ಕನ್ನಡ ವಿರೋಧಿ ಭೂತ ಸುಟ್ಟು ವಾಟಾಳ್ ಪ್ರತಿಭಟನೆ
ಬೆಂಗಳೂರು, ಮೇ. 14: ನಮ್ಮ ನೆಲದಲ್ಲೇ ಇದ್ದು ನಮ್ಮ ನೀರನ್ನು ಕುಡಿದು, ನಮ್ಮ ಭಾಷೆಯ ವಿರುದ್ಧ ಹೋರಾಟ ಮಾಡುತ್ತಿರುವ ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ಸರ್ಕಾರ ಕೂಡಲೇ ರಾಷ್ಟ್ರೀಕರಣ ಮಾಡಬೇಕೆಂದು ಕನ್ನಡ ಚಳುವಳಿ ಪಕ್ಷದ ನಾಯಕ ವಾಟಾಳ್ ನಾಗರಾಜ್ ಆಗ್ರಹಿಸಿದ್ದಾರೆ.[ಕನ್ನಡ ಮಾಧ್ಯಮ- ಸುಪ್ರೀಂ ತೀರ್ಪು ಸ್ವಾಗತಾರ್ಹ: ಕುಸ್ಮಾ]
ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಮೇ.14 ಬುಧವಾರದಂದು ಕನ್ನಡ ಒಕ್ಕೂಟದ ಮುಖಂಡರು ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಕನ್ನಡ ವಿರೋಧಿ ನಿಲುವು ಖಂಡಿಸಿ, ಕನ್ನಡ ವಿರೋಧಿ ಭೂತವನ್ನು ಸುಡುವ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು.[ಸುಪ್ರೀಂ ತೀರ್ಪಿನಲ್ಲಿ ಏನಿದೆ]
ಅನುದಾನ ರಹಿತ ಖಾಸಗಿ ಶಿಕ್ಷಣ ಸಂಸ್ಥೆಗಳ ಕನ್ನಡ ವಿರೋಧಿ ನಿಲುವನ್ನು ಖಂಡಿಸಿ ಇಂದು ಸಾಂಕೇತಿಕವಾಗಿ ಪ್ರತಿಭಟಿಸಿದ್ದೇವೆ. ಜುಲೈ 5 ರಂದು ಕರ್ನಾಟಕ ಬಂದ್ ಮಾಡಿ ಉಗ್ರವಾಗಿ ಪ್ರತಿಭಟನೆ ಮಾಡಲಿದ್ದೇವೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು.
ಪ್ರತಿಭಟನೆಯ ನೇತೃತ್ವವನ್ನು ಡಾ.ರಾಜ್ಕುಮಾರ್ ಅಭಿಮಾನಿ ಸಂಘದ ಅಧ್ಯಕ್ಷ ಸಾ.ರಾ.ಗೋವಿಂದು,ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಧ್ಯಕ್ಷ ಎನ್.ಮೂರ್ತಿ, ಕನ್ನಡ ಸೇನೆಯ ರಾಜ್ಯಾಧ್ಯಕ್ಷ ಕೆ.ಆರ್.ಕುಮಾರ್, ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಶಿವರಾಮೇಗೌಡ, ಕಾರ್ಯಾಧ್ಯಕ್ಷ ಪ್ರವೀಣ್ಕುಮಾರ್ ಶೆಟ್ಟಿ ವಹಿಸಿದ್ದರು.