ಬೆಂಗಳೂರು ದಕ್ಷಿಣದಿಂದ ಚುನಾವಣಾ ಕಣಕ್ಕಿಳಿದ ವಾಟಾಳ್ ನಾಗರಾಜ್
ಬೆಂಗಳೂರು, ಮಾರ್ಚ್ 26 : ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಲೋಕಸಭಾ ಚುನಾವಣಾ ಅಖಾಡಕ್ಕಿಳಿದಿದ್ದಾರೆ. ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಅವರು ನಾಮಪತ್ರವನ್ನು ಸಲ್ಲಿಸಿದರು.
ಮಂಗಳವಾರ ವಾಟಾಳ್ ನಾಗರಾಜ್ ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಕುದುರೆ ಗಾಡಿಯಲ್ಲಿ ಬಿಬಿಎಂಪಿ ಕಚೇರಿಗೆ ಬಂದ ಅವರು ಕಾರ್ಯಕರ್ತರು, ತಮ್ಮ ಪಕ್ಷದ ಮುಖಂಡರ ಜೊತೆ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಕೆ ಮಾಡಿದರು.
ಏಪ್ರಿಲ್ 18ರಂದು ಬೆಂಗಳೂರು ದಕ್ಷಿಣ ಕ್ಷೇತ್ರದ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದೆ. ನಾಮಪತ್ರಗಳನ್ನು ಸಲ್ಲಿಸಲು ಮಾ.26ರ ಮಂಗಳವಾರ ಕೊನೆಯ ದಿನವಾಗಿತ್ತು. ಬಿಜೆಪಿಯಿಂದ ತೇಜಸ್ವಿ ಸೂರ್ಯ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಬಿ.ಕೆ.ಹರಿಪ್ರಸಾದ್ ಅವರು ಸಹ ಇಂದು ನಾಮಪತ್ರವನ್ನು ಸಲ್ಲಿಸಿದರು.
ಲೋಕಸಭೆಯಲ್ಲಿ ರಾಜ್ಯವನ್ನು ಪರಿಣಾಮಕಾರಿಯಾಗಿ ಪ್ರತಿನಿಧಿಸಬೇಕು. ರಾಜ್ಯದ ಬಗ್ಗೆ ಇದುವರೆಗೂ ಯಾರೂ ಪರಿಣಾಮಕಾರಿಯಾಗಿ ಹೋರಾಟ ಮಾಡಲಿಲ್ಲ ಎಂದು ವಾಟಾಳ್ ನಾಗರಾಜ್ ಅವರು ಆರೋಪ ಮಾಡಿದ್ದಾರೆ. ಲೋಕಸಭೆಯಲ್ಲಿ ಕನ್ನಡ ಡಿಂಡಿಮ ಬಾರಿಸಲು ಅವರು ಚುನಾವಣಾ ಕಣಕ್ಕಿಳಿದಿದ್ದಾರೆ.

ವಾಟಾಳ್ ನಾಗರಾಜ್ ನಾಮಪತ್ರ
ಮಂಗಳವಾರ ಕುದುರೆಗಾಡಿಯಲ್ಲಿ ಮೆರವಣಿಗೆ ಬಂದ ವಾಟಾಳ್ ನಾಗರಾಜ್ ಅವರು ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು. ಹಲವು ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಕರ್ನಾಟಕ ಮೌನವಾಗಿದೆ
ಲೋಕಸಭೆಯಲ್ಲಿ ಬೇರೆ ರಾಜ್ಯದ ರಾಜಕೀಯ ಪಕ್ಷಗಳು ತಮ್ಮ ರಾಜ್ಯದ ಬಗ್ಗೆ ತೀವ್ರವಾದ ಹೋರಾಟ ನಡೆಸಿದರೆ ಕರ್ನಾಟಕ ಮೌನವಾಗಿದೆ. ಮೌನವನ್ನು ಮುರಿದು ಲೋಕಸಭೆಯಲ್ಲಿ ಕನ್ನಡ ಡಿಂಡಿಮ ಬಾರಿಸಲು ಕನ್ನಡವನ್ನು ಮೊಳಗಿಸಲು ವಾಟಾಳ್ ನಾಗರಾಜ್ ಅವರು ಚುನಾವಣಾ ಕಣಕ್ಕಿಳಿದಿದ್ದಾರೆ.

ಹೋರಾಟ ಅನಿವಾರ್ಯವಾಗಿದೆ
ಕರ್ನಾಟಕವನ್ನು ಅನೇಕ ಸಮಸ್ಯೆಗಳು ಕಾಡುತ್ತಿವೆ. ಕಾವೇರಿ, ಮಹಾದಾಯಿ, ಮೇಕೆದಾಟು, ಕನ್ನಡಿಗರಿಗೆ ಉದ್ಯೋಗ ಮುಂತಾದ ಸಮಸ್ಯೆಗಳ ಬಗ್ಗೆ ಹೋರಾಟ ಅನಿವಾರ್ಯ ಎಂದು ವಾಟಾಳ್ ನಾಗರಾಜ್ ಹೇಳಿದ್ದು ಅದಕ್ಕಾಗಿ ಲೋಕಸಭಾ ಚುನಾವಣಾ ಕಣಕ್ಕಿಳಿದಿದ್ದಾರೆ.

ಅಭ್ಯರ್ಥಿಗಳು ಅಂತಿಮ
ಏಪ್ರಿಲ್ 18ರಂದು ನಡೆಯುವ ಚುನಾವಣೆಗೆ ನಾಮಪತ್ರವನ್ನು ಸಲ್ಲಿಸಲು ಮಂಗಳವಾರ ಕೊನೆಯ ದಿನ. ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ತೇಜಸ್ವಿಸೂರ್ಯ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಬಿ.ಕೆ.ಹರಿಪ್ರಸಾದ್ ಕಣದಲ್ಲಿದ್ದಾರೆ.












Click it and Unblock the Notifications