ಸರ್ಕಾರಿ ವೆಚ್ಚದಲ್ಲಿ ವಾಲ್ಮೀಕಿ ಜಯಂತಿ ಆಚರಣೆ
ಬುಧವಾರ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ, ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಆಯಾ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆ ಹಾಗೂ ತಾಲೂಕು ಕೇಂದ್ರಗಳಲ್ಲಿ ಶಾಸಕರ ಅಧ್ಯಕ್ಷತೆಯಲ್ಲಿ ವಾಲ್ಮೀಕಿ ಜಯಂತಿ ಆಚರಿಸಲಾಗುವುದು ಎಂದು ಹೇಳಿದರು.
ಸರ್ಕಾರಿ ವೆಚ್ಚದಲ್ಲಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲು ನಿರ್ಧರಿಸಲಾಗಿದೆ. ಈ ಕುರಿತು ಸುತ್ತೋಲೆಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಕಳುಹಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. 2012ರಲ್ಲಿ ಸರ್ಕಾರಿ ವೆಚ್ಚದಲ್ಲಿ ಮೊದಲು ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಗಿತ್ತು. ನಂತರ ಈ ಸಂಪ್ರದಾಯ ಮುಂದುವರೆಸಲಾಗುತ್ತಿದೆ.
ಬಸವನಗುಡಿಯ ವಾಲ್ಮೀಕಿ ಆಶ್ರಮದ ಆದಿ ಗುರುಪೀಠದಿಂದ ವಿಧಾನಸೌಧಕ್ಕೆ 'ಮಹರ್ಷಿ ವಾಲ್ಮೀಕಿ ಜ್ಯೋತಿ' ಮೆರವಣಿಗೆಯಲ್ಲಿ ಆಗಮಿಸಲಿದೆ. ನಂತರ ಬಾಂಕ್ವೆಟ್ ಸಭಾಂಗಣದಲ್ಲಿ ಬೆಳಗ್ಗೆ 10.30ಕ್ಕೆ ವಾಲ್ಮೀಕಿ ಜಯಂತಿ ಆಚರಣೆ ನಡೆಯಲಿದೆ ಎಂದು ಸಚಿವರು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸಲಿದ್ದು, ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಮಹಾಸ್ವಾಮಿ ಸಾನ್ನಿಧ್ಯ ವಹಿಸಲಿದ್ದಾರೆ. ಆಯಾ ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ, ತಾಲೂಕುಗಳಲ್ಲಿ ಶಾಸಕರ ನೇತೃತ್ವದಲ್ಲಿ ಜಯಂತಿ ಆಚರಣೆ ನಡೆಯಲಿದೆ ಎಂದು ಸಚಿವರು ಮಾಹಿತಿ ನೀಡಿದರು.
ಪ್ರತಿ ತಾಲೂಕಿನಲ್ಲಿ ಅರಸು ಭವನ : ಪ್ರತಿ ತಾಲೂಕಿನಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ದೇವರಾಜ ಅರಸು ಭವನ ನಿರ್ಮಾಣ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಹೇಳಿದ್ದಾರೆ. ಈ ಭವನದಲ್ಲಿ ತಾಲೂಕು ಹಿಂದುಳಿದ ವರ್ಗಗಳ ಇಲಾಖೆ ಕಚೇರಿಯೂ ಇರಲಿದೆ ಎಂದು ತಿಳಿಸಿದರು.
ಪ್ರತಿ ತಾಲೂಕುಗಳಲ್ಲಿಯೂ ಅರಸು ಭವನ ನಿರ್ಮಾಣ ಮಾಡಲು ಸ್ಥಳದ ಹುಡುಕಾಟ ನಡೆಸಲಾಗುತ್ತಿದೆ. ತಾಲೂಕು ಹಿಂದುಳಿದ ವರ್ಗಗಳ ಇಲಾಖೆ ಕಚೇರಿಗಳು ಮುಂದಿನ ತಿಂಗಳ ವೇಳೆಗೆ ಕಾರ್ಯ ನಿರ್ವಹಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.