ಬೆಂಗಳೂರು ಸಂಚಾರ ಜಂಕ್ಷನ್ ನಿಯಂತ್ರಣಕ್ಕೆ ಬಿಬಿಎಂಪಿ ಮೆಗಾ ಪ್ಲಾನ್!
ಬೆಂಗಳೂರು, ಜುಲೈ11: ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆಯ ನಿರ್ವಹಣೆಗೆ ಸಂಬಂಧಿಸಿದಂತೆ ಈಗಾಗಲೇ ಪರಿಶೀಲನೆ ನಡೆಸಿರುವ ಜಂಕ್ಷನ್ಗಳಲ್ಲಿ ತೆಗೆದುಕೊಳ್ಳಬೇಕಿರುವ ತುರ್ತು ಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ಆಡಳಿತಗಾರರಾದ ರಾಕೇಶ್ ಸಿಂಗ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಬಿಬಿಎಂಪಿ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಸಂಬಂಧಿಸಿದಂತೆ ವಿವಿಧ ಇಲಾಖೆಗಳ ಜೊತೆ ನಡೆದ 3ನೇ ಸಮನ್ವಯ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಪ್ರಮುಖ ಜಂಕ್ಷನ್ಗಳಲ್ಲಿ ಸಂಚಾರ ದಟ್ಟಣೆ ನಿಯಂತ್ರಿಸಲು ತಾತ್ಕಾಲಿಕ ಪರಿಹಾರಗಳ ಜೊತೆಗೆ ಶಾಶ್ವತ ಪರಿಹಾರಗಳಿಗೂ ಹೆಚ್ಚು ಆದ್ಯತೆ ನೀಡಿ ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಲು ಯೋಜನೆ ರೂಪಿಸಲು ಅಧಿಕಾರಿಗಳಿಗೆ ಸೂಚಿಸಿದರು.
ಗೊರೆಗುಂಟೆಪಾಳ್ಯ ಜಂಕ್ಷನ್ನಲ್ಲಿ ತೆಗೆದುಕೊಳ್ಳಬೇಕಿರುವ ಕ್ರಮಗಳ ಪೈಕಿ ಈಗಾಗಲೇ ಡಾಂಬರೀಕರಣ ಕಾಮಗಾರಿ ಪೂರ್ಣಗೊಂಡಿದ್ದು, ತಾಜ್ ವಿವಂತದ ಪಕ್ಕದಲ್ಲಿ ಉಚಿತ ಎಡ ತಿರುವು ಕಾಮಗಾರಿಯನ್ನು ತಕ್ಷಣ ಆರಂಭಿಸಬೇಕು. ಜೊತೆಗೆ ಗೊರಗುಂಟೆ ಪಾಳ್ಯದ ಹೊರ ವರ್ತುಲ ರಸ್ತೆಗೆ 990 ಮೀ. ಸಮಾನಾಂತರ ರಸ್ತೆಗೆ ಡಾಂಬರೀಕರಣವನ್ನು ತಕ್ಷಣವೇ ತೆಗೆದುಕೊಳ್ಳಬೇಕು. ಶೌಚಾಲಯಕ್ಕಾಗಿ ಜಲಮಂಡಳಿ ವತಿಯಿಂದ ಒಳಚರಂಡಿ ಕಾಮಗಾರಿ ಪ್ರಗತಿಯಲ್ಲಿದ್ದು, ಅದನ್ನು 10 ದಿನಗಳಲ್ಲ್ಲಿ ಪೂರ್ಣಗೊಳಿಸಬೇಕು. ಬಿಡಿಎ ವತಿಯಿಂದ ಅಳವಡಿಸಬೇಕಿರುವ ಸೈನೇಜ್ ವಿನ್ಯಾಸ ಮುಗಿಯುವ ಹಂತಕ್ಕೆ ಬಂದಿದ್ದು, ವಾರದೊಳಗಾಗಿ ಅಳವಡಿಸಬೇಕು. ಪಾದಚಾರಿ ಮೇಲು ಸೇತುವೆಯ ಟೆಂಡರ್ ಪ್ರಕ್ರಿಯೆಯನ್ನು ಕೂಡಲೇ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರೈಲ್ವೇ ಇಲಾಖೆಯಿಂದ ದುರಸ್ತಿ ಕಾರ್ಯ
