ಕೆಂಪೇಗೌಡ ಹೆಸರಿನಲ್ಲಿ ವಿಶ್ವವಿದ್ಯಾನಿಲಯ: ಸಿಎಂ ಕುಮಾರಸ್ವಾಮಿ
ಬೆಂಗಳೂರು, ಜೂನ್ 27: ನಾಡಪ್ರಭು ಕೆಂಪೇಗೌಡರ ಹೆಸರಿನಲ್ಲಿ ಕೌಶಲ್ಯಾಭಿವೃದ್ಧಿ ವಿಶ್ವವಿದ್ಯಾನಿಲಯ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಿಳಿಸಿದರು.
ಕುಮಾರಸ್ವಾಮಿ ಅವರು ಇಂದು ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಅರಮನೆ ಆವಣದಲ್ಲಿ ಏರ್ಪಡಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನಾಡಪ್ರಭು ಕೆಂಪೇಗೌಡ ಜಯಂತಿ ಬಗ್ಗೆ ಬೆಂಗಳೂರಿಗರಿಗೆ ಎಷ್ಟು ಗೊತ್ತು?
ರಾಜ್ಯದ ಒಟ್ಟಾರೆ ಆದಾಯದ ಶೇ. 60 ರಿಂದ 65 ರಷ್ಟು ಬೆಂಗಳೂರಿನದ್ದೇ ಆಗಿದ್ದು ಇದನ್ನು ರಾಜ್ಯದ ಅಭಿವೃದ್ಧಿಗೆ ಬಳಸಲಾಗುವುದು. ರಾಜ್ಯಾದ್ಯಂತ ಕೆಂಪೇಗೌಡ ಅವರ ಜಯಂತಿ ಆಚರಿಸಲಾಗುವುದು. ಕೆಂಪೇಗೌಡ ಅವರ ಭವನ ನಿರ್ಮಾಣ ಮಾಡಲು ಯೋಜಿಸಲಾಗಿದ್ದು ಅದಕ್ಕಾಗಿ ಹಣ ಮೀಸಲಿಡಲಾಗುವುದು ಎಂದು ತಿಳಿಸಿದರು.
ಸಚಿವ ಡಿ.ಕೆ. ಶಿವಕುಮಾರ್ ಅವರು ಮಾತನಾಡಿ, ಕೆಂಪೇಗೌಡರ ಅಭಿವೃದ್ಧಿ ಪ್ರಾಧಿಕಾರ ಸೇರಿದಂತೆ ಹಲವಾರು ಯೋಜನೆಗಳನ್ನು ಹಮ್ಮಿಕೊಂಡಿದ್ದು ಶಾಲಾ ಪಠ್ಯ ಪುಸ್ತಕಗಳಲ್ಲಿ ಅವರ ಬಗ್ಗೆ ಪಠ್ಯವನ್ನು ಸೇರ್ಪಡಿಗೊಳಿಸಲಾಗುವುದು. ಕೆಂಪೇಗೌಡ ಜಯಂತಿಯನ್ನು ನಾಡಹಬ್ಬವಾಗಿ ಆಚರಿಸಲಾಗುವುದು . ಅಲ್ಲದೆ ಬೆಂಗಳೂರು ನಗರವನ್ನು ಮಾದರಿ ನಗರವನ್ನಾಗಿಸಲು ಶ್ರಮಿಸಲಾಗುವುದೆಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ಸಚಿವರುಗಳಾದ ಡಿ.ಕೆ. ಶಿವಕುಮಾರ್, ಕೃಷ್ಣಭೈರೇಗೌಡ, ಡಾ: ಜಯಮಾಲ ಸೇರಿದಂತೆ ಹಲವಾರು ಶಾಸಕರು, ಗಣ್ಯರು ಅಧಿಕಾರಿಗಳು ಉಪಸ್ಥಿತರಿದ್ದರು.