Tunnel Road: ಟನಲ್ ರಸ್ತೆಯಿಂದ ಹಾನಿ: ಮೆಟ್ರೋ ಸಾರಿಗೆಯನ್ನೇ ಉತ್ತೇಜಿಸಿ: ಆರ್.ಅಶೋಕ್
ಬೆಂಗಳೂರು, ನವೆಂಬರ್ 15: ಬೆಂಗಳೂರಿನಲ್ಲಿ ಟನಲ್ ರಸ್ತೆ ಯೋಜನೆಯು ಮುಂದಿನ ವರ್ಷ ಆರಂಭಿಸಲು ರಾಜ್ಯ ಸರ್ಕಾರ ಪ್ಲಾನ್ ಮಾಡಿಕೊಂಡಿದೆ. ರಾಜ್ಯ ಸರ್ಕಾರ ಸುರಂಗ ರಸ್ತೆ ನಿರ್ಮಿಸುವ ಮೂಲಕ ಕಾಂಗ್ರೆಸ್ ಸರ್ಕಾರ ಪರಿಸರವನ್ನು ಹಾಳುಗೆಡವುತ್ತಿದೆ. ಅದರಿಂದ ಹಾನಿಯೇ ಹೆಚ್ಚು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದರು.
ಭಾನುವಾರ ಸ್ಯಾಂಕಿ ಕೆರೆ ಬಳಿ ನಡೆದ ಸಹಿ ಸಂಗ್ರಹ ಹಾಗೂ ಪರಿಶೀಲನೆ ಕಾರ್ಯದ ವೇಳೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಸುರಂಗ ರಸ್ತೆಗಾಗಿ ಸ್ಯಾಂಕಿ ಕೆರೆಗೆ ಧಕ್ಕೆ ತರಲಾಗುತ್ತಿದೆ. ನಾವ್ಯಾರೂ ಅಭಿವೃದ್ಧಿಯ ವಿರೋಧಿಗಳಲ್ಲ. ಆದರೆ ಯಾವುದೇ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ತಂದರೂ ಪರಿಸರವನ್ನು ಹಾಳು ಮಾಡುತ್ತದೆ. ಪರಿಸರ ಇಲಾಖೆ, ಪುರಾತತ್ವ ಇಲಾಖೆ, ಅರಣ್ಯ ಇಲಾಖೆ ಸೇರಿದಂತೆ ಯಾವುದೇ ಇಲಾಖೆಗಳ ಅನುಮತಿಯನ್ನೂ ಸಹ ಪಡೆದಿಲ್ಲ ಎಂದು ವಿವರಿಸಿದರು.

ನಮ್ಮ ಮೆಟ್ರೋ ಸಾರಿಗೆಯಿಂದಾಗಿ ಬೆಂಗಳೂರಿನಲ್ಲಿ ಟ್ರಾಫಿಕ್ ಕಡಿಮೆ ಆಗಿದೆ. ಲಕ್ಷಾಂತರ ಜನರು ನಿತ್ಯ ಇದೇ ಮೆಟ್ರೋ ಸಾರಿಗೆ ಬಳಸುತ್ತಿದ್ದಾರೆ. ಇದನ್ನೇ ಸುಧಾರಣೆ ಮಾಡಿ ಬೇಗ ಯೋಜನೆ ಪೂರ್ಣಗೊಳಿಸಿದರೆ ಜನರಿಗೆ ಮತ್ತಷ್ಟು ಅನುಕೂಲವಾಗುತ್ತದೆ. ಟ್ರಾಫಿಕ್ ಇಳಿಕೆಗೆ ಕೊಡುಗೆ ನೀಡಿದಂತೆ. ಸುರಂಗ ಕೊರೆದರೆ ಉಂಟಾಗುವ ಹೂಳನ್ನು ಎಲ್ಲಿಗೆ ಸಾಗಿಸುತ್ತಾರೆ ಎಂಬ ಬಗ್ಗೆ ಇವರಿಗೆ ಸ್ಪಷ್ಟತೆ ಇಲ್ಲ. ಇದೊಂದು ಹಣ ಲೂಟಿಯ ಯೋಜನೆ. ಈಗಾಗಲೇ ಬಿಹಾರ ಚುನಾವಣೆಗೆ ಹಣ ಕಳುಹಿಸಿದ್ದಾರೆ. ಈ ರೀತಿ ಹಣ ಮಾಡಲು ಯೋಜನೆ ಮಾಡಬಾರದು ಎಂದು ಅವರು ಆಗ್ರಹಿಸಿದರು.