ಗೊರಗುಂಟೆ ಪಾಳ್ಯ ಕಡೆಯಿಂದ ಹೆಬ್ಬಾಳದ ಮಾರ್ಗದ ರೈಲ್ವೇ ಮೇಲು ಸೇತುವೆಯನ್ನು ರೈಲ್ವೆ ಇಲಾಖೆಯಿಂದಲೇ ನಿರ್ಮಾಣ ಮಾಡಲಾಗಿದ್ದು, ಪಾಲಿಕೆಯಿಂದ ನಿರ್ವಹಣೆ ಮಾಡಲಾಗುತ್ತಿದೆ. ಮೇಲು ಸೇತುವೆಯಲ್ಲಿ ರಚನಾತ್ಮಕ ಸಮಸ್ಯೆಯಿದ್ದು, ಅದನ್ನು ರೈಲ್ವೆ ಇಲಾಖೆಯು ಪರಿಶೀಲಿಸಿ ಪಾಲಿಕೆಗೆ ವರದಿ ನೀಡಲಿದೆ. ಆ ಬಳಿಕ ಅದಕ್ಕೆ ತಗಲುವ ವೆಚ್ಚವನ್ನು ಪಾಲಿಕೆಯಿಂದ ರೈಲ್ವೆ ಇಲಾಖೆಗೆ ನೀಡಲಿದ್ದು, ರೈಲ್ವೆ ಇಲಾಖೆಯಿಂದಲೇ ದುರಸ್ತಿ ಕಾರ್ಯ ನಡೆಸಲಾಗುತ್ತದೆ. ಇದರ ಜೊತೆಗೆ ಹೆಬ್ಬಾಳ ಕಡೆಯಿಂದ ಬರುವ ವಾಹನಗಳು ಮೇಲುಸೇತುವೆ ಕಳೆಭಾಗದಲ್ಲಿ ಯು-ಟರ್ನ್ ತೆಗೆದುಕೊಳ್ಳುವ ಸಲುವಾಗಿ ಸ್ಥಳಾವಕಾಶದ ಅಗತ್ಯವಿದ್ದು, ಅದಕ್ಕೆ ಖಾಸಗಿ ಸ್ಥಳವನ್ನು ಭೂಸ್ವಾಧೀನ ಪಡಿಸಿಕೊಳ್ಳಬೇಕಿದೆ. ಅದಕ್ಕಾಗಿ ಸಮಾರು 9 ಕೋಟಿ ರೂ. ಅಗತ್ಯವಿದ್ದು, ಅದಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು.

6 ಜಂಕ್ಷನ್ 25 ಹೋಮ್ಗಾರ್ಡ್ ನಿಯೋಜನೆ
ಹೆಬ್ಬಾಳ ಜಂಕ್ಷನ್ನಲ್ಲಿ ರೈಲ್ವೇ ಹಳಿ ಕೆಳಗೆ ಕೆಳಸೇತುವೆ ಯೋಜನೆ ಕೈಗೆತ್ತಿಕೊಳ್ಳುವ ಯೋಜನೆಯ ಬಗ್ಗೆ ಚರ್ಚಿಸಲಾಯಿತು. ಜೊತೆಗೆ ತಾತ್ಕಾಲಿಕವಾಗಿ ಲೆವೆಲ್ ಕ್ರಾಸಿಂಗ್ ಕುರಿತು ಚರ್ಚಿಸಲಾಯಿತು. ಬಿಎಂಟಿಸಿ ವತಿಯಿಂದ ಪ್ರಕಾಶಮಾನವಾಗಿರುವಂತಹ ಪ್ರದರ್ಶನ ಫಲಕಗಳನ್ನು ಹಾಕಲು ಮತ್ತು ವೀಕ್ಷಣಾ ಅಧಿಕಾರಿಗಳನ್ನು ನಿಯೋಜಿಸಲು ಬಿಎಂಟಿಸಿ ಅಧಿಕಾರಿಗಳಿಗೆ ಸೂಚಿಸಿದರು. ಈ ವೇಳೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಮಾತನಾಡಿ, ಎಲ್ಲಾ 6 ಪ್ರಮುಖ ಜಂಕ್ಷನ್ಗಳಲ್ಲಿ ತಲಾ 25 ಹೋಮ್ ಗಾರ್ಡ್ ಗಳನ್ನು ನಿಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು.
ಸಿಲ್ಕ್ ಬೋರ್ಡ್ ಜಂಕ್ಷನ್ನಲ್ಲಿ ಬಿಎಂಟಿಸಿ ಬಸ್ ನಿಲ್ದಾಣದ ಪ್ರವೇಶ ಮಾರ್ಗವನ್ನು ಅಂತಿಮಗೊಳಿಸಿ ಅದರಂತೆ ಬಸ್ ಗಳು ಬರಲು ಅನುಮತಿ ನೀಡಬೇಕು. ಅಲ್ಲದೆ ಬಸ್ ನಿಲ್ದಾಣದ ಸ್ಥಳದಲ್ಲಿ ದೀಪಗಳು ಮತ್ತು ಶೌಚಾಲಯಗಳನ್ನು ಸ್ಥಾಪಿಸಲು ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲು ಆಡಳಿತಗಾರರು ಬಿಎಂಟಿಸಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಯದೇವ ಕೆಳಸೇತುವೆ ಕಾಮಗಾರಿ 15ದಿನದಲ್ಲಿ ಪೂರ್ಣ
