ಲಾರಿ ಮಾಲೀಕರ ಮುಷ್ಕರ ತಾತ್ಕಾಲಿಕ ಅಂತ್ಯ
ಬೆಂಗಳೂರು, ಜೂನ್ 21, 2018: ಕಳೆದ ನಾಲ್ಕು ದಿನಗಳಿಂದ ದೇಶಾದ್ಯಂತ ನಡೆಯುತ್ತಿರುವ ಟ್ರಕ್ ಮಾಲೀಕರ ಅನಿರ್ದಿಷ್ಟಾವಧಿ ಮುಷ್ಕರ ಗುರುವಾರ ಸಂಜೆ ತಾತ್ಕಾಲಿಕ ಅಂತ್ಯ ಕಂಡಿದೆ.
ಬೇಡಿಕೆಗಳು ಈಡೇರುವವರೆಗೂ ಮುಂದುವರೆಯಲಿದೆ ಎಂದು ಅಖಿಲ ಭಾರತ ಸರಕು ಸಾಗಣೆ ವಾಹನಗಳ ಮಾಲೀಕರ ಸಂಘಗಳ ಮಹಾಒಕ್ಕೂಟದ ಅಧ್ಯಕ್ಷ ಬಿ.ಚನ್ನಾರೆಡ್ಡಿ ಅವರು ಬೆಳಗ್ಗೆ ಸುದ್ದಿಗೋಷ್ಠಿ ನಡೆಸಿ ಹೇಳಿದ್ದರು.
ಆದರೆ, ಕೇಂದ್ರ ಮಂತ್ರಿಗಳು ಜೂನ್ 27 ರ ನಂತರ ಬೇಡಿಕೆಗಳ ಈಡೇರಿಕೆಯ ಬಗ್ಗೆ ಮಾತುಕತೆಯನ್ನು ನಡೆಸುವುದಾಗಿ ತಿಳಿಸಿರುವ ಹಿನ್ನಲೆಯಲ್ಲಿ ನಾಲ್ಕು ದಿನಗಳಿಂದ ನಡೆಯುತ್ತಿರುವ ಲಾರಿ ಮಾಲೀಕರ ಮುಷ್ಕರವನ್ನು ತಾತ್ಕಾಲಿಕವಾಗಿ ಅಂತ್ಯಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಖಿಲ ಭಾರತ ಸರಕು ಸಾಗಣೆ ವಾಹನಗಳ ಮಾಲೀಕರ ಸಂಘಗಳ ಮಹಾಒಕ್ಕೂಟದ ಅಧ್ಯಕ್ಷ ಬಿ.ಚನ್ನಾರೆಡ್ಡಿ ಹೇಳಿದರು.
ಗುರುವಾರ ಸಂಜೆ ಎಲ್ಲಾ ರಾಜ್ಯಗಳ ಲಾರಿ ಮಾಲೀಕರ ಒಕ್ಕೂಟದ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿದ ನಂತರ ನೀಡಿರುವ ಪತ್ರಿಕಾ ಪ್ರಕಟಣೆಯಲ್ಲಿ ಈ ಮಾಹಿತಿಯನ್ನು ನೀಡಿದರು.
ಅವೈಜ್ಞಾನಿಕವಾಗಿ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳ ಮಾಡಿರುವುದು ಮತ್ತು ಮೂರನೇ ಪಾರ್ಟಿ ಪ್ರೀಮಿಯಂ ದರವನ್ನು ಹೆಚ್ಚಳ ಮಾಡಿರುವ ಕೇಂದ್ರ ಸರ್ಕಾರದ ವಿರುದ್ಧ ಅಖಿಲ ಭಾರತ ಟ್ರಕ್ ಮಾಲೀಕರ ಮಹಾ ಒಕ್ಕೂಟ ಜೂನ್ 18, 2018 ರಿಂದ ದೇಶಾದ್ಯಂತ ಅನಿರ್ದಿಷ್ಠಾವಧಿ ಮುಷ್ಕರ ಪ್ರಾರಂಭಿಸಲಾಗಿತ್ತು.