ವಾಲ್ಮೀಕಿ ಪರಿಶಿಷ್ಟ ಪಂಗಡದ ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಪ್ರತಿಭಟನೆ
ಬೆಂಗಳೂರು, ಜೂನ್ 25: ವಾಲ್ಮೀಕಿ ಸಮುದಾಯದ ಪರಿಶಿಷ್ಟ ಪಂಗಡದ ಮೀಸಲಾತಿ ಶೇ. 7.5ರಷ್ಟಕ್ಕೆ ಏರಿಸಲು ಒತ್ತಾಯಿಸಿ ವಾಲ್ಮೀಕಿ ಸಮುದಾಯದ ಸಾವಿರಾರು ಮಂದಿ ವಿಧಾನಸೌಧದೆದುರು ಇಂದು(ಜೂನ್ 25) ಪ್ರತಿಭಟನೆ ನಡೆಸಿದರು.
ಸಮಾಜಕ್ಕೆ ಮೊದಲು ನೀಡುತ್ತಿದ್ದ ಶೇ.3 ಮಿಸಲಾತಿಯಿಂದ ನೇಮಕಾತಿ ಮತ್ತು ಬಡ್ತಿಗಳಲ್ಲಿ ಅನ್ಯಾಯವಾಗುತ್ತಿದೆ. ಕಾರಣ, ಪರಿಶಿಷ್ಟ ಪಂಗಡದ ಮೀಸಲಾತಿಯನ್ನು ಶೇ,7.5 ಕ್ಕೆ ಹೆಚ್ಚಿಸಬೇಕು. ಈ ಕುರಿತು ಸಮಾಜ ಬಾಂಧವರು ಸರಕಾರದ ಗಮನ ಸೆಳೆದರೂ ಪ್ರಯೋಜನವಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪರಿಶಿಷ್ಟ ವರ್ಗದ ಪಟ್ಟಿಯಲ್ಲಿರುವ ಹೆಸರು ಬಳಸಿಕೊಂಡು ಅಸಂವಿಧಾನಿಕವಾಗಿ ಖೊಟ್ಟಿ ಜಾತಿ ಪ್ರಮಾಣ ಪತ್ರ ಪಡೆಯುವ ಕೆಲವರು ಪರಿಶಿಷ್ಟ ವರ್ಗದವರಿಗೆ ಮೀಸಲಿರುವ ಸೌಲಭ್ಯ ಪಡೆಯುತ್ತಿರುವುದು ಸಮುದಾಯದ ಗಮನಕ್ಕೆ ಬಂದಿದೆ. ಕೂಡಲೇ ರಾಜ್ಯ ಸರ್ಕಾರ ಅರ್ಹರಲ್ಲದವರಿಗೆ ಪರಿಶಿಷ್ಟ ಪಂಗಡ ಪ್ರಮಾಣ ಪತ್ರ ನೀಡುವುದನ್ನು ತಡೆಗಟ್ಟಬೇಕು.
ಜತೆಗೆ ಸುಳ್ಳು ಜಾತಿ ಪ್ರಮಾಣ ಪತ್ರ ಪಡೆದವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಸಮುದಾಯದ ಅಭಿವೃದ್ಧಿಗೆ ಪ್ರತ್ಯೇಕ ಪರಿಶಿಷ್ಟ ವರ್ಗದ ಸಚಿವಾಲಯ ಆರಂಭಿಸಬೇಕು ಎಂದು ಒತ್ತಾಯಿಸಿದರು.
ಸಮುದಾಯದ 14 ಜನ ಶಾಸಕರು, ಇಬ್ಬರು ಸಂಸದರು ಗಮನ ಹರಿಸಬೇಕು. ಇಲ್ಲದಿದ್ದರೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.
ಕರ್ನಾಟಕದಲ್ಲಿ ವಾಲ್ಮೀಕಿ ಸಮುದಾಯದವರು ಅಂದಾಜು 45 ಲಕ್ಷ ಜನರಿದ್ದಾರೆ.