ಕೆ. ಆರ್. ಪುರ ಜಂಕ್ಷನ್ ನಲ್ಲಿ ಎಡಭಾಗದ ರಸ್ತೆಯು ಭಾಗಶಃ ಪೂರ್ಣಗೊಂಡಿದ್ದು, ದೇವಸ್ಥಾನದ ಬಳಿ ಬಸ್ ನಿಲ್ದಾಣವನ್ನು ಪೂರ್ಣಗೊಳಿಸಬೇಕಿದೆ ಹಾಗೂ ಬಲ ಬದಿಯ ಕಾಮಗಾರಿಗಳನ್ನು ಆರಂಭಿಸಬೇಕು. ಈ ಸಂಬಂಧ ವಲಯ ಆಯುಕ್ತರು, ಬಿ. ಎಂ. ಆರ್. ಸಿ. ಎಲ್, ಬಿಡಿಎ ಹಾಗೂ ಟ್ರಾಫಿಕ್ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಯದೇವ ಜಂಕ್ಷನ್ನಲ್ಲಿ ಸರ್ವಿಸ್ ರಸ್ತೆಯಲ್ಲಿರುವ ಭಗ್ನಾವಶೇಷಗಳನ್ನು ಬಿಎಂಆರ್ಸಿಎಲ್ ನಿಂದ ತೆರವುಗೊಳಿಸಲಾಗಿದೆ. ಇನ್ನು ಬನ್ನೇರುಘಟ್ಟ ರಸ್ತೆಯ ಗುಣಮಟ್ಟವನ್ನು ಹೆಚ್ಚಿಸಬೇಕಿದ್ದು, ಜಯದೇವ ಕೆಳಸೇತುವೆ ಕಾಮಗಾರಿಯನ್ನು 15 ಜುಲೈ 2022 ರೊಳಗೆ ಪೂರ್ಣಗೊಳಿಸಿ ಸಾರ್ವಜನಿಕರಿಗೆ ಮುಕ್ತಗೊಳಿಸಲು ಅಧಿಕಾರಿಗಳಿಗೆ ಸೂಚಿಸಿದರು.

ಪಾದಚಾರಿ ಮೇಲುಸೇತುವೆಗಳು ತ್ವರಿತ ಕಾಮಗಾರಿ
ಸಭೆಯಲ್ಲಿ ಮುಖ್ಯ ಆಯುಕ್ತರು ತುಷಾರ್ ಗಿರಿನಾಥ್ ರವರು ಮಾತನಾಡಿ, ಶಿವಾನಂದ ಮೇಲುಸೇತುವೆ ಕಾಮಗಾರಿಯನ್ನು 5 ಆಗಸ್ಟ್ 2022ಕ್ಕೆ ಪೂರ್ಣಗೊಳಿಸಲು ಯೋಜನಾ ವಿಭಾಗದ ಮುಖ್ಯ ಅಭಿಯಂತರರಿಗೆ ಸೂಚನೆ ನೀಡಿದರು. ಜೊತೆಗೆ ಗಾಳಿ ಆಂಜನೇಯ ದೇವಸ್ಥಾನ ಜಂಕ್ಷನ್, ಕೆಂಗೇರಿ ಸ್ಯಾಟಲೈಟ್ ಬಸ್ ನಿಲ್ದಾಣ ಮತ್ತು ಸುಮನಹಳ್ಳಿ ಜಂಕ್ಷನ್ನಲ್ಲಿ ಪಾದಚಾರಿ ಮೇಲುಸೇತುವೆ ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಕೆಂಪೇಗೌಡ ರಸ್ತೆ (ಕೆ.ಜಿ.ರಸ್ತೆ)ಯ ಸಂತೋಷ್ ಚಿತ್ರಮಂದಿರದ ಬಳಿಯಿರುವ ಪಾದಚಾರಿ ಮೇಲುಸೇತುವೆಯು ಶಿಥಿಲಗೊಂಡಿದ್ದು, ಅದನ್ನು ಕೂಡಲೇ ತೆರವುಗೊಳಿಸಿ ಹೊಸದಾಗಿ ಪಾದಚಾರಿ ಮೇಲುಸೇತುವೆ ನಿರ್ಮಾಣ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸಂಚಾರ ನಿಯಂತ್ರಣ ಸಮನ್ವಯ ಸಭೆಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಪ್ರತಾಪ್ ರೆಡ್ಡಿ, ಜಲಮಂಡಳಿ ಅಧ್ಯಕ್ಷರಾದ ಜಯರಾಮ್, ಬಿಡಿಎ ಆಯುಕ್ತರಾದ ರಾಜೇಶ್ ಗೌಡ, ಸಂಚಾರಿ ಪೋಲಿಸ್ ಜಂಟಿ ಆಯುಕ್ತರಾದ ರವಿಕಾಂತೆ ಗೌಡ, ಸ್ಮಾರ್ಟ್ ಸಿಟಿ ಹಾಗೂ ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಾದ ರಾಜೇಂದ್ರ ಚೋಳನ್, ಪಾಲಿಕೆಯ ಎಲ್ಲಾ ವಲಯ/ ವಿಶೇಷ ಆಯುಕ್ತರುಗಳು, ಬಿಎಂಆರ್ಸಿಎಲ್, ಬಿಎಂಟಿಸಿ, ಕೆಎಸ್ಆರ್ಟಿಸಿ, ಕೆಪಿಟಿಸಿಎಲ್, ರೈಲ್ವೇ, ಪಾಲಿಕೆ ಸೇರಿದಂತೆ ವಿವಿಧ ಇಲಾಖೆಗಳ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.











Click it and Unblock the Notifications