ರೋಗದ ಲಕ್ಷಣ ಇಲ್ಲದಿದ್ದರೂ ಪಾಸಿಟಿವ್: ಬೆಚ್ಚಿಬಿದ್ದ ಹೊಂಗಸಂದ್ರ ಜನತೆ!
ಬೆಂಗಳೂರು, ಏಪ್ರಿಲ್ 25: ಹೊಂಗಸಂದ್ರದಲ್ಲಿ ಬಿಹಾರ ಮೂಲದ ವ್ಯಕ್ತಿಯ ಜೊತೆಗೆ ಸಂಪರ್ಕದಲ್ಲಿದ್ದ ಒಟ್ಟು 21 ಜನರಿಗೆ ಕೊರೊನಾ ವೈರಸ್ ಸೋಂಕು ತಗಲಿರುವುದು ದೃಢಪಟ್ಟಿದೆ. ಆ ಮೂಲಕ ಹೊಂಗಸಂದ್ರದ ವಿದ್ಯಾಜ್ಯೋತಿ ನಗರದಲ್ಲಿ ಸೋಂಕಿತರ ಸಂಖ್ಯೆ 22ಕ್ಕೆ ಏರಿದೆ.
ನಿನ್ನೆ ಒಂದೇ ದಿನ ಹೊಂಗಸಂದ್ರದಲ್ಲಿ 11 ಕೋವಿಡ್-19 ಪಾಸಿಟಿವ್ ಕೇಸ್ ಪತ್ತೆಯಾಗಿತ್ತು. ಹೀಗಾಗಿ, ಹೊಂಗಸಂದ್ರದ ಜನತೆ ಅಕ್ಷರಶಃ ಬೆಚ್ಚಿಬಿದ್ದಿದ್ದಾರೆ.
ಆತಂಕ ಪಡುವ ಅಂಶ ಏನಂದ್ರೆ, ಕೋವಿಡ್-19 ಪಾಸಿಟಿವ್ ಕಂಡುಬಂದಿರುವ 21 ಮಂದಿಯಲ್ಲಿ ರೋಗದ ಯಾವುದೇ ಲಕ್ಷಣಗಳು ಇರಲಿಲ್ಲ. ಕೆಮ್ಮು, ನೆಗಡಿ, ಜ್ವರ, ಉಸಿರಾಟದ ತೊಂದರೆ.. ಇವು ಯಾವುದೂ ಇಲ್ಲದೇ ಇದ್ದರೂ 21 ಜನರಲ್ಲಿ ಕೋವಿಡ್-19 ಪಾಸಿಟಿವ್ ಕಂಡು ಬಂದಿದೆ.

ಎಲ್ಲರ ರಕ್ತ ಮತ್ತು ಗಂಟಲು ದ್ರವ ಪರೀಕ್ಷಿಸಿದಾಗ ಸೋಂಕು ತಗುಲಿರುವುದು ದೃಢಪಟ್ಟಿದೆ. ಹೀಗಾಗಿ ಹೊಂಗಸಂದ್ರದ ವಿದ್ಯಾಜ್ಯೋತಿ ನಗರವನ್ನು ಸಂಪೂರ್ಣವಾಗಿ ಸೀಲ್ ಡೌನ್ ಮಾಡಲಾಗಿದೆ. 100 ಮೀಟರ್ ವ್ಯಾಪ್ತಿಯನ್ನು ಕಂಟೇನ್ಮೆಂಟ್ ಝೋನ್ ಎಂದು ಗುರುತಿಸಲಾಗಿದ್ದು, ಹೈ ಅಲರ್ಟ್ ಘೋಷಿಸಲಾಗಿದೆ.
ಅಂದ್ಹಾಗೆ, ರಾಜ್ಯದಲ್ಲಿ ಈಗ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 489ಕ್ಕೆ ಏರಿಕೆಯಾಗಿದೆ.












Click it and Unblock the Notifications