆ ವಾಹನ ಸವಾರರು ಮತ್ತು ಜನರು ವಿರೋಧ ವ್ಯಕ್ತಪಡಿಸುತ್ತಿರುವ ಹಿನ್ನಲೆಯಲ್ಲಿ ಸೋಮವಾರ ವಿಧಾನಸೌಧದಲ್ಲಿ ಸಚಿವ ಎಚ್.ಸಿ.ಮಹದೇವಪ್ಪ ಸಭೆ ಕರೆದಿದ್ದರು. ಸಭೆಯಲ್ಲಿ ಟೋಲ್ ದರದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಿಲ್ಲ. [ಟೋಲ್ ವಿವಾದಕ್ಕೆ ತಾತ್ಕಾಲಿಕ ಪರಿಹಾರ]

ಟೋಲ್ ಶುಲ್ಕ ಸಂಗ್ರಹಿಸುತ್ತಿರುವ ನವಯುಗ ಕಂಪನಿ ಅಧಿಕಾರಿಗಳು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಲೋಕೋಪಯೋಗಿ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸುವ ಕುರಿತು ತೀರ್ಮಾನ ಕೈಗೊಳ್ಳಲಾಯಿತು. [ಟೋಲ್ ದರ ಹೆಚ್ಚಳಕ್ಕೆ ಭಾರೀ ವಿರೋಧ]
ಸಭೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವ ಎಚ್.ಸಿ.ಮಹದೇವಪ್ಪ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಟೋಲ್ ದರವನ್ನು 20 ರೂ. ಕಡಿತಗೊಳಿಸುವ ಸಾಧ್ಯತೆ ಇದೆ. ದರ ಕಡಿಮೆ ಮಾಡುವ ಕುರಿತು ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದರು. [ಸದ್ಯ ಟೋಲ್ ದರ ಎಷ್ಟಿದೆ?]
ಟೋಲ್ ದರ ನಿಗದಿ ಮಾಡುವ ಹೊಣೆಗಾರಿಕೆಯನ್ನು ಕೇಂದ್ರ ಸರ್ಕಾರದ ಹೆಗಲಿಗೆ ವಹಿಸಲಾಗಿದೆ. ರಾಷ್ಟ್ರೀಯ ಟೋಲ್ ನೀತಿಯ ಪ್ರಕಾರ ಟೋಲ್ ದರ ನಿಗದಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಿದೆ. ಈ ಕುರಿತು ಶೀಘ್ರದಲ್ಲೇ ಕೇಂದ್ರ ಸರ್ಕಾರ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಿಳಿಸಿದರು.
ಟೋಲ್ ಗೇಟ್ ಸುತ್ತಮುತ್ತಲಿನ ಗ್ರಾಮದ ಜನರಿಗೆ ಸಹಕಾರಿಯಾಗುವಂತೆ ಸರ್ವೀಸ್ ರಸ್ತೆ ನಿರ್ಮಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸೂಚಿಸಲಾಗಿದೆ. ಕೇಂದ್ರ ಸಚಿವ ಆಸ್ಕರ್ ಫರ್ನಾಂಡೀಸ್ ಪ್ರಾಧಿಕಾರದ ಜೊತೆ ನಡೆಸುವ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಿದ್ದಾರೆ ಎಂದು ಮಹದೇವಪ್ಪ ಹೇಳಿದರು.












Click it and Unblock the Notifications