ಮಹಾದಾಯಿ ನೀರು ಹಂಚಿಕೆ ವಿವಾದ: ಕನ್ನಡಪರ ಸಂಘಟನೆಗಳ ಪ್ರತಿಭಟನೆ
ಬೆಂಗಳೂರು, ಡಿಸೆಂಬರ್ 28 : ಕಳಸಾ ಬಂಡೂರಿ, ಮಹಾದಾಯಿ ನದಿ ನೀರು ಹಂಚಿಕೆ ಇತ್ಯರ್ಥಕ್ಕೆ ಒತ್ತಾಯಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ವಾಟಾಳ್ ನಾಗರಾಜ್, ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದ್ ನೇತೃತ್ವದಲ್ಲಿ ಗುರುವಾರ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿ ಪ್ರತಿಭಟನೆ ನಡೆಯಿತು.
ಸಂದರ್ಭದಲ್ಲಿ ವಾಟಾಳ್ ನಾಗರಾಜ್ ಮಾತನಾಡಿ, ಕಳಸಾ-ಬಂಡೂರಿ, ನದಿ ನೀರು ಹಂಚಿಕೆ ವಿವಾದಕ್ಕೆ ಪರಿಹಾರ ದೊರೆಯುವವರೆಗೂ ಹೋರಾಟ ಮುಂದುವರಿಯುತ್ತದೆ ಎಂದರು.

ಮೈಸೂರ್ ಬ್ಯಾಂಕ್ ವೃತ್ತದಲ್ಲಿ ನಡೆಯುತ್ತಿರುವ ಕರಾಳ ದಿನಾಚರಣೆಗೆ ಕಪ್ಪು ಜೀಪಿನಲ್ಲಿ ಕಪ್ಪು ಪ್ಯಾಂಟ್ ಮತ್ತು ಕಪ್ಪು ಶರ್ಟ್ ನಲ್ಲಿ ಆಗಮಿಸಿದ ವಾಟಾಳ್ ನಾಗರಾಜ್ ಮಾತನಾಡಿ, ಬಿಜೆಪಿ, ಕಾಂಗ್ರೆಸ್,ಜೆಡಿಎಸ್ ರಾಜಕೀಯ ಮಾಡುತ್ತಿದೆ. ನಮ್ಮದು ರಾಜಕೀಯ ಅಲ್ಲ ಎಂದರು.
ಕನ್ನಡ ಒಕ್ಕೂಟ ಉತ್ತರ ಕರ್ನಾಟಕದ ಪರವಾಗಿದೆ. ಕನ್ನಡ ಒಕ್ಕೂಟ, ರೈತರು ಒಂದಾಗಿದ್ದೇವೆ. ನಮ್ಮ ಕೇಂದ್ರದ ಮಂತ್ರಿಗಳು ರಾಜೀನಾಮೆ ನೀಡಬೇಕು. ಜನವರಿ 3ರಂದು ನೆಲಮಂಗಲದಲ್ಲಿ ರಾಷ್ಟ್ರೀಯ ರಸ್ತೆ ಬಂದ್ ಮಾಡಲಾಗುತ್ತದೆ. ಅಂದು ಕನ್ನಡಪರ ಸಂಘಟನೆಯ ಒಂದು ಲಕ್ಷ ಮಂದಿ ಕಾರ್ಯಕರ್ತರು ಸೇರಲಿದ್ದಾರೆ ಎಂದು ತಿಳಿಸಿದರು.
ಕರವೇ ಪ್ರವೀಣ್ ಶೆಟ್ಟಿ ಮತ್ತು ಶಿವರಾಮೇಗೌಡ ನೇತೃತ್ವದಲ್ಲಿ ಮೈಸೂರು ಬ್ಯಾಂಕ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ಕಪ್ಪು ಬಟ್ಟೆ ಪ್ರದರ್ಶಿಸಿ ಕರಾಳ ದಿನ ಆಚರಿಸಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ರಸ್ತೆ ಮಧ್ಯೆ ಕುಳಿತು ಪ್ರತಿಭಟಿಸಿದ ವಾಟಾಳ್ ಗೆ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಸಾ.ರಾ. ಗೋವಿಂದ್, ಪ್ರವೀಣ್ ಶೆಟ್ಟಿ, ಶಿವರಾಮೇಗೌಡ ಜತೆಯಾದರು.












Click it and Unblock the Notifications