Actor Yash: ನಟ ಯಶ್ ಹೊಸ ಚಿತ್ರಕ್ಕೆ ಸಂಕಷ್ಟ: ಇಲ್ಲಿದೆ ಕೇಸ್ನ ಸಂಪೂರ್ಣ ವಿವರ
ಬೆಂಗಳೂರು ಜುಲೈ 26: ಕೆವಿಎನ್ ಫಿಲ್ಮ್ ಪ್ರೊಡೆಕ್ಷನ್ ಕಂಪನಿ ಅನಧಿಕೃತವಾಗಿ ಒತ್ತುವರಿ ಮಾಡಿರುವ ಅರಣ್ಯ ಭೂಮಿಯಲ್ಲಿ ಸದ್ಯ ನಟ ಯಶ್ ಮುಂದಿನ ಚಿತ್ರವಾದ 'ಟಾಕ್ಸಿಕ್' ಚಿತ್ರೀಕರಣಕ್ಕೆ ಅದ್ಧೂರಿ ಸೆಟ್ ಸಂಬಂಧ ಸಲ್ಲಿಸಿರುವ ಅರ್ಜಿ ಕುರಿತು ಹೈಕೋರ್ಟ್ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ.
ಬೆಂಗಳೂರಿನ ವಕೀಲ ಜಿ.ಬಾಲಾಜಿ ನಾಯ್ಡು ಅರಣ್ಯ ಜಮೀನು ಒತ್ತುವರಿ ತೆರವುಗೊಳಿಸಲು ನಿರ್ದೇಶಿಸುವಂತೆ ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ, ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಅವರ ನೇತೃತ್ವದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.

ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ಪೀಣ್ಯ ಪ್ಲಾಂಟೇಷನ್ ಗ್ರಾಮದಲ್ಲಿ ಅರಣ್ಯ ಇಲಾಖೆಗೆ ಸೇರಿದೆ ಎನ್ನಲಾದ 20 ಎಕರೆ ಜಮೀನನ್ನು ಕೆನರಾ ಬ್ಯಾಂಕ್ ಮತ್ತು ಕೆವಿಎನ್ ಫಿಲ್ಮ್ ಪ್ರೊಡೆಕ್ಷನ್ ಕಂಪನಿ ಅನಧಿಕೃತವಾಗಿ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡುತ್ತಿದೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಸ್ ಜಾರಿ ಮಾಡಿದೆ.
ಯಾರಿಗೆಲ್ಲಾ ನೋಟಿಸ್..!
ಅರ್ಜಿದಾರ ಪರ ವಕೀಲ ವಾದ ಆಲಿಸಿದ ನ್ಯಾಯಪೀಠ, ಪ್ರತಿವಾದಿಗಳಾಗಿರುವ ರಾಜ್ಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ಬೆಂಗಳೂರು ನಗರದ ಉಪ ಅರಣ್ಯ ಸಂರಕ್ಷಣಾಧಿಕಾರಿ, ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿತು.
ಹಾಗೆಯೇ, ಇತರೆ ಪ್ರತಿವಾದಿಗಳಾದ ಎಚ್ಎಂಟಿ ಲಿಮಿಟೆಡ್, ಕೆನರಾ ಬ್ಯಾಂಕ್ನ ಕೇಂದ್ರ ಕಚೇರಿಯ ವ್ಯಸ್ಥಾಪಕ ನಿರ್ದೇಶಕರು, ಕೆವಿಎನ್ ಫಿಲ್ಮಡ್ ಪ್ರೊಡೆಕ್ಷನ್ ಕಂಪನಿ ಮಾಲೀಕರಿಗೆ ನೋಟಿಸ್ ಜಾರಿ ಮಾಡಿತು. ಅರ್ಜಿಗೆ ಕುರಿಂತೆ ಮುಂದಿನ ವಿಚಾರಣೆ ವೇಳೆ ಅರ್ಜಿ ಕುರಿತಂತೆ ಉತ್ತರ ನೀಡಬೇಕು ಎಂದು ಎಲ್ಲಾ ಪ್ರತಿವಾದಿಗಳಿಗೆ ನಿರ್ದೇಶಿಸಿ ವಿಚಾರಣೆಯನ್ನು ಆ.19ಕ್ಕೆ ಮುಂದೂಡಿತು.
ಅರ್ಜಿದಾರರ ಆಕ್ಷೇಪವೇನು?