ಬೆಂಗಳೂರಿನ ಜನರು ತೆರಿಗೆಗಳ ಭಾರದಿಂದ ಹಿಂಸೆ ಅನುಭವಿಸುತ್ತಿದ್ದಾರೆ. ತ್ಯಾಜ್ಯ, ನೀರು ಎಲ್ಲ ದರ ಏರಿಕೆಯಾಗಿದೆ. ಸುರಂಗ ರಸ್ತೆ ನಿರ್ಮಾಣವಾದರೆ ಅದಕ್ಕೆ 20 ಸಾವಿರ ರೂ. ನಷ್ಟು ಟೋಲ್ ಪಾವತಿಸಬೇಕಾಗುತ್ತದೆ. ಸರ್ಕಾರ ಈ ಬಗ್ಗೆ ಚಿಂತನೆ ಮಾಡಬೇಕು ಎಂದು ಸಲಹೆ ನೀಡಿದರು.
ಬಿಹಾರ ಮತದಾರರಿಗೆ ಕಾಂಗ್ರೆಸ್ ಅಪಮಾನ
ಕಾಂಗ್ರೆಸ್ ತಾನು ಸೋತಾಗಲೆಲ್ಲ ಮತಗಳ್ಳತನ ಹಾಗೂ ಇವಿಎಂ ಸರಿ ಇಲ್ಲ ಎಂಬ ಆರೋಪ ಮಾಡುತ್ತದೆ. ಬಿಹಾರದಲ್ಲೇ ವೋಟ್ ಚೋರಿ ಬಗ್ಗೆ ಅಭಿಯಾನ ಮಾಡಲಾಗಿತ್ತು. ಅದನ್ನು ಮತದಾರರು ತಿರಸ್ಕರಿಸಿದ್ದಾರೆ. ಮತಪಟ್ಟಿ ಪರಿಷ್ಕರಣೆ ವೇಳೆ ಅನ್ಯದೇಶಗಳ ಜನರ ಹೆಸರು, ಸತ್ತವರ ಹೆಸರು ರದ್ದಾಗಿದೆ. ವಿಶೇಷ ಪರಿಷ್ಕರಣೆ ಸರಿ ಇಲ್ಲ ಎಂದರೆ ಯಾರೂ ನಂಬಲ್ಲ. ಕಾಂಗ್ರೆಸ್ ಎಲ್ಲ ರಾಜ್ಯಗಳಲ್ಲಿ ಮಕಾಡೆ ಮಲಗಿದ್ದು, ಕರ್ನಾಟಕದಲ್ಲೂ ಆಡಳಿತ ಕೊನೆಯಾಗಲಿದೆ. ವೋಟ್ ಚೋರಿ ಎಂದು ಹೇಳಿ ಬಿಹಾರದ ಜನತೆಗೆ ಅಪಮಾನ ಮಾಡುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಜನರ ಮುಂದೆ ಕ್ಷಮೆ ಕೇಳಬೇಕು ಎಂದು ಒತ್ತಾಯಿಸಿದರು.
ಬಿಹಾರದ ಚುನಾವಣೆಯಲ್ಲಿ ಗೆದ್ದಿದ್ದರೆ ಡಿಸಿಎಂ ಡಿ.ಕೆ.ಶಿವಕುಮಾರ್ ಗೆ ಅವಕಾಶ ಬರುತ್ತಿತ್ತು. ಈಗ ಸಿಎಂ ಸಿದ್ದರಾಮಯ್ಯ ಬಲಿಷ್ಠವಾಗಿದ್ದಾರೆ. ರಾಹುಲ್ ಗಾಂಧಿಯ ಮಾತನ್ನು ಇನ್ನು ಯಾರೂ ಕೇಳುವುದಿಲ್ಲ. ಸಿದ್ದರಾಮಯ್ಯನವರ ಮಾತನ್ನು ರಾಹುಲ್ ಗಾಂಧಿ ಕೇಳಬೇಕಾಗುತ್ತದೆ ಎಂದು ಲೇವಡಿ ಮಾಡಿದರು.












Click it and Unblock the Notifications