ಅರ್ಜಿದಾರರ ಪರ ವಕೀಲ ಎಂ.ಆರ್. ವಿಜಯ್ ಕುಮಾರ್, 1896ರ ಜು.29ರಂದು ಅಂದಿನ ಮೈಸೂರು ಸರ್ಕಾರವು ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ ಹೋಬಳಿಯಲ್ಲಿ 599 ಎಕರೆಯನ್ನು ಜಮೀನನ್ನು ಪೀಣ್ಯ-ಜಾಲಹಳ್ಳಿ ಪ್ಲಾಂಟೇಷನ್ ಮೀಸಲು ಅರಣ್ಯ ಪ್ರದೇಶವೆಂದು ಘೋಷಿಸಿ ಗೆಜೆಟ್ ನೋಟಿಫಿಕೇಷನ್ ಹೊರಡಿಸಿತ್ತು. ಆದರೆ, 1963ರ ಜು.15ರಂದು ರಾಜ್ಯ ಕಂದಾಯ ಇಲಾಖೆಯು ಆ 599 ಎಕರೆ ಪೈಕಿ 180 ಎಕರೆ 26 ಗುಂಟೆ ಜಮೀನನ್ನು, 1965ರ ಮಾ.27ರಂದು ಪೀಣ್ಯ ಪ್ಲಾಂಟೇಷನ್ ಗ್ರಾಮದ ಸರ್ವೇ ನಂ 2ರಲ್ಲಿನ 77 ಎಕರೆ 20 ಗುಂಟೆ ಜಮೀನನ್ನು ಎಚ್ಎಂಟಿ ಲಿಮಿಟೆಡ್ಗೆ ದಾನವಾಗಿ ನೀಡಿದೆ ಎಂದು ವಿವರಿಸಿದರು.
ಅಲ್ಲದೆ, 2001ರಲ್ಲಿ ಎಚ್ಎಂಟಿ ಲಿಮಿಟೆಡ್ ಪೀಣ್ಯ ಪ್ಲಾಂಟೇಷನ್ ಗ್ರಾಮದ ಸರ್ವೇ ನಂ-21ರಲ್ಲಿನ 19.86 ಎಕರೆ ಖಾಸಗಿ ಏಜೆನ್ಸಿಗಳಿಗೆ ಮಾರಾಟ ಮಾಡಿದೆ. ಇನ್ನೂ ಸರ್ವೇ ನಂ.2ರಲ್ಲಿನ 20 ಎಕರೆ 7 ಗುಂಟೆ ಕೆನರಾ ಬ್ಯಾಂಕ್ ಮತ್ತು ಕೆವಿಎನ್ ಫಿಲ್ಮ್ ಪ್ರೊಡೆಕ್ಷನ್ ಕಂಪನಿ ಅನಧಿಕೃತವಾಗಿ ಒತ್ತುವರಿ ಮಾಡಿ ಕಟ್ಟಡ ನಿರ್ಮಾಣ ಮಾಡುತ್ತಿವೆ. 2018ರಲ್ಲಿ ಈ ಎಲ್ಲಾ ಜಾಗವು ಅರಣ್ಯ ಜಮೀನು ಎಂಬುದಾಗಿ ಅರಣ್ಯ ಇಲಾಖೆ ಆದೇಶ ಹೊರಡಿಸಿದೆ.
ಅದರಂತೆ ಈ ಆದೇಶ ಪಾಲನೆ ಕುರಿತಂತೆ ನ್ಯಾಯಾಲಯಕ್ಕೆ ಅನುಪಾಲನೆ ವರದಿ ಸಲ್ಲಿಸಬೇಕು. ಕೆನರಾ ಬ್ಯಾಂಕ್ ಮತ್ತು ಕೆವಿಎನ್ ಫಿಲ್ಮ್ ಪ್ರೊಡೆಕ್ಷನ್ ಕಂಪನಿ ಅನಧಿಕೃತವಾಗಿ ಒತ್ತುವರಿ ಮಾಡಿರುವ ಜಮೀನನ್ನು ತೆರವುಗೊಳಿಸಿ ಅರಣ್ಯ ಭೂಮಿಯಾಗಿ ಸಂರಕ್ಷಣೆ ಮಾಡಲು ರಾಜ್ಯ ಅರಣ್ಯ ಇಲಾಖೆ ಹಾಗೂ ಅದರ ಅಧಿಕಾರಿಗಳಿಗೆ ನಿರ್ದೇಶನ ನೀಡಬೇಕು ಎಂದು ಕೋರಿದರು.












Click it and Unblock the Notifications